ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ನಲ್ಲಿರುವ ಸೇನಾ ಕಛೇರಿ ಮೇಲೆ ಭಾನುವಾರ ನಡೆದ ಭೀಕರ ಉಗ್ರ ದಾಳಿಗೆ ಹುತಾತ್ಮರಾದ ಯೋಧರ ಸಂಖ್ಯೆ 20 ಕ್ಕೇರಿದೆ. ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೂವರು ಯೋಧರು ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದಾರೆ.
ಉರಿ ಸೆಕ್ಟರ್ನಲ್ಲಿ ಇರುವ ಆರ್ಮಿ ಬ್ರಿಗೇಡ್ ಸೇನಾ ಕಚೇರಿ ಆವರಣಕ್ಕೆ ಭಾನುವಾರ ಬೆಳಗ್ಗೆ ನುಗ್ಗಿದ ಉಗ್ರರು ಮನಸೋಇಚ್ಛೆ ಗುಂಡಿನ ದಾಳಿ ನಡೆಸಿದರು. ಇದರ ಪರಿಣಾಮವಾಗಿ ಗುಂಡಿನಚಕಮಕಿಯಲ್ಲಿ 17 ಭಾರತೀಯ ಯೋಧರು ಹುತಾತ್ಮರಾಗಿದ್ದರು. ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳಿಂದ ಉಗ್ರರು ಏಕಾಏಕಿ ದಾಳಿ ನಡೆಸಿದ ಪರಿಣಾಮ ಕ್ಯಾಂಪ್ನಲ್ಲಿ ಬೆಂಕಿ ಆವರಿಸಿದ್ದು ಯೋಧರು ಸಾವನ್ನಪ್ಪುವಂತಾಯಿತು. ಈ ಸಂದರ್ಭ ಕೆಲ ಯೋಧರು ಗಂಭೀರವಾಗಿ ಗಾಯಗೊಂಡಿದ್ದರು. ಯೋಧರು ನಾಲ್ವರು ಉಗ್ರರನ್ನು ಹೊಡೆದುರುಳಿಸಿದ್ದು, ಇನ್ನಷ್ಟು ಉಗ್ರರು ಅಡಗಿರುವ ಶಂಕೆ ಇದ್ದು, ಕಾರ್ಯಾಚರಣೆ ಮುಂದುವರೆಸಿದ್ದಾರೆ.
ಗಂಭೀರ ಗಾಯಗಳಾಗಿರುವ ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವು ಯೋಧರ ಸ್ಥಿತಿ ಗಂಭೀರವಾಗಿದೆ. ಚಿಕಿತ್ಸೆ ಮುಂದುವರಿಸಲಾಗುತ್ತಿದೆ ಎಂದು ಆಸ್ಪತ್ರೆ ವೈದ್ಯರು ಹೇಳಿದ್ದಾರೆ.
ಉರಿ ದಾಳಿ ಪ್ರಕರಣಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ಭಯೋತ್ಪಾದಕರ ಕೃತ್ಯಕ್ಕೆ ವಿಶ್ವಸಂಸ್ಥೆ, ಅಮೇರಿಕಾ ಸೇರಿದಂತೆ ಎಲ್ಲರೂ ಖಂಡಿಸಿದ್ದಾರೆ.
ಭಯೋತ್ಪಾದಕರಿಂದ ವಶ ಪಡಿಸಿಕೊಳ್ಳಲಾದ ಹಲವು ಶಸ್ತ್ರಾಸ್ತ್ರಗಳಲ್ಲಿ ಪಾಕಿಸ್ತಾನಿ ಮೊಹರುಗಳಿದ್ದು, ಮೂಲಗಳ ಪ್ರಕಾರ ಈ ದಾಳಿ ಸಂಪೂರ್ಣವಾಗಿ ವಿದೇಶೀ ಭಯೋತ್ಪಾದಕರಿಂದ ನಡೆದಿದ್ದು ಅವರೆಲ್ಲರೂ ಜೈಶ್-ಎ-ಮೊಹಮ್ಮದ್ ಸಂಘಟನೆಗೆ ಸೇರಿದವರು ಎಂದು ಸೇನಾ ಕಾರ್ಯಾಚರಣೆಗಳ ಮಹಾ ನಿರ್ದೇಶಕ (ಡಿಜಿಎಂಒ) ರಣಬೀರ್ ಸಿಂಗ್ ಹೇಳಿದ್ದಾರೆ.
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಈ ದುಷ್ಕೃತ್ಯವನ್ನು ಖಂಡಿಸಿದ್ದು, ಪಾಕಿಸ್ಥಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವುದು ಖೇದಕರ. ಈ ಕೃತ್ಯದ ಹಿಂದೆ ಪಾಕಿಸ್ಥಾನದ ಕೈವಾಡವಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದಿದ್ದಾರೆ.
ಪ್ರಧಾನಿ ಮೋದಿಯವರು ಈ ಘಟನೆಯನ್ನು ಖಂಡಿಸಿದ್ದು, ಭಯೋತ್ಪಾದಕ ದಾಳಿಯನ್ನು ಖಂಡಿಸುತ್ತೇನೆ. ದಾಳಿಯ ಹಿಂದಿರುವವರನ್ನು ಸುಮ್ಮನೆ ಬಿಡಲಾರೆವು. ಶಿಕ್ಷೆಯಿಂದ ಅವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.