ಬೆಂಗಳೂರು: ಮತದಾರರ ಪಟ್ಟಿಯಿಂದ ಮತದಾರರ ಸಾವಿರಾರು ಹೆಸರುಗಳನ್ನು ಸಾಮೂಹಿಕವಾಗಿ ಡಿಲೀಟ್ ಮಾಡಲಾಗಿದೆ ಎಂದು ಆರೋಪಿಸಿ, ಗುರುವಾರ ಕರ್ನಾಟಕ ಬಿಜೆಪಿ ಘಟಕ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ. ಕೆಲವು ಅಧಿಕಾರಿಗಳು ಆಡಳಿತಾರೂಢ ಕಾಂಗ್ರೆಸ್-ಜೆಡಿಎಸ್ ಪಕ್ಷದ ಏಜೆಂಟ್ಗಳಂತೆ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ಆರೋಪ ಮಾಡಿದೆ.
ಮುಖ್ಯ ಚುನಾವಣಾ ಅಧಿಕಾರಿಗೆ ಪತ್ರ ಬರೆದಿರುವ ಬಿಜೆಪಿ, ”ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಮತ್ತು ಬೇಕಂತಲೇ ಕಾರಣವಿಲ್ಲದೆ ಕೆಲವು ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಟ್ಟಿದ್ದಾರೆ, ಆಡಳಿತರೂಢ ಮೈತ್ರಿ ಪಕ್ಷಕ್ಕೆ ಸಹಾಯ ಮಾಡಲು ಅವರು ಹೀಗೆ ಮಾಡಿದ್ದಾರೆ’ ಎಂದು ಆರೋಪಿಸಿದೆ.
ಹಿಂದಿನ ಅದೇ ವಿಳಾಸದಲ್ಲಿ ವಾಸಿಸುತ್ತಿದ್ದರೂ ಕೂಡ ಮತದಾರರ ಪಟ್ಟಿಯಿಂದ ಹೆಸರನ್ನು ಕೈಬಿಡಲಾಗಿದೆ ಎಂದಿರುವ ಬಿಜೆಪಿ, ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಸೂಚಿಸಿದೆ. ಅಧಿಕಾರಿಗಳು ಕರ್ತವ್ಯಕ್ಕೆ ಮೋಸವೆಸಗಿದ್ದಾರೆ, ಅಂತಹವರ ವಿರುದ್ಧ ಕಠಿಣ ಕ್ರಮವನ್ನು ಜರುಗಿಸದೇ ಹೋದರೆ ಚುನಾವಣಾ ಆಯೋಗದಿಂದ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ನಿರೀಕ್ಷಿಸುವುದು ಸಾಧ್ಯವಿಲ್ಲ ಎಂದಿದೆ.
ವಿಧಾನಸಭಾ ಚುನಾವಣೆಯ ಸಂದರ್ಭದಲ್ಲೂ ಇಂತಹ ಸಾಮೂಹಿಕ ಡಿಲೀಟ್ ಕಾರ್ಯಗಳು ನಡೆದಿವೆ, ಆಗಲೂ ಚುನಾವಣಾ ಆಯೋಗ ಕ್ರಮಕೈಗೊಂಡಿಲ್ಲ, ಇದರಿಂದ ಅಧಿಕಾರಿಗಳಿಗೆ ಉತ್ತೇಜನ ದೊರಕಿ ಲೋಕಸಭಾ ಚುನಾವಣೆಯಲ್ಲೂ ಅದನ್ನೇ ಮುಂದುವರೆಸಿದ್ದಾರೆ ಎಂದು ಆರೋಪಿಸಿದೆ.
ಅಕ್ರಮ ಎಸಗಿದ ಅಧಿಕಾರಿಗಳ ವಿರುದ್ಧ ನ್ಯಾಯಾಲಯದ ಮೆಟ್ಟಿಲನ್ನೂ ಏರಲಿದ್ದೇವೆ, ಮರು ಚುನಾವಣೆ ನಡೆಸಿ ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದವರಿಗೆ ಮತ್ತೆ ಮತದಾನ ಮಾಡುವ ಅವಕಾಶವನ್ನು ನೀಡಬೇಕು ಎಂದು ಬಿಜೆಪಿ ಆಗ್ರಹಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.