ನವದೆಹಲಿ: ಐಐಟಿ ಪ್ರವೇಶ ಪರೀಕ್ಷೆಯನ್ನು ಬರೆಯಲು ಬಡ ಮಕ್ಕಳಿಗೆ ಉಚಿತ ತರಬೇತಿಯನ್ನು ನೀಡುವ “ಸೂಪರ್ 30” ಕಾರ್ಯಕ್ರಮದ ಸ್ಥಾಪಕ ಆನಂದ್ ಕುಮಾರ್ ಅವರು ದೆಹಲಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗಾಗಿ ತಿಂಗಳಲ್ಲಿ ಒಂದು ತರಗತಿಯನ್ನು ನಡೆಸಲು ಒಪ್ಪಿಗೆ ನೀಡಿದ್ದಾರೆ. ಈ ಬಗ್ಗೆ ದೆಹಲಿ ಶಿಕ್ಷಣ ಸಚಿವ ಮನೀಶ್ ಸಿಸೋಡಿಯಾ ಅವರು ಮಾಹಿತಿ ನೀಡಿದ್ದಾರೆ.
“ಆನಂದ್ ಕುಮಾರ್ ಅವರು ದೆಹಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಒಂದು ತರಗತಿ ನಡೆಸಲು ಒಪ್ಪಿಕೊಂಡಿದ್ದಾರೆ ಎಂಬ ವಿಷಯವನ್ನು ಹಂಚಿಕೊಳ್ಳಲು ನನಗೆ ಸಂತೋಷವಾಗುತ್ತಿದೆ. ಇದು ನಮ್ಮ ಶಾಲೆಗಳ 11, 12 ನೇ ತರಗತಿ ವಿದ್ಯಾರ್ಥಿಗಳಿಗೆ ಆನ್ಲೈನ್, ವರ್ಚುವಲ್ ತರಗತಿಯಾಗಲಿದೆ” ಎಂದು ಮನೀಶ್ ಸಿಸೋಡಿಯಾ ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ.
“ನಾನೂ ಸರ್ಕಾರಿ ಶಾಲೆಯಲ್ಲಿಯೇ ಶಿಕ್ಷಣವನ್ನು ಪಡೆದುಕೊಂಡವನು. ಸರ್ಕಾರಿ ಶಾಲೆ ಮತ್ತು ಖಾಸಗಿ ಶಾಲೆಗಳ ನಡುವಿನ ಅಂತರ ನಿಧಾನವಾಗಿ ಹೆಚ್ಚಾಗುತ್ತಾ ಹೋಗುತ್ತಿದೆ. ಇದರಿಂದ ಬಡ ವಿದ್ಯಾರ್ಥಿಗಳಿಗೆ ಕಷ್ಟವಾಗುತ್ತಿದೆ. ಆದರೆ ಇಂದು ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗೆ ಸಮಾನವಾಗಿ ಬೆಳವಣಿಗೆ ಕಾಣುತ್ತಿರುವುದನ್ನು ನೋಡಿ ನನಗೆ ತುಂಬಾ ಸಂತೋಷವಾಗುತ್ತಿದೆ” ಎಂದು ಆನಂದ್ ಕುಮಾರ್ ಹೇಳಿದ್ದಾರೆ.
ಬಿಹಾರದವರಾದ ಆನಂದ್ ಕುಮಾರ್ ತಮ್ಮ ‘ಸೂಪರ್ 30’ ಮೂಲಕ ಹಲವಾರು ಬಡ ವಿದ್ಯಾರ್ಥಿಗಳು ಐಐಟಿ ಪ್ರವೇಶಿಸುವಂತೆ ಮಾಡಿದ್ದಾರೆ. ಒಂದು ನಯಾಪೈಸೆ ಪಡೆಯದೆ ಅವರು ನೀಡುವ ಕೋಚಿಂಗ್ ಬಡ ಮಕ್ಕಳ ಪಾಲಿಗೆ ಸಂಜೀವಿನಿಯಾಗಿ ಕೆಲಸ ಮಾಡುತ್ತಿದೆ. ಇವರ ಜೀವನಾಧಾರಿತ ಚಿತ್ರವೂ ಬಾಲಿವುಡಿನಲ್ಲಿ ನಿರ್ಮಾಣಗೊಂಡಿದೆ. ನಟ ಹೃತಿಕ್ ರೋಷನ್ ಇದರಲ್ಲಿ ಅಭಿನಯಿಸಿದ್ದಾರೆ. ದೆಹಲಿ, ಗುಜರಾತ್ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಈ ಸಿನಿಮಾವನ್ನು ತೆರಿಗೆ ಮುಕ್ತವಾಗಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.