ನವದೆಹಲಿ: ದಶಕಗಳಷ್ಟು ಹಳೆಯದಾದ ಅಯೋಧ್ಯಾ ವಿವಾದದ ಬಗ್ಗೆ ಐತಿಹಾಸಿಕ ತೀರ್ಪನ್ನು ನೀಡಿರುವ ಭಾರತದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗಯ್ ಅವರು ನವೆಂಬರ್ 17ಕ್ಕೆ ನಿವೃತ್ತರಾಗಲಿದ್ದಾರೆ. ನಿವೃತ್ತಿಯಾಗುವುದಕ್ಕೂ ಮುನ್ನ ಅವರು ನಾಲ್ಕು ಪ್ರಮುಖ ವಿಷಯಗಳ ಬಗೆಗಿನ ತೀರ್ಪನ್ನು ಪ್ರಕಟಿಸಲಿದ್ದಾರೆ.
ರಾಜಕೀಯವಾಗಿ ಅತ್ಯಂತ ಸೂಕ್ಷ್ಮ ಪ್ರಕರಣವಾದ ರಫೆಲ್ ಒಪ್ಪಂದದ ವಿರುದ್ಧ ಸಲ್ಲಿಸಲಾದ ಅರ್ಜಿಯ ಕುರಿತು ತೀರ್ಪು ಪ್ರಕಟಿಸಲಿದ್ದಾರೆ. ಮಾಜಿ ಕೇಂದ್ರ ಸಚಿವ ಯಶವಂತ್ ಸಿನಗಹಾ, ಅರುಣ್ ಶೌರಿ ಮತ್ತು ವಕೀಲ ಪ್ರಶಾಂತ್ ಭೂಷಣ್ ಅವರು ರಫೆಲ್ ವಿರುದ್ಧ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ರಂಜನ್ ಗೋಗಯ್, ನ್ಯಾಯಾಧೀಶ ಎಸ್.ಕೆ ಕೌಲ್ ಮತ್ತು ನ್ಯಾ.ಕೆಎಂ ಜೋಸೆಫ್ ಅವರನ್ನೊಳಗೊಂಡ ನ್ಯಾಯಪೀಠ ತೀರ್ಪು ಪ್ರಕಟಿಸಲಿದೆ.
ಪ್ರಧಾನಿ ನರೇಂದ್ರ ಮೋದಿ ಅವರನ್ನು ಸುಪ್ರೀಂಕೋರ್ಟ್ ‘ಚೌಕಿದಾರ್ ಚೋರ್ ಹೇ’ ಎಂದು ಹೇಳಿದೆ ಎನ್ನುವ ಮೂಲಕ ರಾಹುಲ್ ಗಾಂಧಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ದೊಡ್ಡ ಮಟ್ಟದ ವಿವಾದವನ್ನು ಸೃಷ್ಟಿಸಿದ್ದರು. ಇದರ ವಿರುದ್ಧ ದೆಹಲಿ ಸಂಸದೆ ಮೀನಾಕ್ಷಿ ಲೇಖಿ ಅವರು ರಾಹುಲ್ ವಿರುದ್ಧ ಸುಪ್ರೀಂ ಮೊರೆ ಹೋಗಿದ್ದರು. ಈ ಪ್ರಕರಣದ ತೀರ್ಪನ್ನೂ ಗೋಗಯ್ ನಿವೃತ್ತಿಗೂ ಮುನ್ನ ಪ್ರಕಟಿಸುವ ನಿರೀಕ್ಷೆ ಇದೆ.
ಶಬರಿಮಲೆಗೆ ಮಹಿಳಾ ಪ್ರವೇಶದ ಬಗ್ಗೆ ಹಿಂದೆ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪಿನ ಬಗ್ಗೆ ಮರುಶೀಲನಾ ಅರ್ಜಿ ಸಲ್ಲಿಕೆಯಾಗಿದೆ. ಇದರ ಬಗ್ಗೆಯೂ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ.
ಮಾತ್ರವಲ್ಲದೇ, ಭಾರತದ ಮುಖ್ಯ ನ್ಯಾಯಮೂರ್ತಿ ಕಚೇರಿಯನ್ನು ಮಾಹಿತಿ ಹಕ್ಕು ಕಾಯ್ದೆ (ಆರ್ಟಿಐ) ವ್ಯಾಪ್ತಿಗೆ ಒಳಪಡಿಸಬೇಕೇ ಎಂಬ ಬಗ್ಗೆ ಐದು ನ್ಯಾಯಾಧೀಶರ ಸಂವಿಧಾನ ಪೀಠವು ತೀರ್ಪು ನೀಡಲಿದೆ. ಅದು ಕೂಡ ಗೋಗಯ್ ಅವರ ನಿವೃತ್ತಿಗೂ ಮುನ್ನವೇ ಪ್ರಕಟಗೊಳ್ಳುವ ನಿರೀಕ್ಷೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.