ನವದೆಹಲಿ: ರಾಜ್ಯಸಭೆಯಲ್ಲಿ ಪೌರತ್ವ (ತಿದ್ದುಪಡಿ) ಮಸೂದೆ ಅಂಗೀಕಾರದೊಂದಿಗೆ ಕೋಟ್ಯಾಂತರ ವಂಚಿತ ಮತ್ತು ಸಂತ್ರಸ್ಥರ ಕನಸುಗಳು ನನಸಾಗಿದೆ. ಪೀಡಿತ ಜನರ ಘನತೆ ಮತ್ತು ಸುರಕ್ಷತೆಯನ್ನು ಖಾತ್ರಿಪಡಿಸಿಕೊಳ್ಳುವ ಪ್ರಧಾನಿ ನರೇಂದ್ರ ಮೋದಿಯವರ ಸಂಕಲ್ಪಕ್ಕೆ ಧನ್ಯವಾದಗಳು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದ್ದಾರೆ.
“ಪೀಡಿತ ಜನರಿಗೆ ಘನತೆ ಮತ್ತು ಸುರಕ್ಷತೆಯನ್ನು ಖಾತರಿಪಡಿಸುವ ಸಂಕಲ್ಪಕ್ಕಾಗಿ ನರೇಂದ್ರ ಮೋದಿಜಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾದಗಳು” ಎಂದು ಶಾ ಟ್ವೀಟ್ ಮಾಡಿದ್ದಾರೆ.
ಪಾಕಿಸ್ಥಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ಥಾನದ ಮುಸ್ಲಿಮೇತರ ನಿರಾಶ್ರಿತರಿಗೆ ಭಾರತೀಯ ಪೌರತ್ವವನ್ನು ನೀಡಲು ಪ್ರಯತ್ನಿಸುವ ಪೌರತ್ವ ತಿದ್ದುಪಡಿ ಮಸೂದೆ ಅನ್ನು ರಾಜ್ಯಸಭೆಯು ಅಂಗೀಕರಿಸಿದ ಬೆನ್ನಲ್ಲೇ ಬಿಜೆಪಿ ರಾಷ್ಟ್ರಧ್ಯಕ್ಷರು ತಮ್ಮ ಹೇಳಿಕೆಯನ್ನು ಹೊರಹಾಕಿದ್ದಾರೆ.
ಈ ಮಸೂದೆಯು ವಿರೋಧ ಪಕ್ಷಗಳ ತೀವ್ರ ಪ್ರತಿರೋಧದ ಮಧ್ಯೆ ಅಂಗೀಕಾರಗೊಂಡಿದೆ. ಮಸೂದೆಯ ಸ್ವರೂಪವನ್ನು ಆಕ್ಷೇಪಿಸಿದ್ದ ಪ್ರತಿಪಕ್ಷಗಳು ಈ ಮಸೂದೆ ಮುಸ್ಲಿಂ ಸಮುದಾಯದ ವಿರುದ್ಧವಾಗಿದೆ ಎಂದು ಆರೋಪ ಮಾಡಿದ್ದವು.
ಆರೋಪವನ್ನು ತಿರಸ್ಕರಿಸಿರುವ ಸರ್ಕಾರ ಈ ಮಸೂದೆಯು ದೇಶದಲ್ಲಿ ವಾಸಿಸುವ ಮುಸ್ಲಿಂ ಸಮುದಾಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಮಸೂದೆಯನ್ನು ಮೇಲ್ಮನೆಯಲ್ಲಿ ಶಾ ಅವರು ಬುಧವಾರ ಮಂಡಿಸಿದರು. ಇದನ್ನು ಸೋಮವಾರ (ಡಿಸೆಂಬರ್ 9) ಲೋಕಸಭೆ ಅಂಗೀಕರಿಸಲಾಗಿತ್ತು.
ಕೇಂದ್ರ ಸಚಿವ ಪಿಯುಶ್ ಗೋಯಲ್ ಅವರು ಟ್ವೀಟ್ ಮಾಡಿ, “ಈ ಪೌರತ್ವ (ತಿದ್ದುಪಡಿ) ಮಸೂದೆ 2019 ರ ಅಂಗೀಕಾರಕ್ಕೆ ಇಡೀ ರಾಷ್ಟ್ರಕ್ಕೆ ಅಭಿನಂದನೆಗಳು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಸಮರ್ಥ ನಾಯಕತ್ವದಲ್ಲಿ, ಭಾರತವು ಮಾನವೀಯ ಮೌಲ್ಯಗಳನ್ನು ಮತ್ತು ಕಿರುಕುಳಕ್ಕೊಳಗಾದವರಿಗೆ ಆಶ್ರಯ ನೀಡುವ ಐತಿಹಾಸಿಕ ನೀತಿಗಳನ್ನು ಎತ್ತಿಹಿಡಿದಿದೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.