ಬೆಂಗಳೂರು: ಬೆಂಗಳೂರಿನ ನಿರ್ಮಾತೃ, ನಾಡಪ್ರಭು ಕೆಂಪೇಗೌಡ ಅವರ 511 ನೇ ಜನ್ಮ ಜಯಂತಿ ಸಂದರ್ಭದಲ್ಲಿ, ಅವರ 78 ಕೋಟಿ ರೂ.ವೆಚ್ಚದ 108 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನೆರವೇರಿಸಿದರು.
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಮೆ ನಿರ್ಮಾಣ ಮತ್ತು 23 ಎಕರೆ ಗಳ ವಿಸ್ತೀರ್ಣದ ಸೆಂಟ್ರಲ್ ಪಾರ್ಕ್ ನಿರ್ಮಾಣಕ್ಕೆ ಇಂದು ಅವರು ಭೂಮಿಪೂಜೆ ನೆರವೇರಿಸಿದರು. ಕೆಂಪೇಗೌಡರ ಮಾದರಿ ಪ್ರತಿಮೆಯನ್ನು ಅನಾವರಣಗೊಳಿಸುವ ಮೂಲಕ, ವಿಶ್ವದ ಅತೀ ಎತ್ತರದ ಕೆಂಪೇಗೌಡ ಪ್ರತಿಮೆ ನಿರ್ಮಾಣಕ್ಕೆ ಚಾಲನೆ ನೀಡಿದರು. ಈ ಪ್ರತಿಮೆ ರಾಜ್ಯದ ಮೂರನೇ ಅತ್ಯಂತ ಎತ್ತರದ ಪ್ರತಿಮೆ ಎಂಬ ಖ್ಯಾತಿಗೂ ಭಾಜನವಾಗಲಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಬೆಂಗಳೂರಿನ ಅಭಿವೃದ್ಧಿಯ ವಿಚಾರಕ್ಕೆ ಬಂದಾಗ ಕೆಂಪೇಗೌಡರು ಹೆಚ್ಚು ಪ್ರಸ್ತುತರಾಗುತ್ತಾರೆ. ಆ ಕಾಲದಲ್ಲೇ ಅವರಿಗಿದ್ದ ದೂರದೃಷ್ಟಿ, ಯೋಜನಾಬದ್ಧ ಬೆಳವಣಿಗೆಯ ಮುನ್ನೋಟದ ಕಾರಣದಿಂದಲೇ ಇಂದು ಬೆಂಗಳೂರು ಈ ಮಟ್ಟಕ್ಕೆ ಬೆಳೆಯುವಂತಾಗಿದೆ ಎಂದು ತಿಳಿಸಿದ್ದಾರೆ. ಜೊತೆಗೆ ನದಿ ಮೂಲಗಳೇ ಇಲ್ಲದ ಬೆಂಗಳೂರಿನಲ್ಲಿ ಅನೇಕ ಕೆರೆಗಳನ್ನು ನಿರ್ಮಿಸಿರುವ ಕೆಂಪೇಗೌಡರು ಇಲ್ಲಿನ ಜನರಿಗೆ ನೀರಿನ ಸೌಕರ್ಯಗಳನ್ನು ಒದಗಿಸಿಕೊಡುವಲ್ಲಿಯೂ ಮಹತ್ವದ ಪಾತ್ರ ವಹಿಸಿದ್ದಾಗಿ ತಿಳಿಸಿದ್ದಾರೆ.
ಕೆಂಪೇಗೌಡರು ಕಟ್ಟಿದ ಬೆಂಗಳೂರಿನ ಸರ್ವತೋಮುಖ ಅಭಿವೃದ್ಧಿಗೆ ರಾಜ್ಯ ಬಿಜೆಪಿ ಸರ್ಕಾರ ಶ್ರಮ ವಹಿಸಿ ಕೆಲಸ ಮಾಡುತ್ತಿದೆ. ಅವರು ಹಾಕಿಕೊಟ್ಟ ಹಾದಿಯಲ್ಲಿ ಬೆಂಗಳೂರನ್ನು ಮತ್ತಷ್ಟು ಬೆಳೆಸುವ ಗುರಿ ನಮ್ಮದಾಗಿದೆ. ಮುಂದಿನ ವರ್ಷದಲ್ಲಿಯೇ ಈ ಪ್ರತಿಮೆ ನಿರ್ಮಾಣ ಮತ್ತು ಅವರ ಅಭಿವೃದ್ಧಿಯ ಬೆಳವಣಿಗೆಗಳ ಕುರಿತ ಸಂಪೂರ್ಣ ಮಾಹಿತಿಯನ್ನು ಹೊತ್ತ ಸೆಂಟ್ರಲ್ ಪಾರ್ಕ್ ಅನ್ನು ಲೋಕಾರ್ಪಣೆ ಮಾಡುವ ಉದ್ದೇಶವಿರುವುದಾಗಿಯೂ ಯಡಿಯೂರಪ್ಪ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ, ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್ ಸೇರಿದಂತೆ ವಿವಿಧ ಮಠಗಳ ಸ್ವಾಮೀಜಿಗಳು, ಶಾಸಕರು, ಸಚಿವರು ಪಾಲ್ಗೊಂಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.