ಬೆಂಗಳೂರು: ಕೊರೋನಾ ಸೋಂಕು ಹರಡಲು ಆರಂಭವಾದಾಗಿನಿಂದ ಒಂದಿಲ್ಲೊಂದು ಮಹತ್ವದ ಹೊಸ ಕಾರ್ಯಗಳನ್ನು ಸರ್ಕಾರ ಅನುಷ್ಠಾನಕ್ಕೆ ತರುತ್ತಿದೆ. ಆ ಮೂಲಕ ಕೊರೋನಾ ನಿಯಂತ್ರಣಕ್ಕೆ ಬೇಕಾದ ಕ್ರಮಗಳನ್ನು ಸರ್ಕಾರ ಕೈಗೊಳ್ಳುತ್ತಿದೆ. ಇದೀಗ ಕೊರೋನಾ ರೋಗಿಗಳಿಗೆ ಅನುಕೂಲವಾಗುವಂತೆ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ಹೆಜ್ಜೆ ಇರಿಸಲು ಮುಂದಾಗಿದ್ದು, ರೋಗಿಗಳ ಸಮಸ್ಯೆಗಳನ್ನು ವಾಟ್ಸಾಪ್ ಮೂಲಕ ತಿಳಿಸಲು ಬೇಕಾದ ಅನುಕೂಲಗಳನ್ನು ಮಾಡಿಕೊಡುವ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಈ ಹೊಸ ಕ್ರಮದ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ನಿನ್ನೆಯಷ್ಟೇ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿದ್ದು, ಆ ಬಳಿಕ ಈ ಮಹತ್ವದ ನಿರ್ಧಾರವನ್ನು ತೆಗೆದೂಕೊಂಡಿದ್ದಾರೆ.
ಸೋಂಕಿತರು ತಮ್ಮ ಸಮಸ್ಯೆಗಳನ್ನು ಹೇಳಲು ಇನ್ನು ಮುಂದೆ ಅಧಿಕಾರಿಗಳಿಗೆ ಕಾಯಬೇಕಾಗಿಲ್ಲ. ಬದಲಾಗಿ ವಿಕ್ಟೋರಿಯಾ, ಬೌರಿಂಗ್, ರಾಜೀವ್ ಗಾಂಧಿ ಆಸ್ಪತ್ರೆಗಳು ರೋಗಿಗಳ ಅನುಕೂಲಕ್ಕೆಂದೇ ಆರಂಭಿಸಲಿರುವ ವಾಟ್ಸಾಪ್ ಸಂಖ್ಯೆಯನ್ನು ಬಳಸಿ, ವಾಟ್ಸಾಪ್ ಮೂಲಕವೇ ಅಧಿಕಾರಿಗಳಿಗೆ ತಮ್ಮ ಸಮಸ್ಯೆಯನ್ನು ತಿಳಿಸಲು ಬೇಕಾದ ವ್ಯವಸ್ಥೆಯನ್ನು ಶೀಘ್ರದಲ್ಲೇ ಜಾರಿಗೊಳಿಸಲಿದೆ. ಈ ದೂರುಗಳನ್ನಾಧರಿಸಿ ಆಸ್ಪತ್ರೆಯ ಅಧೀಕ್ಷಕರು, ಸಚಿವರು, ನೋಡಲ್ ಅಧಿಕಾರಿಗಳು ಪರಿಶೀಲನೆ ನಡೆಸಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಿದ್ದಾರೆ.
ಎಲ್ಲಾ ಸಂದರ್ಭದಲ್ಲಿಯೂ ರೋಗಿಗಳನ್ನು ನೇರವಾಗಿ ಭೇಟಿಯಾಗಿ ರೋಗಿಗಳ ಸಮಸ್ಯೆಗಳನ್ನು ಬಗೆಹರಿಸುವುದು ಕಷ್ಟಸಾಧ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಇಂತಹ ಒಂದು ಕ್ರಮವನ್ನು ತೆಗೆದುಕೊಳ್ಳಲಾಗುತ್ತಿದೆ. ರೋಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆಯೇ ಆತನ ದೂರವಾಣಿ ಸಂಖ್ಯೆಯನ್ನು ಈ ಗ್ರೂಪ್ ಗೆ ಸೇರಿಸಲಾಗುತ್ತದೆ. ಸೋಂಕಿತರ ಕುಟುಂಬಸ್ಥರಿಗೂ ಇದರಲ್ಲಿ ದೂರು ನೀಡುವ ಅವಕಾಶವನ್ನು ಕಲ್ಪಿಸಲಾಗುತ್ತದೆ. ರೋಗಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಆತನನ್ನು ಈ ಗ್ರೂಪ್ ನಿಂದ ತೆಗೆದು ಹಾಕುವ ಮೂಲಕ ಹೊಸ ರೋಗಿಗಳಿಗೆ ಅವಕಾಶ ನೀಡಲಾಗುತ್ತದೆ ಎಂದೂ ಸರ್ಕಾರ ಮಾಹಿತಿ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.