ಬೆಂಗಳೂರು: ಬೆಂಗಳೂರು ಇಂಟರ್ನ್ಯಾಷನಲ್ ಎಕ್ಸಿಬಿಷನ್ ಸೆಂಟರ್ (ಬಿಐಇಸಿ) ನಲ್ಲಿ ಸ್ಥಾಪಿಸಲಾಗಿರುವ ಕೋವಿಡ್ ಕೇರ್ ಸೆಂಟರ್ ಅನ್ನು ಲಕ್ಷಣ ರಹಿತ ಕೊರೋನಾ ರೋಗಿಗಳ ಆರೈಕೆಗೆ ಮುಕ್ತಗೊಳಿಸಲಾಗಿದೆ.
ಈ ಕೇಂದ್ರದಲ್ಲಿ ರೋಗಿಗಳ ಚಿಕಿತ್ಸೆಗೆ ಒಟ್ಟು 10,100 ಹಾಸಿಗೆಗಳನ್ನು ಹೊಂದುವ ಅವಕಾಶವಿದ್ದು, ಇದರಲ್ಲಿ 5 ಸಾವಿರ ಹಾಸಿಗೆಗಳು ರೋಗಿಗಳ ಆರೈಕೆಯ ದೃಷ್ಟಿಯಿಂದ ಈಗಾಗಲೇ ಸಿದ್ಧವಾಗಿರುವುದಾಗಿಯೂ ಮೂಲಗಳು ತಿಳಿಸಿವೆ. ಜೊತೆಗೆ ಸುಮಾರು 1536 ಹಾಸಿಗೆಗಳನ್ನು ಇಂದಿನಿಂದಲೇ ಸೋಂಕಿನ ಲಕ್ಷಣಗಳಿಲ್ಲದ ಕೊರೋನಾ ರೋಗಿಗಳ ಚಿಕಿತ್ಸೆಗೆ ಬಳಕೆ ಮಾಡಬಹುದಾಗಿದೆ ಎಂದೂ ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ.
ಈ ಕೋವಿಡ್ ಕೇರ್ ಸೆಂಟರ್ ನಲ್ಲಿ ರೋಗಿಗಳಿಗೆ ಅಗತ್ಯವಿರುವ ಎಲ್ಲಾ ಸೌಕರ್ಯಗಳನ್ನು ಅಳವಡಿಸಲಾಗಿದೆ. ಪುರುಷರ ಮತ್ತು ಹೆಂಗಸರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆಯನ್ನು ಈ ಸೆಂಟರ್ ನಲ್ಲಿ ಮಾಡಲಾಗಿದೆ. 350 ಮಂದಿ ಒಟ್ಟಿಗೆ ಕುಳಿತು ಆಹಾರ ಸೇವಿಸುವ ವ್ಯವಸ್ಥೆ, ಕುಳಿತುಕೊಳ್ಳಲು ಆಸನದ ವ್ಯವಸ್ಥೆ, ಫ್ಯಾನ್, ಟಿವಿ ಸೇರಿದಂತೆ ಇನ್ನೂ ಅನೇಕ ಸೌಲಭ್ಯಗಳನ್ನು ಈ ಕೇಂದ್ರದಲ್ಲಿ ಕೊರೋನಾ ರೋಗಿಗಳಿಗೆ ಒದಗಿಸಿ ಕೊಡಲಾಗಿದೆ. ದಿನದ 24 ಗಂಟೆಯೂ ವಿದ್ಯುತ್ ಪೂರೈಕೆ ಮಾಡುವುದಕ್ಕೆ ಪೂರಕ ವ್ಯವಸ್ಥೆಗಳನ್ನೂ ಕೈಗೊಳ್ಳಲಾಗಿದೆ. ಜೊತೆಗೆ ಸರ್ಕಾರ ಸೂಚಿಸಿದ ಆಹಾರ ಪಟ್ಟಿಯ ಅನ್ವಯವೇ ರೋಗಿಗಳಿಗೆ ಆಹಾರ ನೀಡಲಾಗುತ್ತದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.
ರೋಗಿಗಳ ನೋಂದಣಿಗಾಗಿ ಪ್ರತ್ಯೇಕ ಕೊಠಡಿ, ಶೀಘ್ರ ಸ್ಪಂದನೆಗಾಗಿ ನಿಯಂತ್ರಣ ಕೊಠಡಿಯನ್ನು ತೆರೆಯಲಾಗಿದೆ. ಈ ಕೇರ್ ಸೆಂಟರ್ನ ನಿರ್ವಹಣೆಗಾಗಿ ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಬಟ್ಟೆಗಳನ್ನು ಸ್ವಚ್ಛಗೊಳಿಸಲು, ಸ್ವಚ್ಛತೆ ಕಾಪಾಡುವುದಕ್ಕೆ ಪೂರಕವಾಗಿ ಅಗತ್ಯ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ. ತುರ್ತು ಸಂದರ್ಭಗಳಲ್ಲಿ ಸೇವೆಗಾಗಿ ಮಾರ್ಷಲ್ಗಳು ಮತ್ತು ಕೆಎಸ್ಆರ್ಪಿ ಹಾಗೂ ಅಗ್ನಿಶಾಮಕ ಸಿಬ್ಬಂದಿಗಳನ್ನು ಸನ್ನದ್ಧರನ್ನಾಗಿರಿಸಲಾಗಿದೆ.
ಬಿಐಇಸಿ ಈ ಕೊರೋನಾ ಕೇರ್ ಸೆಂಟರ್ ನಿರ್ಮಾಣಕ್ಕೆ 11.9 ಕೋಟಿ ರೂ. ಗಳನ್ನು ವೆಚ್ಚ ಮಾಡಿದೆ. ಈ ಕೇಂದ್ರದಲ್ಲಿ ಉಪಯೋಗಿಸಲೆಂದು ಖರೀದಿಸಲಾಗಿರುವ ಸಾಮಾಗ್ರಿಗಳಿಗೆ ಕ್ರಿಮಿನಾಶಕ ಬಳಸಿ ಮರು ಉಪಯೋಗಕ್ಕೆ ಯೋಗ್ಯವನ್ನಾಗಿಸಲಾಗುತ್ತದೆ ಎಂದೂ ರಾಜ್ಯ ಕಂದಾಯ ಸಚಿವ ಆರ್. ಅಶೋಕ್ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಒಟ್ಟು 9 ಕೋವಿಡ್ ಕೇರ್ ಸೆಂಟರ್ಗಳು ಕಾರ್ಯ ನಿರ್ವಹಿಸುತ್ತಿದ್ದು, ಈಗ ಬಿಐಇಸಿ ಸಹ ಕೊರೋನಾ ಕೇರ್ ಸೆಂಟರ್ ಆಗಿ ಪರಿವರ್ತನೆಯಾಗಿದೆ. ಇನ್ನೂ ಕೆಲವು ದಿನಗಳಲ್ಲಿ ನಗರದ ಇನ್ನಷ್ಟು ಕಡೆಗಳಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್ ಅವರು ಮಾಹಿತಿ ನೀಡಿದ್ದಾರೆ. ಜೊತೆಗೆ ಮನೆಯಲ್ಲಿಯೇ ಆರೈಕೆಗೆ ಒಳಗಾಗುವವರಲ್ಲಿಯೂ ತೆಗೆದುಕೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದೂ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.