ನವದೆಹಲಿ: ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ಸುಪ್ರೀಂ ಕೋರ್ಟ್ನ ನ್ಯಾಯಾಧೀಶರಾಗಿದ್ದ ಸಂದರ್ಭದಲ್ಲಿ ತಳೆದಿದ್ದ ಧೋರಣೆ ಬಗ್ಗೆ ತನಿಖೆ ನಡೆಸಲು ಮೂವರು ನ್ಯಾಯಾಧೀಶರ ಸಮಿತಿಯನ್ನು ರಚಿಸಬೇಕೆಂದು ಕೋರಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾ ಮಾಡಿದೆ. ಗೊಗೊಯ್ ಈಗ ರಾಜ್ಯಸಭಾ ಸಂಸದರಾಗಿದ್ದಾರೆ.
ಇಂತಹ ಮನವಿಗಳಿಗೆ ತಲೆಕೆಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ.
ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರನ್ನು ಒಳಗೊಂಡ ನ್ಯಾಯಪೀಠವು ಅರ್ಜಿಯನ್ನು ವಜಾಗೊಳಿಸಿದೆ. ಅಲ್ಲದೇ, “ಅರ್ಜಿದಾರರು ಕಳೆದ ಎರಡು ವರ್ಷಗಳಲ್ಲಿ ವಿಚಾರಣೆಯನ್ನು ನಡೆಸುವಂತೆ ಮನವಿ ಮಾಡಿಕೊಳ್ಳಲಿಲ್ಲ, ಎಲ್ಲದಕ್ಕಿಂತಲೂ ಹೆಚ್ಚಾಗಿ ಈಗ ಗೋಗೊಯ್ ಅವರು ಕಛೇರಿಯಿಂದ ನಿವೃತ್ತರಾಗಿದ್ದಾರೆ. ಹೀಗಾಗಿ ಅರ್ಜಿಗೆ ಮಾನ್ಯತೆ ಇಲ್ಲ” ಎಂದು ಹೇಳಿದೆ.
ಅರುಣ್ ರಾಮಚಂದ್ರ ಹುಬ್ಳಿಕರ್ ಎಂಬುವವರು ಅರ್ಜಿಯನ್ನು ಸಲ್ಲಿಸಿದ್ದರು. ಗೊಗೊಯ್ ಅವರು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿದ್ದಾಗ ಎಸಗಿದ ಲೋಪಗಳ ಬಗ್ಗೆ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದರು.
ರಂಜನ್ ಗೊಗೊಯ್ ಅವರು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಟ್ಟ ಅಲಂಕರಿಸಿದ ಮೊದಲ ಈಶಾನ್ಯ ರಾಜ್ಯದವರಾಗಿದ್ದರು. ದಶಕಗಳಷ್ಟು ಹಳೆಯ ರಾಮ ಮಂದಿರ ವಿವಾದಕ್ಕೆ ತೆರೆ ಎಳೆದ ಕೀರ್ತಿ ಇವರಿಗೆ ಸಲ್ಲುತ್ತದೆ. ಕಳೆದ ವರ್ಷ ನವೆಂಬರ್ 17ರಂದು ಇವರು ನಿವೃತ್ತರಾಗಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.