ಬೆಂಗಳೂರು: ರಾಜ್ಯದ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳ ಬಹು ಕಾಲದ ಕನಸನ್ನು ಸಾಕಾರಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಅವರಿಗೆ ಎನ್ಪಿಎಸ್(ಪಿಂಚಣಿ ಯೋಜನೆ) ನೀಡುವುದಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರು ಗ್ರೀನ್ ಸಿಗ್ನಲ್ ನೀಡಿದ್ದಾರೆ.
ವೈದ್ಯಕೀಯ ಶಿಕ್ಷಣ ಸಚಿವರಾಗಿ ಸುಧಾಕರ್ ಅವರು ಜವಾಬ್ದಾರಿ ವಹಿಸಿಕೊಂಡ ಬಳಿಕ ಇಲಾಖೆಯ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಪಿಂಚಣಿ ಯೋಜನೆ ಜಾರಿಗೆ ಕ್ರಮ ಕೈಗೊಳ್ಳುವಂತೆ ಅವರಿಗೆ ಮನವಿ ಸಲ್ಲಿಸಿದ್ದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದನೆ ನೀಡಿರುವ ಸಚಿವರು ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜು, ದಂತ ವೈದ್ಯಕೀಯ ಕಾಲೇಜುಗಳಿಗೆ ಹೊಂದಿಕೊಂಡಿರುವ ಬೋಧಕ ಆಸ್ಪತ್ರೆಗಳು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಖಾಯಂ ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಅನ್ವಯವಾಗುವಂತೆ ಈ ಯೋಜನೆಯನ್ನು ಅನುಷ್ಠಾನ ಮಾಡಲು ಮುಂದಾಗಿದ್ದಾರೆ.
ಈ ಮನವಿಯನ್ನು ಸಚಿವರು ಮುಖ್ಯಮಂತ್ರಿ ಅವರ ಗಮನಕ್ಕೆ ತಂದಿದ್ದು, ಬಹುಕಾಲದಿಂದ ಇರುವ ಈ ಬೇಡಿಕೆಯನ್ನು ಪೂರೈಸುವಂತೆಯೂ ಮನವಿ ಮಾಡಿದ್ದರು. ಸದ್ಯ ಈ ಪ್ರಸ್ತಾವನೆಗೆ ರಾಜ್ಯ ಹಣಕಾಸು ಇಲಾಖೆ ಅನುಮೋದನೆ ನೀಡಿ ಆದೇಶ ಹೊರಡಿಸಿದೆ. ಆ ಮೂಲಕ ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಪ್ರಾಣ ಒತ್ತೆ ಇಟ್ಟು ದುಡಿದ ವೈದ್ಯಕೀಯ ಸಿಬ್ಬಂದಿಗೆ ನ್ಯಾಯ ಒದಗಿಸಲು ಮುಂದಾಗಿದೆ. 2006 ಎಪ್ರಿಲ್ 1 ರ ನಂತರ ಖಾಯಂ ಆಗಿ ವೃತ್ತಿ ನಡೆಸುತ್ತಿರುವವರಿಗೆ ಈ ಯೋಜನೆ ತಕ್ಷಣದಿಂದಲೇ ಜಾರಿಯಾಗಲಿದೆ ಎಂದೂ ಸಚಿವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.