ಬೆಂಗಳೂರು: ಕೊರೋನಾ ಸಂಕಷ್ಟದ ಈ ನಡುವೆ ಶಿಕ್ಷಣ ಸಹ ಕಂಗೆಟ್ಟಿದೆ. ಶಾಲಾರಂಭವಾಗದೇ ಇರುವುದರಿಂದ ಮಕ್ಕಳು ಸಮಸ್ಯೆ ಅನುಭವಿಸುವಂತಾಗಿದೆ. ಈ ಹಿನ್ನೆಲೆಯಲ್ಲಿ ಕಲಿಕೆ ಮತ್ತು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಲು ಪಂಚಾಯತ್ ಗ್ರಂಥಾಲಯಗಳಿಗೆ ಬನ್ನಿ ಎಂಬ ಹೊಸ ಯೋಜನೆಯೊಂದರ ಅನುಷ್ಠಾನಕ್ಕೆ ಗ್ರಾಮೀಣಾಭಿವೃದ್ಧಿ ಇಲಾಖೆ ಮುಂದಾಗಿದೆ.
ಈ ಹಿನ್ನೆಲೆಯಲ್ಲಿ ನ. 14 ರ ಬಳಿಕ 3 ತಿಂಗಳುಗಳ ಕಾಲ ರಾಜ್ಯದಲ್ಲಿ ಮಕ್ಕಳ ಉತ್ಸವ ನಡೆಸಲು ಪೂರಕ ಕ್ರಮ ಕೈಗೊಳ್ಳುತ್ತಿದೆ. ಈ ಅವಧಿಯಲ್ಲಿ ಗ್ರಂಥಾಲಯ ಕೇಂದ್ರಿತ ಚಟುವಟಿಕೆಗಳಿಗೆ ಅನುಗುಣವಾದ ಕ್ರಿಯಾ ಯೋಜನೆಗಳನ್ನು ಹಾಕಿಕೊಳ್ಳುವಂತೆಯೂ ಈಗಾಗಲೇ ಗ್ರಾಮ ಪಂಚಾಯತ್ಗಳಿಗೆ ಇಲಾಖೆ ಸೂಚನೆಗಳನ್ನು ನೀಡಿದೆ. 6 ರಿಂದ 18 ವರ್ಷಗಳ ಒಳಗಿನ ಮಕ್ಕಳನ್ನು ಗಮನದಲ್ಲಿಟ್ಟುಕೊಂಡು ಈ ಯೋಜನೆಗೆ ರೂಪುರೇಶೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಗ್ರಂಥಾಲಯಗಳಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳುವಂತೆಯೂ ಮಕ್ಕಳಿಗೆ ಪ್ರೇರೇಪಣೆ ನೀಡಲಾಗುತ್ತದೆ ಎಂದು ಇಲಾಖೆ ತಿಳಿಸಿದೆ. ಜೊತೆಗೆ ಗ್ರಂಥಾಲಯಗಳಲ್ಲಿ ಅಗತ್ಯ ಪುಸ್ತಕಗಳನ್ನು ಹೊಂದಿಸಿಕೊಳ್ಳಲು ರಾಜ್ಯ ಮಟ್ಟದ ಅಭಿಯಾನ, ಸಿಬ್ಬಂದಿಗಳಿಗೆ ವಿಶೇಷ ತರಬೇತಿ ನೀಡಲಾಗುತ್ತದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಈ ವಿನೂತನ ಕ್ರಮಕ್ಕೆ ಸಂಬಂಧಿಸಿದಂತೆ ತಜ್ಞರ ಅಭಿಪ್ರಾಯ, ಸಲಹೆ, ಸೂಚನೆಗಳನ್ನು ಪಡೆದುಕೊಳ್ಳಲಾಗುವುದು. ಇದರಲ್ಲಿ ಬಾಲ್ಯ ವಿವಾಹ, ಮಕ್ಕಳ ಕಳ್ಳ ಸಾಗಾಣಿಕೆ, ಬಾಲ ಕಾರ್ಮಿಕ ಪದ್ಧತಿ ವಿರುದ್ಧ ಜಾಗೃತಿ, ಮಕ್ಕಳ ಹಕ್ಕುಗಳ ಬಗ್ಗೆ ತಿಳಿಸಿಕೊಡಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನ. 14 ರಂದು ಮಕ್ಕಳ ವಿಶೇಷ ಗ್ರಾಮ ಸಭೆಯನ್ನು ನಡೆಸಲಾಗುವುದು. ಇದರಲ್ಲಿ ಮಕ್ಕಳ ಸಮಸ್ಯೆಗಳ ಬಗ್ಗೆ ವಿಶೇಷ ಗಮನ ವಹಿಸಲಾಗುವುದು. ಕೊರೋನಾ ಹಿನ್ನೆಲೆಯಲ್ಲಿ ಆಯ್ದ ಮಕ್ಕಳು ಈ ಗ್ರಾಮ ಸಭೆ ಯಲ್ಲಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಮಕ್ಕಳ ಸಮಸ್ಯೆ ತಿಳಿದುಕೊಳ್ಳಲು ಜನ ನಿಬಿಡ ಪ್ರದೇಶಗಳಲ್ಲಿ ಮಕ್ಕಳ ಧ್ವನಿ ಪೆಟ್ಟಿಗೆ ಅಳವಡಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.