ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ, ಕೊರೋನಾ ರೂಂಪಾತರವನ್ನು ತಪ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ.
ಡಿ. 31 ರಾತ್ರಿ ಮತ್ತು ಜ. 1 ರಂದು ಹೊಸ ವರ್ಷದ ಆಚರಣೆಯನ್ನು ನಿಷೇಧಿಸಿ ಈ ಮಾರ್ಗಸೂಚಿ ಪ್ರಕಟಿಸಲಾಗಿದೆ. ಕೊರೋನಾ ಹರಡುವುದನ್ನು ತಡೆಯಲು ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ಎಂದು ಅಧಿಕೃತ ಮೂಲಗಳು ಮಾಹಿತಿ ನೀಡಿವೆ.
ಡಿ. 31 ರ ಸಂಜೆ 6 ಗಂಟೆಯಿಂದ ತೊಡಗಿದಂತೆ ಜ. 1 ರ ಬೆಳಗ್ಗೆ 6 ರ ವರೆಗೆ ಬೆಂಗಳೂರು ನಗರದಾದ್ಯಂತ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಈ ಸಂದರ್ಭದಲ್ಲಿ 5 ಜನರಿಗಿಂತ ಹೆಚ್ಚು ಮಂದಿ ಒಟ್ಟುಗೂಡುವಂತಿಲ್ಲ ಎಂದು ನಗರದ ಪೊಲೀಸ್ ಆಯುಕ್ತ ಕಮಲ್ ಪಂಥ್ ಆದೇಶದಲ್ಲಿ ತಿಳಿಸಿದ್ದಾರೆ.
ಅದರ ನಡುವೆಯೂ ಕೊರೋನಾ ಮಾರ್ಗಸೂಚಿಗಳನ್ನು ಅನುಸರಿಸಿಕೊಂಡು ನಗರದ ಪಬ್ಗಳು, ಬಾರ್ ಆಂಡ್ ರೆಸ್ಟೋರೆಂಟ್ಗಳಲ್ಲಿ ಹೊಸ ವರ್ಷದ ಆಚರಣೆಗೆ ಅವಕಾಶ ನೀಡಲಾಗಿದೆ. ಮೊದಲೇ ಕಾಯ್ದಿರಿಸಿದ ಗ್ರಾಹಕರಿಗೆ ಈ ಅವಕಾಶ ಒದಗಿಸಲಾಗುತ್ತಿದೆ. ಆದರೆ ಕೊರೋನಾ ಮುಂಜಾಗ್ರತಾ ಕ್ರಮಗಳಾದ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಮಾಸ್ಕ್ ಧರಿಸುವುದು ಸೇರಿದಂತೆ ಇನ್ನಿತರ ಅಗತ್ಯ ಎಚ್ಚರಿಕೆಯ ಕ್ರಮಗಳನ್ನು ಅನುಸರಿಸುವುದು ಕಡ್ಡಾಯ ಎಂದು ಈ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಅದರೊಂದಿಗೆ ಪಬ್, ಮಾಲ್, ರೆಸ್ಟೋರೆಂಟ್, ಸ್ಟಾರ್ ಹೋಟೆಲ್ಗಳು ಮೊದಲಾದವುಗಳ ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ಯಾನಿಂಗ್ ವ್ಯವಸ್ಥೆ ಕಡ್ಡಾಯ ಎಂದು ಈ ಮಾರ್ಗಸೂಚಿ ತಿಳಿಸಿದೆ. ಅದರೊಂದಿಗೆ 50% ಜನರಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಬಹುದು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ದೊಡ್ಡ ಮಟ್ಟದಲ್ಲಿ ಜನಸಂದಣಿ ಏರ್ಪಡುವ ಡಿಜೆ ಪಾರ್ಟಿಗಳು, ವಿಶೇಷ ಕಾರ್ಯಕ್ರಮಗಳು, ಸಾರ್ವಜನಿಕ ಸ್ಥಳಗಳಲ್ಲಿ, ವಾಣಿಜ್ಯ ಆವರಣದಲ್ಲಿ ಯಾವುದೇ ರೀತಿಯ ಪ್ರದರ್ಶನಗಳನ್ನು ನಡೆಸುವಂತಿಲ್ಲ ಎಂದು ಈ ಆದೇಶದಲ್ಲಿ ತಿಳಿಸಲಾಗಿದೆ. ಸದ್ಯದ ಮಟ್ಟಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇಳಿಮುಖವಾಗಿದೆ. ಅವುಗಳು ಏರಿಕೆಯಾಗದಂತೆ ತಡೆಯುವ ನಿಟ್ಟಿನಲ್ಲಿ ಈ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ರೋಗ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವುದು ಅತ್ಯಗತ್ಯ ಎಂದು ಕಮಲ್ ಪಂಥ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಗರದ ಡೌನ್ಟೌನ್, ಬ್ರಿಗೇಡ್ ರಸ್ತೆ, ಎಂಜಿ ರೋಡ್ ಸೇರಿದಂತೆ ಇನ್ನಿತರ ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜನರು ಒಟ್ಟುಗೂಡಲು ಅವಕಾಶ ನೀಡಲಾಗುವುದಿಲ್ಲ. ಜನ ಸಂಚಾರ ಮತ್ತು ವಾಹನ ದಟ್ಟಣೆಯ ನಿಯಂತ್ರಣಕ್ಕೂ ಕ್ರಮ ಕೈಗೊಳ್ಳಲಾಗುವುದು ಎಂದು ಪಂಥ್ ತಿಳಿಸಿದ್ದಾರೆ. ಕುಡಿದು ವಾಹನ ಚಲಾಯಿಸಿದಂತೆಯೂ ಪಂಥ್ ಇದೇ ಸಂದರ್ಭದಲ್ಲಿ ಸೂಚಿಸಿದ್ದು, ವಾಹನ ದಟ್ಟಣೆ ನಿಯಂತ್ರಣ ಹಿನ್ನೆಲೆಯಲ್ಲಿ ಪ್ಲೈಓವರ್ ಗಳಲ್ಲಿ 12 ಗಂಟೆಗಳ ಕಾಲ ವಾಹನ ಸಂಚಾರ ನಿಷೇಧ ಮಾಡುವುದಾಗಿ ತಿಳಿಸಿದ್ದಾರೆ. ಜನರು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳ ಜೊತೆಗೆ ತಮ್ಮ ತಮ್ಮ ಮನೆಯಲ್ಲಿ ಹೊಸವರ್ಷ ಆಚರಣೆ ನಡೆಸುವಂತೆಯೂ ಪಂಥ್ ಜನರಲ್ಲಿ ಮನವಿ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.