ಮಂಗಳೂರು : ಆಗಸ್ಟ್ 15 ನಮ್ಮ ಹಿರಿಯರ ತ್ಯಾಗ, ಬಲಿದಾನಗಳಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ನಾವು ನಮ್ಮ ಬದುಕಿನಲ್ಲಿ ಸತ್ಯ, ಅಹಿಂಸೆ, ಪ್ರಾಮಾಣಿಕತೆ, ಕಠಿಣ ಪರಿಶ್ರಮ ಇತ್ಯಾದಿ ಮೌಲ್ಯಗಳನ್ನು ಅಳವಡಿಸಿಕೊಂಡು ಬಾಳಿದಾಗ ಮಾತ್ರ ಈ ಸ್ವಾತಂತ್ರ್ಯಕ್ಕೊಂದು ಅರ್ಥ ಬರುತ್ತದೆ.
ನಾವು ಯಾರೂ ಕೂಡಾ ಅಸಹಾಯಕರಲ್ಲ; ದುರ್ಬಲರಲ್ಲ. ಪ್ರತಿಯೊಬ್ಬರಿಗೂ ಬದುಕಿನಲ್ಲಿ ಅನೇಕ ಅವಕಾಶಗಳು ದೊರಕುತ್ತವೆ. ಈ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಂಡು ಬಾಳನ್ನು ಸಾರ್ಥಕ ಪಡಿಸಿಕೊಳ್ಳಬೇಕು ಎಂದು ನಿವೃತ್ತ ಪ್ರಾಧ್ಯಾಪಕ ಡಾ. ಆರ್. ನರಸಿಂಹ ಮೂರ್ತಿ ಅವರು ಹೇಳಿದರು. ಅವರು ನಗರದ ಶಾರದಾ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ನಡೆದ ಸ್ವಾತಂತ್ರ್ಯ ದಿನೋತ್ಸವ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಶಾರದಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಪ್ರೊ. ಎಂ.ಬಿ. ಪುರಾಣಿಕ್ ಅವರು ಮಾತನಾಡಿ ನಮ್ಮ ವಿದ್ಯಾರ್ಥಿಗಳು ದೈಹಿಕವಾಗಿ, ಮಾನಸಿಕವಾಗಿ, ಬೌದ್ಧಿಕವಾಗಿ, ಆಧ್ಯಾತ್ಮಿಕವಾಗಿ ಶಕ್ತಿಶಾಲಿಗಳಾಗಬೇಕು. ನಾವು ಶಕ್ತಿಶಾಲಿಗಳಾದರೆ ಮಾತ್ರ ನಮ್ಮ ರಾಷ್ಟ್ರ ಶಕ್ತಿಶಾಲಿಯಾಗಬಲ್ಲದು ಎಂದರು.
ವೇದಿಕೆಯಲ್ಲಿ ಆಡಳಿತ ಮಂಡಳಿ ಪದಾಧಿಕಾರಿಗಳಾದ ನ್ಯಾಯವಾದಿ ಶ್ರೀ. ಕೆ.ಎಸ್. ಕಲ್ಲೂರಾಯ, ಶ್ರೀ ಪ್ರದೀಪ್ ಕುಮಾರ್ ಕಲ್ಕೂರ, ಶ್ರೀ ಸೀತಾರಾಮ ಆಚಾರ್, ಶಾರದಾ ಶಿಕ್ಷಣ ಸಂಸ್ಥೆಗಳ ಸಲಹೆಗಾರರಾದ ಡಾ. ಲೀಲಾ ಉಪಾಧ್ಯಾಯ, ಶಾರದಾ ಕಾಲೇಜಿನ ಪ್ರಾಂಶುಪಾಲ ಡಾ. ಬಾಲಕೃಷ್ಣ ಭಾರದ್ವಾಜ್, ಶಾರದಾ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಡಾ. ಡಿ. ಶ್ರೀಪತಿರಾವ್, ಶಾರದಾ ವಿದ್ಯಾಲಯದ ಪ್ರಾಂಶುಪಾಲರಾದ ಶ್ರೀಮತಿ ಸುನೀತ ವಿ. ಮಡಿ, ಎಸ್.ಕೆ.ಡಿ.ಬಿ. ಅಸೋಸಿಯೇಸನ್ನಿನ ಅಧ್ಯಕ್ಷರಾದ ಶ್ರೀ ಸುಧಾಕರ ರಾವ್ ಪೇಜಾವರ ಮೊದಲಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಮೊದಲಿಗೆ ವಿದ್ಯಾರ್ಥಿನಿ ಕು. ಶಿಪ್ರಾ ಅವರು ಸ್ವಾಗತಿಸಿ ಕೊನೆಯಲ್ಲಿ ಗ್ರಿಸ್ಸೆಲ್ ಫೆರ್ನಾಂಡಿಸ್ ವಂದಿಸಿದರು. ರೋಶನ್ ಅಲೆಕ್ಸ್ ಅವರು ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿಗಳಿಂದ ಸ್ವಾತಂತ್ರ್ಯೋತ್ಸವದ ಕುರಿತು ಉಪನ್ಯಾಸ, ರಾಷ್ಟ್ರಭಕ್ತಿಗೀತೆಗಳ ಗಾಯನ ಇತ್ಯಾದಿ ಕಾರ್ಯಕ್ರಮಗಳು ನಡೆದವು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.