ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉತ್ತರ ಕನ್ನಡದ ಪ್ರವಾಹ ಪರಿಸ್ಥಿತಿ ಪರಿಶೀಲನೆಯ ಹಿನ್ನೆಲೆಯಲ್ಲಿ ಇಂದು ಹುಬ್ಬಳ್ಳಿಗೆ ಆಗಮಿಸಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಅವರು ಆರ್ಎಸ್ಎಸ್ ಕಾರ್ಯಾಲಯ ಕೇಶವ್ ಕುಂಜ್ಗೆ ತೆರಳಿ ಹಿರಿಯ ನಾಯಕರನ್ನು ಭೇಟಿ ಮಾಡಿದರು. ಭಾರತ ಮಾತೆ ಮತ್ತು ಆರ್ಎಸ್ಎಸ್ ಸಂಸ್ಥಾಪಕ ಹೆಡ್ಗೇವಾರ್ ಅವರ ಚಿತ್ರಗಳಿಗೆ ಮಾಲಾರ್ಪಣೆ ಮಾಡಿದರು.
ಹಾಗೆಯೇ ಅಮರಗೋಳದಲ್ಲಿರುವ ತಮ್ಮ ತಂದೆ ಎಸ್. ಆರ್. ಬೊಮ್ಮಾಯಿ, ತಾಯಿ ಗಂಗಮ್ಮ ಬೊಮ್ಮಾಯಿ ಅವರ ಸಮಾಧಿಗೆ ನಮಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಊರಿಗೆ ಬರುತ್ತಿದ್ದೇನೆ. ಅವಳಿ ನಗರಗಳ ಮೂಲಸೌಕರ್ಯ ಹೆಚ್ಚಳಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಭರವಸೆ ನೀಡಿದರು. ಕೈಗಾರಿಕೆಗಳನ್ನು ಅಭಿವೃದ್ಧಿ ಮಾಡಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಹಾಗೆಯೇ ನಾಳೆ ನವದೆಹಲಿಗೆ ತೆರಳಿ ಪ್ರಧಾನಿ ಮೋದಿ, ಕೇಂದ್ರ ಸಚಿವ ಅಮಿತ್ ಶಾ, ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಹೇಳಿದರು.
ಆ ಬಳಿಕ ಅಲ್ಲಿಂದ ಪ್ರವಾಹ ಪರಿಸ್ಥಿತಿ ಅವಲೋಕನಕ್ಕೆ ಕಾರವಾರಕ್ಕೆ ತೆರಳಿದರು. ಗಂಗಾವಳಿ ನದಿಯ ನೆರೆಯಿಂದ ಹಾನಿಗೊಳಗಾದ ಕಲ್ಲೇಶ್ವರ ಸೇತುವೆ ಪರಿಶೀಲಿಸಿದರು. ಹಾಗೆಯೇ ಪಶ್ಚಿಮ ಘಟ್ಟದ ಸಾಲಿನ ಹಲವು ವರ್ಷಗಳಿಂದ ಭೂಕುಸಿತವಾಗುತ್ತಿದ್ದು, ಅಲ್ಲಿಗೆ ತಜ್ಞರ ತಂಡ ಕಳುಹಿಸಿ ಪರಿಸ್ಥಿತಿ ಅಧ್ಯಯನ ನಡೆಸುವಂತೆ ಸೂಚಿಸಿದರು. ಆ ಭಾಗದ ಜನರ ತುರ್ತು ಅವಶ್ಯಕತೆಗೆ ಪೂರಕ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.
ಅಂಕೋಲ ಶಿರೂರು ನೆರೆ ಪೀಡಿತ ಪ್ರದೇಶದಲ್ಲಿ ಪರಿಸ್ಥಿತಿ ಅವಲೋಕನ ಮಾಡಿ, ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಸಂತ್ರಸ್ತರಿಗೆ ಧೈರ್ಯ ತುಂಬಿದರು. ಸರ್ಕಾರದಿಂದ ಸೂಕ್ತ ಪರಿಹಾರ ನೀಡುವ ಭರವಸೆಯನ್ನು ಅವರು ವ್ಯಕ್ತಪಡಿಸಿದರು.
ಹಾಗೆಯೇ ಭೂಕುಸಿತದ ತೀವ್ರತೆಗೆ ಸಿಲುಕಿರುವ ಉತ್ತರ ಕನ್ನಡದ ರಸ್ತೆಗಳ ದುರಸ್ತಿಗೆ ಒಟ್ಟು 210 ಕೋಟಿ ರೂ. ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ. ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ರಸ್ತೆಗಳ ದುರಸ್ತಿಗೆ 100 ಕೋಟಿ ರೂ. ಗಳನ್ನು ತಕ್ಷಣ ಬಿಡುಗಡೆ ಮಾಡಲಾಗುತ್ತದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ. ಅರಬೈಲ್ ಘಟ್ಟದಲ್ಲಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಆಗಿರುವ ಭೂಕುಸಿತ ದುರಸ್ತಿಗೆ ರಾಜ್ಯ ಸರ್ಕಾರ 6 ಕೋಟಿ ರೂ. ನೀಡಲಿದೆ. ಚರಂಡಿ ದುರಸ್ತಿಗೆ 4 ಕೋಟಿ ರೂ. ಬಿಡುಗಡೆ ಮಾಡುವುದಾಗಿಯೂ ಅವರು ಹೇಳಿದ್ದಾರೆ.
ಇಂದು ಮುಖ್ಯಮಂತ್ರಿ @BSBommai ರವರು ಅತಿವೃಷ್ಟಿಯಿಂದಾಗಿ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್ ನಲ್ಲಿ ಉಂಟಾದ ಹಾನಿ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ @ShivaramHebbar, ಭಟ್ಕಳ್ ಶಾಸಕ ಸುನೀಲ್ ನಾಯ್ಕ, ಅಧಿಕಾರಿಗಳು ಉಪಸ್ಥಿತರಿದ್ದರು. pic.twitter.com/LUiiWCg5mG
— CM of Karnataka (@CMofKarnataka) July 29, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.