ಬೆಳಗಾವಿ: ಬೆಳಗಾವಿ ನಗರದಲ್ಲಿ ಸುಮಾರು 16.50 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಕ್ರೀಡಾ ಸಮುಚ್ಚಯಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಚಾಲನೆ ನೀಡಿದರು.
2 ಎಕರೆ 14 ಗುಂಟೆ ಜಾಗದಲ್ಲಿ ಒಳಾಂಗಣ ಕ್ರೀಡಾಂಗಣ ಮತ್ತು ಮಹಿಳಾ ಕ್ರೀಡಾ ವಸತಿ ನಿಲಯ ನಿರ್ಮಿಸಲಾಗಿದ್ದು, ಸುಮಾರು 16.50 ಕೋಟಿ ವೆಚ್ಚ ಮಾಡಲಾಗಿದೆ. ಬೆಳಗಾವಿ ಕ್ರೀಡಾ ವಸತಿ ನಿಲಯದಲ್ಲಿ ಕುಸ್ತಿ, ಜುಡೋ, ವಾಲಿಬಾಲ್, ಅಥ್ಲೆಟಿಕ್ ಮತ್ತು ಸೈಕ್ಲಿಂಗ್ಗೆ ತರಬೇತಿ ನೀಡಲಾಗುತ್ತಿದೆ. ಒಳಾಂಗಣ ಕ್ರೀಡಾಂಗಣದ ಕಟ್ಟಡದಲ್ಲಿ ಅಂತರಾಷ್ಟ್ರೀಯ ಗುಣಮಟ್ಟದ ಉಪಕರಣಗಳುಳ್ಳ ಜಿಮ್ ಹಾಲ್, ಜುಡೋ ಹಾಲ್, ಕುಸ್ತಿ ಅಂಕಣಗಳನ್ನು ನಿರ್ಮಿಸಲಾಗಿದ್ದು ಅತ್ಯಾಧುನಿಕ ವ್ಯವಸ್ಥೆ ಒದಗಿಸಲಾಗಿದೆ.
ಸುಮಾರು 2.19 ಕೋಟಿ ವೆಚ್ಚದಲ್ಲಿ ಮಹಿಳಾ ಕ್ರೀಡಾಪಟುಗಳಿಗೆ ವಸತಿ ನಿಲಯ ನಿರ್ಮಾಣ ಮಾಡಲಾಗಿದೆ. ಕ್ರೀಡೆಗೆ ಪ್ರೋತ್ಸಾಹ ನೀಡಬೇಕು. ಈ ಭಾಗದ ಕ್ರೀಡಾಪಟುಗಳಿಗೆ ಹೆಚ್ಚಿನ ಅವಕಾಶ ಸಿಗಬೇಕು ಅನ್ನೋ ದೃಷ್ಟಿಯಿಂದ ಸೌಲಭ್ಯ ಒದಗಿಸಲಾಗಿದೆ. ಸುಮಾರು ಮೂರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕಾಮಗಾರಿಗಳನ್ನ ತ್ವರಿತವಾಗಿ ಪೂರ್ಣಗೊಳಿಸಿ ಇಂದು ಲೋಕಾರ್ಪಣೆಗೊಳಿಸಲಾಯಿತು.
ಬೆಳಗಾವಿ ಜಿಲ್ಲೆಯಾದ್ಯಂತ ಹಲವು ಕ್ರೀಡಾ ಯೋಜನೆಗಳನ್ನು ರೂಪಿಸಲಾಗಿದೆ. ಬೈಲಹೊಂಗಲ ಪಟ್ಟಣದಲ್ಲಿ ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ 2 ಕೋಟಿ ಅನುದಾನ ನೀಡಲಾಗಿದ್ದು, 50 ಕೋಟಿ ಹಣ ಬಿಡುಗಡೆ ಮಾಡಲಾಗಿದೆ. ಸವದತ್ತಿ ತಾಲೂಕು ಕ್ರೀಡಾಂಗಣದ ಅಭಿವೃದ್ಧಿಗೆ 1 ಕೋಟಿ ಹಣ ನೀಡಲಾಗಿದೆ. ಅಲ್ಲದೇ ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಗರಡಿ ಮನೆಗಳ ನಿರ್ಮಾಣ ಹಾಗೂ ವ್ಯಾಯಾಮ ಸಾಮಾಗ್ರಿಗಳ ಪೂರೈಕೆಗಾಗಿ 5 ಕೋಟಿ ಅನುದಾನ ನೀಡಲಾಗಿದ್ದು, ಇದರಲ್ಲಿ ಮೂರೂವರೆ ಕೋಟಿ ಹಣ ಬಿಡುಗಡೆ ಮಾಡಲಾಗಿದೆ.
ಬೆಳಗಾವಿ ಕ್ರೀಡಾ ವಸತಿ ನಿಲಯದಲ್ಲಿ ತರಬೇತಿ ಪಡೆಯುತ್ತಿರುವ ಹಲವರು ರಾಷ್ಟ್ರೀಯ, ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಈ ಭಾಗದ ಪ್ರತಿಭಾನ್ವಿತ ಕ್ರೀಡಾಪಟುಗಳು ಹೆಚ್ಚಿನ ಸಾಧನೆ ಮಾಡಬೇಕೆಂಬ ಸದುದ್ದೇಶದಿಂದ ಅತ್ಯಾಧುನಿಕ ವ್ಯವಸ್ಥೆಯುಳ್ಳ ಕ್ರೀಡಾ ಸಮುಚ್ಚಯ ನಿರ್ಮಿಸಲಾಗಿದ್ದು, ಇದರಿಂದ ಕ್ರೀಡಾಪಟುಗಳಿಗೆ ಅನುಕೂಲ ಆಗಲಿದೆ. ಮುಂದಿನ ಒಲಿಂಪಿಕ್ನಲ್ಲಿ ಕರ್ನಾಟಕದಿಂದ ಹೆಚ್ಚಿನ ಕ್ರೀಡಾಪಟುಗಳು ಭಾಗವಹಿಸಿ, ಪದಕಗಳನ್ನು ಗೆಲ್ಲಬೇಕು. ಆ ನಿಟ್ಟಿನಲ್ಲಿ ಅಮೃತ ಕ್ರೀಡಾ ದತ್ತು ಯೋಜನೆಯಲ್ಲಿ 75 ಪ್ರತಿಭಾನ್ವಿತ ಕ್ರೀಡಾಪಟುಗಳನ್ನು ಆಯ್ಕೆ ಮಾಡಿ ತರಬೇತಿ ನೀಡಲಾಗುತ್ತಿದೆ. ರಾಜ್ಯದಲ್ಲಿ ಕ್ರೀಡೆಯನ್ನು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗಬೇಕೆಂಬ ಕನಸು ಹೊಂದಿದ್ದು, ಆ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ರೂಪಿಸಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು.
ಈ ಒಳಾಂಗಣ ಕ್ರೀಡಾಂಗಣ ಮತ್ತು ಮಹಿಳಾ ಕ್ರೀಡಾಪಟುಗಳ ವಸತಿ ನಿರ್ಮಾಣದ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಿಸುವಲ್ಲಿ ಕೇಂದ್ರ ಸಚಿವರಾಗಿದ್ದ ದಿವಂಗತ ಸುರೇಶ್ ಅಂಗಡಿಯವರ ಪಾತ್ರ ಮಹತ್ವದ್ದಾಗಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಸ್ಮರಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.