ಬೆಂಗಳೂರು: ಭ್ರಷ್ಟಾಚಾರದಿಂದ 2018ರ ಚುನಾವಣೆಯಲ್ಲಿ ಸೋಲು ಕಂಡಿದ್ದ ಕಾಂಗ್ರೆಸ್ಗೆ ಜನರು ಈ ಚುನಾವಣೆಯಲ್ಲೂ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ವಿಶ್ವಾಶ ವ್ಯಕ್ತಪಡಿಸಿದರು.
ಮಲ್ಲೇಶ್ವರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ನ ಭ್ರಷ್ಟಾಚಾರ ಸರಮಾಲೆಯಿಂದ ಜನರು ಚುನಾವಣೆಯಲ್ಲಿ 2018ರಲ್ಲಿ ಆ ಪಕ್ಷವನ್ನು ತಿರಸ್ಕರಿಸಿದ್ದರು. ಆದರೂ ಜೆಡಿಎಸ್ನೊಂದಿಗೆ ಕೈಜೋಡಿಸಿ ಹಿಂಬಾಗಿಲಿನಿಂದ ಸಮ್ಮಿಶ್ರ ಸರ್ಕಾರದಲ್ಲಿತ್ತು. ನಿಂದನೆ, ಸುಳ್ಳು ಆರೋಪ, ಹಿಂಸಾಚಾರ, ಸುಳ್ಳು ಭರವಸೆ, ಒಡೆದಾಳುವ ಮತ್ತು ತುಷ್ಟೀಕರಣದ ರಾಜಕಾರಣವನ್ನು ಕಾಂಗ್ರೆಸ್ ಮುಂದುವರೆಸಿಕೊಂಡು ಬರುತ್ತಿದೆ. ಕಳೆದ 36 ಗಂಟೆಗಳಲ್ಲಿ ಕಾಂಗ್ರೆಸ್ ಪಕ್ಷದ ನಾಯಕರ ನಡವಳಿಕೆ ಮತ್ತು ವರ್ತನೆಗಳು ಇದಕ್ಕೆ ನಿದರ್ಶನವಾಗಿವೆ ಎಂದು ಆರೋಪಿಸಿದರು.
ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಚಿತ್ರವನ್ನು ಹಾಕಿ ‘ಪೇ ಸಿಎಂ’ ಎಂಬುದಾಗಿ ನಿಂದಿಸಿದ್ದಾರೆ. ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ, ಅಸ್ಸಾಂ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಅಂಕಿತಾ ದತ್ತಾಗೆ ಕಿರುಕುಳ ನೀಡಿದ್ದು, ಈ ಕುರಿತು ದೂರು ನೀಡಿರುವ ಅಂಕಿತಾ ದತ್ತಾ ಅವರನ್ನು ಪಕ್ಷ ವಿರೋಧಿ ಚಟುವಟಿಕೆಗಳ ಮೇಲೆ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಲಿಂಗಾಯತ ಮುಖ್ಯಮಂತ್ರಿ ಭ್ರಷ್ಟಾಚಾರ ನಡೆಸಿದ್ದಾರೆಂದು ಸಿದ್ದರಾಮಯ್ಯ ಹೇಳಿದ್ದಾರೆ ಎಂದು ವಿವರಿಸಿದರು.
ಪ್ರಶ್ನೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರನ್ನು ಎಂ.ಬಿ.ಪಾಟೀಲ್ ಥಳಿಸಿದ್ದಾರೆ. ಇನ್ನು, ಸಮಾಜ ಕಲ್ಯಾಣ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಸಿದ ಎಚ್.ಆಂಜನೇಯ, ರೂ. 2,500 ಕೋಟಿ ಹೌಸಿಂಗ್ ಹಗರಣದಲ್ಲಿ ಹೆಸರಿಸಲಾಗಿರುವ ಎಂ.ಕೃಷ್ಣಪ್ಪ, ಆರ್.ವಿ.ದೇವರಾಜ್, ಅಕ್ರಮ ಮರಳು ಸಾಗಣೆ ಪ್ರಕರಣದಲ್ಲಿರುವ ಎಚ್.ಸಿ. ಮಹದೇವಪ್ಪ ಪುತ್ರ ವಿರುದ್ಧ ತನಿಖೆ ನಡೆಯುತ್ತಿದ್ದರೂ ಮತ್ತೆ ಟಿಕೆಟ್ ನೀಡಲಾಗಿದೆ ಎಂದು ಹೇಳಿದರು.
ಸಿದ್ದರಾಮಯ್ಯ ಸರ್ಕಾರದಲ್ಲಿ ಸರಣಿ ಭ್ರಷ್ಟಾಚಾರ ಮತ್ತು ಹಗರಣಗಳು ನಡೆದಿವೆ. ಕಾಂಗ್ರೆಸ್ ನಾಯಕ ವಿರುದ್ಧದ ಪ್ರಕರಣಗಳನ್ನು ಮುಚ್ಚಿಹಾಕಲು ಅಧಿಕಾರದಲ್ಲಿದ್ದ ಸಿದ್ದರಾಮಯ್ಯ ಲೋಕಾಯುಕ್ತವನ್ನು ದುರ್ಬಲಗೊಳಿಸಿ ಭ್ರಷ್ಟಾಚಾರ ನಿಗ್ರಹ ದಳ ರಚಿಸಿದರು. ಅರ್ಕಾವತಿ ಬಡಾವಣೆ ಪ್ರಕರಣ, ಬೆಂಗಳೂರಿನಲ್ಲಿ ಉಕ್ಕು ಸೇತುವೆ ನಿರ್ಮಾಣಕ್ಕೆ ಲಂಚ, ಅನ್ನ ಭಾಗ್ಯ, ಶಿಕ್ಷಕರ ನೇಮಕಾತಿ ಹಗರಣ ಅವರ ಸರ್ಕಾರದಲ್ಲೇ ನಡೆದಿತ್ತು. ಸಮಾಜವಾದಿ ನಾಯಕ ಎನ್ನುವ ಸಿದ್ದರಾಮಯ್ಯ 70 ಲಕ್ಷ ರೂ. ಮೌಲ್ಯದ ಹ್ಯುಬ್ಲೆಟ್ ಕೈಗಡಿಯಾರ ಧರಿಸಿದ್ದರು ಎಂದು ಅವರು ಟೀಕಿಸಿದರು.
ಸಿದ್ದರಾಮಯ್ಯ ಹಿಂದೂ ವಿರೋಧಿ ಮತ್ತು ಒಡೆದಾಳುವ ರಾಜಕೀಯ ಮಾಡುತ್ತಿದ್ದಾರೆ. ಲಿಂಗಾಯತರನ್ನು, ಹಿಂದೂಗಳನ್ನು ವಿಭಜಿಸಲು ಸದಾ ಪ್ರಯತ್ನಿಸುತ್ತಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಕೋವಿಡ್ ಅವಧಿಯಲ್ಲೂ ಕಾಂಗ್ರೆಸ್ ಪಕ್ಷವು ಸುಳ್ಳುಗಳನ್ನು ಹಬ್ಬಿಸುತ್ತಿತ್ತು ಎಂದು ಆಕ್ಷೇಪಿಸಿದರು.
ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ರಾಮನಗರ ಮತ್ತು ಕೊಳ್ಳೇಗಾಲದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದಾರೆ. ಅಕ್ರಮ ಹಣ ವರ್ಗಾವಣೆಯಲ್ಲಿ ಅವರ ವಿರುದ್ಧ ಪ್ರಕರಣವಿದ. ಸೌರ ವಿದ್ಯುತ್ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಅವರಿಗೆ ನೋಟಿಸ್ ನೀಡಿದ್ದು, ಸರ್ಕಾರ ಅವರ ವಿರುದ್ಧ ತನಿಖೆಗೆ ಸೂಚಿಸಿದೆ ಎಂದು ವಿವರಿಸಿದರು.
ಭ್ರಷ್ಟಾಚಾರ ಮತ್ತು ಅಪರಾಧವನ್ನು ಕೇಂದ್ರೀಯ ನಾಯಕತ್ವದಿಂದ ಹಿಡಿದು ರಾಜ್ಯ ನಾಯಕತ್ವದವರೆಗೆ ಕಾಂಗ್ರೆಸ್ ಪ್ರತಿನಿಧಿಸುತ್ತದೆ. ದೆಹಲಿಯಲ್ಲಿನ ಕಾಂಗ್ರೆಸ್ ನಾಯಕರಿಗೆ ಕರ್ನಾಟಕವನ್ನು ಎ.ಟಿ.ಎಂ ಆಗಲು ಬಿಜೆಪಿ ಬಿಡುವುದಿಲ್ಲ. ಅಭಿವೃದ್ಧಿ ಮತ್ತು ಎಲ್ಲರಿಗೂ ಅವಕಾಶ ಘೋಷಣೆಯೊಂದಿಗೆ ಬಿಜೆಪಿ ಚುನಾವಣೆ ಎದುರಿಸಲಿದೆ ಎಂದು ಅವರು ಹೇಳಿದರು.
ನಾಳೆ ರಾಜ್ಯಕ್ಕೆ ಅಮಿತ್ ಶಾ, ಜೆ.ಪಿ.ನಡ್ಡಾ
ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ನಾಳೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಅಮಿತ್ ಶಾ ಅವರು ಮೈಸೂರು, ಹಾಸನ, ಸಕಲೇಶಪುರ ಮತ್ತು ಹುಬ್ಬಳ್ಳಿಯಲ್ಲಿ ನಿಗದಿಯಾಗಿರುವ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಜೆ.ಪಿ. ನಡ್ಡಾ ಅವರು ಬೆಂಗಳೂರು, ಚಿಕ್ಕಬಳ್ಳಾಪುರ, ಹೊಸಕೋಟೆ, ದೇವನಹಳ್ಳಿ, ನೆಲಮಂಗಲದಲ್ಲಿ ಆಯೋಜಿಸಿರುವ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ರಾಜೀವ್ ಚಂದ್ರಶೇಖರ್ ತಿಳಿಸಿದರು.
ಡಾ. ತೇಜಸ್ವಿನಿ ಗೌಡ ಮಾತನಾಡಿ, ಕರ್ನಾಟಕ, ಸುಸಂಸ್ಕೃತಿಗೆ ಹೆಸರಾಗಿದೆ. ಕಾಂಗ್ರೆಸ್ ನಾಯಕರ ಹೇಳಿಕೆಗಳು ಮತ್ತು ನಡವಳಿಕೆಗಳು ಅವರ ಕೀಳು ಅಭಿರುಚಿಯನ್ನು ತೋರುತ್ತವೆ ಎಂದು ಟೀಕಿಸಿದರು.
ರಾಜ್ಯ ಬಿಜೆಪಿ ವಕ್ತಾರರು ಹಾಗೂ ವಿಧಾನಪರಿಷತ್ ಸದಸ್ಯೆ ಡಾ. ತೇಜಸ್ವಿನಿ ಗೌಡ, ರಾಜ್ಯ ಮುಖ್ಯ ವಕ್ತಾರ ಎಂ.ಜಿ. ಮಹೇಶ್ ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.