ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ ನಡುವಿನ ಸಮ್ಮಿಲನದಿಂದ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡತಕ್ಕ ಫಲಿತಾಂಶವನ್ನು ನೀಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು.
ನಗರದ ರ್ಯಾಡಿಸನ್ ಬ್ಲೂ ಹೋಟೆಲ್ನಲ್ಲಿ ಇಂದು ನಡೆದ ಬಿಜೆಪಿ ಮತ್ತು ಜೆಡಿಎಸ್ ಸಮನ್ವಯ ಸಭೆಯಲ್ಲಿ ಮಾತನಾಡಿದ ಅವರು, 2006ರಲ್ಲಿ ಸಹ ಬಿಜೆಪಿ ಮತ್ತು ಜೆಡಿಎಸ್ ನಡುವೆ ಹೊಂದಾಣಿಕೆ ಆಗಿತ್ತು. ಆದರೆ, ಸೈದ್ಧಾಂತಿಕ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಜೀ ಅವರ ಸಮ್ಮತಿ ಇರಲಿಲ್ಲ ಎಂದು ನೆನಪಿಸಿದರು.
ಪ್ರಧಾನಿ ನರೇಂದ್ರ ಮೋದಿ ಜೀ ಅವರ ಜೊತೆಜೊತೆಗೇ ಮಾನ್ಯ ದೇವೇಗೌಡ ಜೀ ಅವರೂ ಈ ಬಾರಿ ಸಮ್ಮಿಲನಕ್ಕೆ ಆಶೀರ್ವಾದ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಜೀ ಅವರು ಈ ದೇಶದ ಅಭಿವೃದ್ಧಿ, ಭದ್ರತೆ ದೃಷ್ಟಿಯಿಂದ ನಮಗೆ ಆಶೀರ್ವಾದ ಮಾಡಿದ್ದು, ಇದರಿಂದ ಆನೆ ಬಲ ಬಂದಂತಾಗಿದೆ. ರಾಜ್ಯಕ್ಕೂ ಮುಂದಿನ ದಿನಗಳಲ್ಲಿ ಒಳಿತಾಗಲಿದೆ ಎಂದು ವಿಶ್ವಾಸದಿಂದ ನುಡಿದರು.
ಬಿಜೆಪಿ ಮತ್ತು ಜೆಡಿಎಸ್ ಜೊತೆಗೂಡಿ ಕೆಲಸ ಮಾಡಲು ಒಪ್ಪಿಕೊಂಡು ಹಲವು ತಿಂಗಳೇ ಕಳೆದಿದೆ. ನಾನು ಕೂಡ ಎಚ್.ಡಿ.ಕುಮಾರಸ್ವಾಮಿ ಅವರ ಜೊತೆಗೆ ಮೈಸೂರು- ಕೊಡಗು, ಮಂಡ್ಯ ಲೋಕಸಭಾ ಕ್ಷೇತ್ರಗಳಲ್ಲಿ ಜಂಟಿ ಪ್ರವಾಸ ಮಾಡಿದ್ದೇನೆ. ಇದರ ಪರಿಣಾಮವಾಗಿ ರಾಜ್ಯದ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರಿಗೆ ಸ್ಪಷ್ಟ ಸಂದೇಶ ತಲುಪಿದೆ. ಕರ್ನಾಟಕದಲ್ಲಿ ಸಾಕಷ್ಟು ಹೊಂದಾಣಿಕೆ ರಾಜಕಾರಣ ನಡೆದಿದೆ. ಬಿಜೆಪಿ ಮತ್ತು ಜೆಡಿಎಸ್, ಜೆಡಿಎಸ್-ಕಾಂಗ್ರೆಸ್ ನಡುವೆ ಹಲವಾರು ಬಾರಿ ಹೊಂದಾಣಿಕೆ ಆಗಿದೆ. ಆದರೆ, ಈಗ ಬಿಜೆಪಿ ಮತ್ತು ಜೆಡಿಎಸ್ ಹೊಂದಾಣಿಕೆಗೆ ರಾಜ್ಯದ ಪ್ರಜ್ಞಾವಂತ ಮತದಾರರು ಸಂಪೂರ್ಣ ಆಶೀರ್ವಾದ ಕೊಡುತ್ತಿದ್ದಾರೆ ಎಂದು ವಿಶ್ಲೇಷಿಸಿದರು.
ಮೈಸೂರು, ಮಂಡ್ಯದಲ್ಲಿ ಕಾರ್ಯಕರ್ತರ ಉತ್ಸಾಹ ಗಮನಿಸಿದ್ದೇನೆ. ತಳಮಟ್ಟದಲ್ಲೂ ಮುಖಂಡರು, ಕಾರ್ಯಕರ್ತರು ಒಗ್ಗಟ್ಟಾಗಿ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ನುಡಿದ ಅವರು, ಈ ಚುನಾವಣೆಯಲ್ಲಿ ಎರಡೂ ಪಕ್ಷಗಳ ಮುಖಂಡರ ಜವಾಬ್ದಾರಿ ಹೆಚ್ಚಾಗಿದೆ. ಈ ಸಮ್ಮಿಲನವನ್ನು ಜನರು ಗಂಭೀರವಾಗಿ ಪರಿಗಣಿಸಿದ್ದಾರೆ. ಎರಡೂ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ಒಗ್ಗಟ್ಟಾಗಿ ವಿಶ್ವಾಸದಿಂದ ದುಡಿದು ಬಿಜೆಪಿ- ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸಬೇಕಿದೆ ಎಂದು ಮನವಿ ಮಾಡಿದರು.
ಬಿಜೆಪಿ ಸ್ನೇಹಿತರು ನಮ್ಮನ್ನು ಆತ್ಮೀಯವಾಗಿ ಕಂಡಿದ್ದಾರೆ. 2006ರಲ್ಲಿ ಅನಿವಾರ್ಯ ಕಾರಣಗಳಿಂದ ಮೈತ್ರಿ ಸರಕಾರ ದೀರ್ಘ ಕಾಲ ಮುಂದುವರೆಯಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು. ಬಳಿಕ 2018ರಲ್ಲಿ ನಾವು- ನೀವು ಮೈತ್ರಿ ಸರಕಾರ ಮಾಡಿದ್ದರೆ ಇವತ್ತು ಸಹ ನಮ್ಮ ಸರಕಾರವೇ ಇರುತ್ತಿತ್ತೇನೋ ಎಂದು ಅಭಿಪ್ರಾಯಪಟ್ಟರು. ಈ ಹಿಂದೆ ನಡೆದುದೆಲ್ಲ ವಿಧಿಯ ಆಟಗಳು ಎಂದು ಅವರು ಹೇಳಿದರು.
ಇವತ್ತು ಕಳೆದ ವಿಧಾನಸಭೆ ಚುನಾವಣೆ ಬಳಿಕ ಎರಡೂ ಪಕ್ಷಗಳ ಕಾರ್ಯಕರ್ತರಲ್ಲಿ ಸ್ವಲ್ಪ ನಿರಾಶೆ ಉಂಟಾಗಿದೆ. ಯಾಕೆ ಹೀಗಾಗಿದೆ? ನಮ್ಮಲ್ಲಿನ ಒಳಜಗಳ, ವಿಶ್ವಾಸದ ಕೊರತೆಯಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂತು ಎಂಬ ಚರ್ಚೆಗಳು ಮುಖಂಡರಲ್ಲಿ ನಡೆದಿವೆ. ನಂತರ ಬಿಜೆಪಿ ಶಕ್ತಿ ವೃದ್ಧಿ, ಪ್ರಧಾನಿಯವರ ನಿಸ್ವಾರ್ಥ ಸೇವೆ, ದೇಶದ ಅಭಿವೃದ್ಧಿಗೆ ಭದ್ರ ಬುನಾದಿಯನ್ನು ಹಾಕುವ ದೃಷ್ಟಿಯಿಂದ ಹಿರಿಯ ನಾಯಕ ಅಮಿತ್ ಶಾ ಅವರ ಆಹ್ವಾನದ ಮೇರೆಗೆ ಅವರನ್ನು ಭೇಟಿ ಮಾಡಿದೆ. ಬಳಿಕ ಪರಸ್ಪರ ಮೈತ್ರಿಯ ಹೊಂದಾಣಿಕೆ ಆಗಿದೆ ಎಂದು ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.