ಬೆಂಗಳೂರು: ಕರ್ನಾಟಕ ರಾಜ್ಯದ ಆಡಳಿತರೂಢ ಕಾಂಗ್ರೆಸ್ ಪಕ್ಷವು ವಾಲ್ಮೀಕಿ ನಿಗಮದ ಹಣವನ್ನು ದುರುಪಯೋಗ ಪಡಿಸಿಕೊಂಡು ಭ್ರಷ್ಟಾಚಾರ ಎಸಗಿರುವುದು ಹಾಗೂ ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದ (ಮುಡಾ) ಖಾಲಿ ನಿವೇಶನಗಳನ್ನು ಕಾನೂನಾತ್ಮಕವಾಗಿ ಹರಾಜು ಮಾಡದೆ ಭ್ರಷ್ಟಾಚಾರ ಮಾಡಿರುವುದನ್ನು ಖಂಡಿಸಿ ಇಂದು ಸಂಸತ್ ಭವನದ ಆವರಣದಲ್ಲಿ ಜನಪ್ರತಿನಿಧಿಗಳ ಪ್ರತಿಭಟನೆ ನಡೆಯಿತು. ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಲಾಯಿತು.
ಕರ್ನಾಟಕ ರಾಜ್ಯದಿಂದ ಆಯ್ಕೆಗೊಂಡ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಹಾಗೂ ಜಾತ್ಯತೀತ ಜನತಾದಳ ಪಾರ್ಟಿಗಳ (ಜೆಡಿಎಸ್) ಎರಡೂ ಸದನಗಳ ಸಂಸದರು ದೆಹಲಿಯಲ್ಲಿ ಕರ್ನಾಟಕ ಸರ್ಕಾರದ ಅಕ್ರಮಗಳನ್ನು ಪ್ರತಿಭಟಿಸುವ ಮೂಲಕ ಸರಕಾರದ ಕಾರ್ಯವೈಖರಿಯನ್ನು ಖಂಡಿಸಿದರು. ಅಲ್ಲದೆ, ಕರ್ನಾಟಕದ ಮುಖ್ಯಮಂತ್ರಿಗಳ ರಾಜೀನಾಮೆಗೆ ಒತ್ತಾಯಿಸಿದ್ದಾರೆ.
‘ಕರ್ನಾಟಕದ ದಲಿತರ ಹಣವನ್ನು ಕಾಂಗ್ರೆಸ್ ಪಕ್ಷ ಲೂಟಿ ಮಾಡುತ್ತಿದೆ; ರಾಹುಲ್ ಗಾಂಧಿ ಎಲ್ಲಿದ್ದಾರೆ ಎಲ್ಲಿದ್ದಾರೆ’ ಎಂಬರ್ಥವುಳ್ಳ ಹಿಂದಿ ಘೋಷಣೆ ಕೂಗಿದರು. ‘ಕರ್ನಾಟಕದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ; ರಾಹುಲ್ ಗಾಂಧಿ ಎಲ್ಲಿದ್ದಾರೆ ಎಲ್ಲಿದ್ದಾರೆ’ ಎಂದು ಕೇಳಿದರು. ‘ಹಠಾವೋ, ಹಠಾವೋ ಭ್ರಷ್ಟ ಮುಖ್ಯಮಂತ್ರಿ ಕೋ ಹಠಾವೋ’ ಎಂಬ ಘೋಷಣೆಯನ್ನೂ ಕೂಗಿದರು.
‘ರಿಟರ್ನ್ ದಿ ಲೂಟೆಡ್ ಮನಿ ಬಿಲಾಂಗಿಂಗ್ ಟು ಎಸ್ಟಿ ಕಮ್ಯುನಿಟಿ’, ಮುಡಾ ಹಗರಣದಲ್ಲಿ ಕೋಟಿ ಕೋಟಿ ನುಂಗಿದ ಸಿದ್ದರಾಮಯ್ಯನವರಿಗೆ ಧಿಕ್ಕಾರ- ಇವೇ ಮೊದಲಾದ ಪ್ಲಕಾರ್ಡ್ ಹಿಡಿದು ಸಂಸದರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಸಂಸದ ಜಗದೀಶ ಶೆಟ್ಟರ್ ಅವರು ಮಾಧ್ಯಮಗಳ ಜೊತೆ ಮಾತನಾಡಿ, ಮುಖ್ಯಮಂತ್ರಿಗಳು ಮೂಡಾ ಹಗರಣ ಕುರಿತು ಸದನದಲ್ಲಿ ಮಾತನಾಡಲು ಅವಕಾಶ ಕೊಟ್ಟಿಲ್ಲ. ಇದು ಹಗರಣ ಮುಚ್ಚಿ ಹಾಕುವ ಕೆಲಸ. ನಮ್ಮ ಶಾಸಕರು ಅಹೋರಾತ್ರಿ ಧರಣಿ ಮಾಡಿದ್ದಾರೆ. ನಾವೂ ಇಲ್ಲಿ ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಸಂಸದ ಗೋವಿಂದ ಕಾರಜೋಳ ಅವರು ಮಾತನಾಡಿ, ವಾಲ್ಮೀಕಿ ನಿಗಮದಲ್ಲಿ 187 ಕೋಟಿಯ ಹಗರಣ ನಡೆದಿದೆ. ನಕಲಿ ಖಾತೆಗಳಿಗೆ ಹಣ ಹೋಗಿದೆ. ಹಣಕಾಸು ಇಲಾಖೆ ನಿರ್ವಹಿಸುವ ಮುಖ್ಯಮಂತ್ರಿಗಳೇ ಇದಕ್ಕೆ ಜವಾಬ್ದಾರರು. ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಪಿ.ಸಿ.ಮೋಹನ್ ಅವರು ಮಾತನಾಡಿ, ವಾಲ್ಮೀಕಿ ನಿಗಮದ ಹಗರಣ- ಮೂಡಾ ಹಗರಣದಲ್ಲಿ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯನವರು ರಾಜೀನಾಮೆ ಕೊಡಬೇಕೆಂದು ಒತ್ತಾಯಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.