ಬೆಂಗಳೂರು: ಪಕ್ಷವನ್ನು ಸದೃಢಪಡಿಸಲು ನಿರಂತರ ಶ್ರಮಿಸುತ್ತಿರುವ ಲಕ್ಷಾಂತರ ಕಾರ್ಯಕರ್ತರಿಗೆ ಪಕ್ಷದೊಳಗಿನ ಕೆಲವು ನಾಯಕರ ಬಹಿರಂಗ ಹೇಳಿಕೆಗಳಿಂದ ನೋವಾಗುತ್ತಿದೆ ಎಂದು ರಾಜ್ಯ ಬಿಜೆಪಿ ಸಹ ಉಸ್ತುವಾರಿ ಸುಧಾಕರ ರೆಡ್ಡಿ ಅವರು ತಿಳಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕಳೆದ ಕೆಲವು ವಾರಗಳಿಂದ, ಕೆಲವು ದಿನಗಳಿಂದ ಕೆಲವರು ಪಕ್ಷದ ಬಗ್ಗೆ ತಮ್ಮ ಹೇಳಿಕೆಗಳನ್ನು ಮಾಧ್ಯಮಗಳ ಮೂಲಕ ನೀಡುತ್ತಿರುವುದನ್ನು ಗಮನಿಸಿದ್ದೇನೆ. ಮೋದಿಜೀ ಅವರ ನಾಯಕತ್ವದಲ್ಲಿ ಪಕ್ಷವನ್ನು ದೃಢಪಡಿಸಲು ಕಾರ್ಯಕರ್ತರು ಶ್ರಮಿಸುತ್ತಿದ್ದಾರೆ. ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ಸಿನ ಸರಕಾರದ ಜನವಿರೋಧಿ ನೀತಿಗಳು, ಅಸಮರ್ಪಕ ಆಡಳಿತದ ವಿರುದ್ಧ ಹೋರಾಟಗಳನ್ನು ನಡೆಸಲಾಗುತ್ತಿದೆ ಎಂದು ವಿವರಿಸಿದರು.
ಜವಾಬ್ದಾರಿಯುತ, ಪ್ರಮುಖ ಪಕ್ಷವಾಗಿ, ಸದೃಢ ವಿಪಕ್ಷವಾಗಿ ನಾವು ಕಾರ್ಯನಿರ್ವಹಿಸಬೇಕಿದೆ. ಸರಕಾರದ ವೈಫಲ್ಯಗಳನ್ನು ಮತ್ತು ತಪ್ಪು ನೀತಿಗಳನ್ನು ನಾವು ಜನರ ಮುಂದಿಡಬೇಕಾಗಿದೆ. ದೇಶದ ಏಳೆಂಟು ರಾಜ್ಯಗಳಲ್ಲಿ ರಾಜ್ಯಾಧ್ಯಕ್ಷರ ಚುನಾವಣೆ ಪಕ್ಷದ ನಿಯಮಾವಳಿಯಂತೆ ನಡೆದಿದೆ. ಕರ್ನಾಟಕ ಮತ್ತು ದಕ್ಷಿಣದ ರಾಜ್ಯಗಳಲ್ಲಿ ನಿಗದಿಯಂತೆ ಮತದಾರರ ಪಟ್ಟಿ ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿಸಿದರು.
ಕರ್ನಾಟಕದಲ್ಲಿ ಹಲವಾರು ಜಿಲ್ಲಾಧ್ಯಕ್ಷರ ಆಯ್ಕೆ ಈಗಾಗಲೇ ನಡೆದಿದೆ. ಚುನಾವಣಾ ಅಧಿಕಾರಿ ಲಕ್ಷ್ಮಣ್ ಅವರ ನೇತೃತ್ವದಲ್ಲಿ ರಾಜ್ಯಾಧ್ಯಕ್ಷರ ಆಯ್ಕೆ ನಡೆಯಲಿದೆ. ಸಮಸ್ಯೆಗಳನ್ನು ಮಾತುಕತೆ ಮೂಲಕ ಬಗೆಹರಿಸಲು ನಮ್ಮ ಕೇಂದ್ರ ನಾಯಕತ್ವ ಶಕ್ತಿ ಹೊಂದಿದೆ. ಪಕ್ಷದ ಹಿತದೃಷ್ಟಿಯಿಂದ ಪಕ್ಷದೊಳಗಿನ ವೇದಿಕೆಯಲ್ಲಿ ಮಾತನಾಡಲು ಅವಕಾಶವಿದೆ ಎಂದರು.
ಭ್ರಷ್ಟ ಸರಕಾರದ ವಿರುದ್ಧ ಹೋರಾಟ ಮುಂದುವರೆಸಬೇಕು. ಪಕ್ಷದ ಶಿಸ್ತು ಮೀರಿ ಮಾತನಾಡಬಾರದು ಎಂದು ತಿಳಿಸಿದರು. ಶಾಂತಿಯುತ ವರ್ತನೆ ಇರಲಿ. ಇದನ್ನು ‘ಎ’ ಅಥವಾ ‘ಬಿ’ ಗೆ ಒಬ್ಬ ಕಾರ್ಯಕರ್ತನಾಗಿ ಮನವಿ ಮಾಡುವುದಾಗಿ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.