ನವದೆಹಲಿ: ಹಿಂದುತ್ವ ನಾಯಕ ದಿವಂಗತ ವಿ ಡಿ ಸಾವರ್ಕರ್ ಅವರನ್ನು ಅವಹೇಳನ ಮಾಡಿದ ಪ್ರಕರಣದ ವಿಚಾರಣೆಯನ್ನು ಸಂಕ್ಷಿಪ್ತವಾಗಿ ಆಲಿಸದೆ ಅದನ್ನು ವಿವರವಾದ ಸಮನ್ಸ್ ವಿಚಾರಣೆಯಾಗಿ ಪರಿವರ್ತಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿದ್ದ ಮನವಿಗೆ ಸಾವರ್ಕರ್ ಅವರ ಸಂಬಂಧಿ ಹಾಗೂ ಪ್ರಕರಣದ ದೂರುದಾರ ಸಾತ್ಯಕಿ ಅಶೋಕ್ ಸಾವರ್ಕರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮಾರ್ಚ್ 2023ರಲ್ಲಿ ಲಂಡನ್ನಲ್ಲಿ ಮಾಡಿದ ಭಾಷಣದ ವೇಳೆ ರಾಹುಲ್ ಅವರು ವಿ ಡಿ ಸಾವರ್ಕರ್ ಅವರ ನಿಲುವಿನ ಬಗ್ಗೆ ಅವಹೇಳನ ಮಾಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.
ವಿ ಡಿ ಸಾವರ್ಕರ್ ಮತ್ತು ಅವರ ಗುಂಪು ಮುಸ್ಲಿಮರನ್ನು ಥಳಿಸಿದ್ದಾಗಿಯೂ ಅದರಿಂದ ತಮಗೆ ಸಂತೋಷವಾಗಿದ್ದಾಗಿಯೂ ಸಾವರ್ಕರ್ ಬರೆದುಕೊಂಡಿದ್ದಾರೆ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ್ದರು. ಆದರೆ ಹೇಳಿಕೆಗಳು ಆಧಾರರಹಿತ ಎಂದು ದೂರಿ 2023ರಲ್ಲಿ ಸಾತ್ಯಕಿ ಸಾವರ್ಕರ್ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಇದಕ್ಕೆ ಸಂಬಂಧಿಸಿದಂತೆ ರಾಹುಲ್ಗೆ ಪುಣೆ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ.
ಪ್ರಕರಣದ ವಿಚಾರಣೆಯನ್ನು ಸಂಕ್ಷಿಪ್ತವಾಗಿ ಆಲಿಸದೆ ಅದನ್ನು ವಿವರವಾದ ಸಮನ್ಸ್ ವಿಚಾರಣೆಯಾಗಿ ಪರಿವರ್ತಿಸುವಂತೆ ಕೋರಿ ಕೆಲ ದಿನಗಳ ಹಿಂದೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪುಣೆಯ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ತಮ್ಮ ಹೇಳಿಕೆಗಳು ಐತಿಹಾಸಿಕ ಸಂಗತಿಗಳನ್ನು ಆಧರಿಸಿದ್ದು ವಿವರವಾದ ಪುರಾವೆಗಳು ಅಗತ್ಯವಾಗಿರುವುದರಿಂದ ‘ಸಮನ್ಸ್ ವಿಚಾರಣೆ’ ಹೆಚ್ಚು ಸೂಕ್ತವಾಗುತ್ತದೆ ಎಂದು ರಾಹುಲ್ ವಾದಿಸಿದ್ದರು.
ವಕೀಲ ಎಸ್.ಎ. ಕೊಲ್ಹ್ ಅವರ ಮೂಲಕ ಸಲ್ಲಿಸಿದ ಅಫಿಡವಿಟ್ನಲ್ಲಿ ಸಾತ್ಯಕಿ ಅವರು, ವಿಚಾರಣೆ ಹೇಗೆ ನಡೆಯಬೇಕೆಂದು ಆರೋಪಿಗಳು ನ್ಯಾಯಾಲಯಕ್ಕೆ ನಿರ್ದೇಶಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಪ್ರಕರಣವನ್ನು ಮತ್ತಷ್ಟು ವಿಳಂಬ ಮಾಡದೆ ತ್ವರಿತವಾಗಿ ಮುಂದುವರಿಸಲು ಅವಕಾಶ ನೀಡುವ ಮಹತ್ವವನ್ನು ಇದೇ ವೇಳೆ ಸಾತ್ಯಕಿ ಅವರ ಪರ ವಕೀಲರು ಒತ್ತಿ ಹೇಳಿದರು
ರಾಹುಲ್ ತಮ್ಮ ಹೇಳಿಕೆ ಸಮರ್ಥಿಸಿಕೊಳ್ಳಲು ಐತಿಹಾಸಿಕ ಉಲ್ಲೇಖಗಳನ್ನು ಬಳಸುವುದನ್ನು ಸಾತ್ಯಕಿ ಪ್ರಶ್ನಿಸಿದ್ದಾರೆ. ಅಂತಹ ವಾದಗಳು ವಿಚಾರಣೆಯನ್ನು ವಿಳಂಬಗೊಳಿಸುವ ತಂತ್ರ ಮಾತ್ರ ಎಂದು ಹೇಳಿದ್ದಾರೆ.
ವಿಚಾರಣೆಯ ಸ್ವರೂಪವನ್ನು ಬದಲಾಯಿಸಲು ಮತ್ತು ಪ್ರಕರಣವನ್ನು ಅದರ ಆರಂಭಿಕ ಹಂತಗಳನ್ನು ಮೀರಿ ಮುಂದುವರಿಯಲು ಅವಕಾಶ ನೀಡುವಂತೆ ರಾಹುಲ್ ಅವರು ಸಲ್ಲಿಸಿರುವ ಅರ್ಜಿ ತಿರಸ್ಕರಿಸಬೇಕೆಂದು ಸಾತ್ಯಕಿ ಪರ ವಕೀಲರು ನ್ಯಾಯಾಲಯವನ್ನು ಕೋರಿದ್ದಾರೆ. ಪುಣೆ ನ್ಯಾಯಾಲಯ ಮಾರ್ಚ್ 19ರಂದು ಮಾನನಷ್ಟ ಪ್ರಕರಣದ ಮುಂದಿನ ವಿಚಾರಣೆ ನಡೆಸಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.