
ಪುತ್ತೂರು: ಅಮೆರಿಕದ ನ್ಯೂಯಾರ್ಕ್ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನದಲ್ಲಿ ಭಾರತವನ್ನು ಪ್ರತಿನಿಧಿಸಿ ದಕ್ಷಿಣ ಕನ್ನಡ ಕ್ಷೇತ್ರಕ್ಕೆ ವಿಶೇಷ ಹೆಮ್ಮೆಯುಂಟು ಮಾಡಿರುವ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಇಂದು ಭಾರತೀಯ ಜನತಾ ಪಾರ್ಟಿಯ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಗೌರವಿಸಲಾಯಿತು.
ಇಲ್ಲಿನ ಪಕ್ಷದ ಕಚೇರಿಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು, ವಿಶ್ವಸಂಸ್ಥೆಯ ಅಧಿವೇಶನದಲ್ಲಿ ಭಾಗವಹಿಸುವುದಕ್ಕೆ ಭಾರತದ ಸರ್ವಪಕ್ಷಗಳ ನಿಯೋಗದಲ್ಲಿ ತೆರಳುವುದಕ್ಕೆ ತಮ್ಮನ್ನು ಗುರುತಿಸಿ ಅವಕಾಶ ನೀಡುವ ಮೂಲಕ ವಿಶೇಷ ಮನ್ನಣೆ ಪಡೆಯಲು ಸಾಧ್ಯವಾಗಿರುವುದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.
ವಿಶ್ವದಲ್ಲೇ ಅತಿದೊಡ್ಡ ಪ್ರಜಾಪ್ರಭುತ್ವ ಹಾಗೂ ಶ್ರೇಷ್ಠ ಮಾನವೀಯ ಮೌಲ್ಯಗಳನ್ನು ಪ್ರತಿಬಿಂಬಿಸುವ ಭಾರತ ದೇಶವನ್ನು ವಿಶ್ವಸಂಸ್ಥೆಯಂತಹ ಜಾಗತಿಕ ಮಟ್ಟದ ಬಹುದೊಡ್ಡ ವೇದಿಕೆಯಲ್ಲಿ ನನ್ನಂತಹ ಓರ್ವ ಸಾಮಾನ್ಯ ಕಾರ್ಯಕರ್ತನಿಗೆ ಪ್ರತಿನಿಧಿಸಲು ಅವಕಾಶ ಲಭಿಸಿರುವುದು ನಿಜಕ್ಕೂ ನನ್ನ ಪಾಲಿನ ಅತ್ಯಂತ ಅಮೂಲ್ಯದ ಅವಕಾಶ ಹಾಗೂ ಗೌರವದ ಕ್ಷಣ ಎಂಬುದಾಗಿ ಭಾವಿಸಿದ್ದೇನೆ. ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರಕ್ಕೆ ನಾನು ವಿಶೇಷವಾದ ಧನ್ಯವಾದ ಸಲ್ಲಿಸುತ್ತೇನೆ. ಅಲ್ಲದೆ, ಈ ಅವಕಾಶವು ದಕ್ಷಿಣ ಕನ್ನಡದ ಜನರ ವಿಶ್ವಾಸ ಮತ್ತು ಆಶೀರ್ವಾದದ ಫಲವಾಗಿದ್ದು, ಇದಕ್ಕಾಗಿ ಜಿಲ್ಲೆಯ ಜನತೆಗೆ ಈ ಸಂದರ್ಭದಲ್ಲಿ ನನ್ನ ವಿಶೇಷ ಕೃತಜ್ಞತೆಗಳು ಎಂದು ಹೇಳಿದ್ದಾರೆ.
ಅಮೆರಿಕಾದ ನ್ಯೂಯಾರ್ಕ್ನಲ್ಲಿ ನಡೆದ ವಿಶ್ವಸಂಸ್ಥೆಯ 80ನೇ ಅಧಿವೇಶನದಲ್ಲಿ ಕ್ಯಾ. ಚೌಟ ಅವರು ದೇಶದ ವಿವಿಧ ಪಕ್ಷಗಳ ಸಂಸದರನ್ನು ಒಳಗೊಂಡಿರುವ 15 ಮಂದಿ ನಿಯೋಗದಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು. ವಿಶ್ವದ ಅತ್ಯುನ್ನತ ವೇದಿಕೆಯಲ್ಲಿ ದೇಶದ ಪರವಾಗಿ ಭಾರತದ ಸುಸ್ಥಿರ ಅಭಿವೃದ್ಧಿಯ ಕುರಿತಂತೆ ಪರಿಣಾಮಕಾರಿಯಾಗಿ ವಿಚಾರ ಮಂಡಿಸಿ ಗಮನ ಸೆಳೆದಿದ್ದರು.
ಅಭಿನಂದನೆ ವೇಳೆ ಮಾಜಿ ಶಾಸಕ ಸಂಜೀವ ಮಠಂದೂರು, ಪುತ್ತೂರು ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಬಿ. ಶಿವಕುಮಾರ್, ಪುತ್ತೂರು ನಗರಸಭೆ ಅಧ್ಯಕ್ಷೆ ಲೀಲಾವತಿ , ಉಪಾಧ್ಯಕ್ಷ ಬಾಲಚಂದ್ರ, ಬಿಜೆಪಿ ಮುಖಂಡರಾದ ಜೀವಂಧರ್ ಜೈನ್, ಹರಿಪ್ರಸಾದ್ ಯಾದವ್, ಪುರುಷೋತ್ತಮ, ಪಂಚಾಯತ್ ಸದಸ್ಯರು, ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಮುಂತಾದವರು ಉಪಸ್ಥಿತರಿದ್ದರು.
ಪುತ್ತೂರಿಗೆ ಭೇಟಿ ನೀಡಿದ ಸಂಸದ ಕ್ಯಾ.ಚೌಟ ಅವರು ಇಂದು ಬಿಜೆಪಿ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ್ದಾರೆ. ಇಂದಿನ ಸಾರ್ವಜನಿಕರ ಭೇಟಿ ವೇಳೆ ಕಚೇರಿಗೆ ಬಂದಿದ್ದ ಹಲವು ನಾಗರಿಕರ ಕುಂದು-ಕೊರತೆ ಆಲಿಸಿದ ಸಂಸದರು, ಸ್ಥಳದಲ್ಲೇ ಪರಿಹಾರ ಒದಗಿಸಿದ್ದು, ಇನ್ನು ಕೆಲ ಅಹವಾಲು ಪರಿಶೀಲಿಸಿ ಸೂಕ್ತ ಪರಿಹಾರ ಒದಗಿಸುವ ಭರವಸೆಯನ್ನೂ ನೀಡಿದ್ದಾರೆ. ಇದೇ ವೇಳೆ ಜಿಲ್ಲೆಯಲ್ಲಿ ಹಾದು ಹೋಗುವ ಕೆಲವು ಹೆದ್ದಾರಿಯಲ್ಲಿನ ಸಮಸ್ಯೆಗಳನ್ನು ತುರ್ತಾಗಿ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.



