
ಬೆಂಗಳೂರು: ಮುಖ್ಯಮಂತ್ರಿಗಳು ಯಾವ ಪುರುಷಾರ್ಥಕ್ಕೆ ತುಮಕೂರಿನಲ್ಲಿ ಸಾಧನಾ ಸಮಾವೇಶ ಹಮ್ಮಿಕೊಂಡಿದ್ದಾರೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನೆ ಮಾಡಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 3 ವರ್ಷಗಳಲ್ಲಿ ತಾವು ಮಾಡಿದ ಸಾಧನೆಯಾದರೂ ಏನು? ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಆಗಿವೆಯೇ? ಹೊಸ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದೀರಾ ಎಂದು ಕಾಂಗ್ರೆಸ್ ಅನ್ನು ಪ್ರಶ್ನಿಸಿದರು.
ನಾಡಿಗೆರಡು ತುತ್ತು ಅನ್ನ ಕೊಡುವ ರೈತರ ಬದುಕನ್ನು ಕಟ್ಟಿಕೊಡುವ ಸಲುವಾಗಿ ನೆರೆ ಮತ್ತು ಬರದ ಸಂದರ್ಭದಲ್ಲಿ ನೆರವಿಗೆ ನಿಮ್ಮ ಸರಕಾರ ಬಂದಿದೆಯೇ ಎಂದು ಕೇಳಿದರು. ಇದ್ಯಾವುದನ್ನೂ ಮಾಡದೇ, ಗ್ಯಾರಂಟಿಗಳ ನೆಪ ಒಡ್ಡಿಕೊಂಡು ರಾಜ್ಯ ಸರಕಾರವು ಜನರ ಪಾಲಿಗೆ ಬದುಕಿದೆ ಎಂಬುದನ್ನು ನೆನಪಿಸುವ ಕಾರ್ಯವನ್ನು ಈ ಸಾಧನಾ ಸಮಾವೇಶದ ಮೂಲಕ ತಾವು ಮಾಡುತ್ತ ಇದ್ದೀರಿ ಎಂದು ಆಕ್ಷೇಪಿಸಿದರು. ಕಾಂಗ್ರೆಸ್ ಸರಕಾರವು ಕೇವಲ ಜಾಹೀರಾತಿನ ಮೂಲಕ ತಮ್ಮ ಯಶಸ್ಸನ್ನು ಬಿಚ್ಚಿಡುವ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು.
ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆದ್ದಿದೆ. ನಿಮ್ಮ ಗೆಲುವಿಗೆ ಗ್ಯಾರಂಟಿಗಳು ಸಹಕರಿಸಿವೆ. ಗ್ಯಾರಂಟಿ ಹಣ ಬಿಡುಗಡೆ ಮಾಡಿ ಚುನಾವಣೆ ಗೆಲ್ಲಲು ಪ್ರಯತ್ನ ಮಾಡುತ್ತ ಇದ್ದೀರಿ ಎಂದು ದೂರಿದರು. ಈ ಗೆಲುವಿನ ನಾಗಾಲೋಟ ಬಹಳ ದಿನ ನಡೆಯಲು ಸಾಧ್ಯವಿಲ್ಲ ಎಂದು ತಿಳಿಸಿದರು. ಹಿಂದೆಯೂ ಕಾಂಗ್ರೆಸ್ ಸರಕಾರವು ಅಸ್ತಿತ್ವದಲ್ಲಿ ಇದ್ದಾಗ ಇದೇ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದಾಗ ನಂಜನಗೂಡು, ಬೇರೆ ಉಪ ಚುನಾವಣಾ ಫಲಿತಾಂಶ ಏನಾಗಿತ್ತು ಎಂದು ಕೇಳಿದರು. ನಂತರ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಜನರು ನಿಮ್ಮನ್ನು ಮನೆಗೆ ಕಳಿಸಿದ್ದನ್ನು ತಾವು ಮರೆತಿಲ್ಲ ಎಂದು ಭಾವಿಸುವುದಾಗಿ ಹೇಳಿದರು.
ಗ್ಯಾರಂಟಿಗಳನ್ನು ಕೇವಲ ಚುನಾವಣಾ ತಂತ್ರಗಾರಿಕೆಗೆ ಬಳಸುವ ಕೆಲಸ ಈ ಸರಕಾರದಿಂದ ಬಳಸುವ ಆಗುತ್ತಿದೆ. ಗ್ಯಾರಂಟಿಗಳೇ ಅಭಿವೃದ್ಧಿ ಎಂದು ಬಿಂಬಿಸುವ ಕೆಲಸವನ್ನು ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಸರಕಾರ ಮಾಡುತ್ತಿದೆ. ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ ರಸ್ತೆಗೆ ಆದ್ಯತೆ ನೀಡಿದ್ದೀರಾ? ನೀರಾವರಿ ಯೋಜನೆಗಳಿಗೆ ಹಣ ಒದಗಿಸಿದ್ದೀರಾ? ಆಸ್ಪತ್ರೆಗಳು, ಶಾಲೆಗಳಿಗೆ ಕಾಂಗ್ರೆಸ್ ಸರಕಾರ ನೀಡಿದೆಯೇ? ಅಭಿವೃದ್ಧಿಯನ್ನು ಕಣ್ಮುಂದೆ ಇಟ್ಟುಕೊಂಡು ಶಾಸಕರ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡಲು ನಿಮಗೆ ಸಾಧ್ಯ ಆಗಿದೆಯೇ ಎಂದು ಕೇಳಿದರು.
ಇವರ ಯೋಗ್ಯತೆಗೆ ಬೆಂಗಳೂರು ಮಹಾನಗರದ ರಸ್ತೆ ಗುಂಡಿಗಳನ್ನು ಮುಚ್ಚಲು ಸಾಧ್ಯ ಆಗುತ್ತಿಲ್ಲ. ಕೃಷಿ ಕ್ಷೇತ್ರದ ಬಗ್ಗೆ ಈ ಸರಕಾರ ಕಿಂಚಿತ್ತೂ ತಲೆ ಕೆಡಿಸಿಕೊಂಡಿಲ್ಲ. ಸಂಕಷ್ಟದಲ್ಲಿ ಇರುವ ರೈತರಿಗೆ ಸಾಂತ್ವನ ಹೇಳುವ ಸಂವೇದನೆ ಕೂಡ ಈ ಕಾಂಗ್ರೆಸ್ ಸರಕಾರಕ್ಕೆ ಇಲ್ಲ ಎಂಬುದು ದುರ್ದೈವ ಎಂದು ಟೀಕಿಸಿದರು. ನೆರೆ ಮತ್ತು ಬರದ ಸಂದರ್ಭದಲ್ಲಿ ನೆರವಿಗೆ ಇವರು ಧಾವಿಸಿಲ್ಲ ಎಂದು ಆಕ್ಷೇಪಿಸಿದರು.
ಉದ್ಯೋಗ ಸೃಷ್ಟಿ ಕುರಿತು ಸಾಕಷ್ಟು ಮಾತನಾಡುತ್ತಾರೆ. ಯುವಜನತೆ ಜೀವನದ ಜೊತೆ ಚೆಲ್ಲಾಟ ಆಡುವ ಕಾಂಗ್ರೆಸ್ ಸರಕಾರದ ಅಹಿಂದ ಮುಖವಾಡವೂ ಕಳಚಿಬಿದ್ದಿದೆ ಎಂದು ನುಡಿದರು. ಭ್ರಷ್ಟಾಚಾರರಹಿತ ಆಡಳಿತ ನೀಡುವುದಾಗಿ ಹಲವಾರು ಬಾರಿ ಹೇಳಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಆದಾಗಲೇ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕಾಗಿತ್ತು ಎಂದು ತಿಳಿಸಿದರು. ಈ ಹಗರಣದ ಕುರಿತು ಸದನದಲ್ಲೇ ಮುಖ್ಯಮಂತ್ರಿಗಳು ಒಪ್ಪಿಕೊಂಡಿದ್ದು, ಸಚಿವರು ರಾಜೀನಾಮೆ ಕೊಟ್ಟಿದ್ದನ್ನು ನೆನಪಿಸಿದರು. ಮತ್ತೊಂದು ಕಡೆ ‘ಮುಡಾ’ ಹಗರಣ ನಡೆದಿದೆ. 14 ನಿವೇಶನ ವಾಪಸ್ ಮಾಡಿದ್ದು ರಾಜ್ಯದ ಜನರಿಗೆ ಗೊತ್ತಿದೆ ಎಂದರು.
ಶಿಕ್ಷಣ ಕ್ಷೇತ್ರದಲ್ಲಿ ಈ ಥರದ ಶಿಕ್ಷಣ ಸಚಿವರು ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಬಂದಿದ್ದಾರೆ ಎಂದು ಟೀಕಿಸಿದರು. ರಾಜ್ಯ ಶಿಕ್ಷಣ ನೀತಿಯನ್ನು ತರಲು ಇವರಿಗೆ ಸಾಧ್ಯವಾಗಿಲ್ಲ; ರಾಷ್ಟ್ರೀಯ ಶಿಕ್ಷಣ ನೀತಿಯನ್ನೂ (ಎನ್ಇಪಿ) ಅನುಷ್ಠಾನ ಮಾಡುತ್ತಿಲ್ಲ. ಶಿಕ್ಷಣ ಕ್ಷೇತ್ರದಲ್ಲೂ ಗೊಂದಲ ಸೃಷ್ಟಿಸಿ ರಾಜ್ಯದ ಮಕ್ಕಳ ಜೊತೆ ಚೆಲ್ಲಾಟ ಆಡುತ್ತಿದ್ದಾರೆ ಎಂದು ದೂರಿದರು. ರಾಜ್ಯದಲ್ಲಿ 40 ಸಾವಿರಕ್ಕೂ ಹೆಚ್ಚು ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಗಮನ ಸೆಳೆದರು.
ರಾಜ್ಯ ಸರಕಾರದ ಎಡವಟ್ಟಿನಿಂದಾಗಿ 6500 ಗ್ರಾಮೀಣ ಗ್ರಂಥಾಲಯಗಳು ಬಾಗಿಲು ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗಿದೆ. ಮುಖ್ಯಮಂತ್ರಿಗಳ ಜಿಲ್ಲೆಯಲ್ಲೇ ಮೂಲಭೂತ ಸೌಕರ್ಯ ಕೊರತೆಯಿಂದ 15 ತಿಂಗಳಿನಿಂದ 550ಕ್ಕೂ ಹೆಚ್ಚು ನವಜಾತ ಶಿಶುಗಳು ಮರಣ ಹೊಂದಿವೆ. ಗರ್ಭಿಣಿಯರು, ಬಾಣಂತಿಯರ ಸರಣಿ ಸಾವುಗಳು ಸಂಭವಿಸುತ್ತಿವೆ. ಕಾನೂನು- ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ದಿನ ಬೆಳಗಾದರೆ ಕೊಲೆಗಳು ನಡೆಯುತ್ತಿವೆ. ಮುಖ್ಯಮಂತ್ರಿಗಳ ಜಿಲ್ಲೆಯು ಡ್ರಗ್ ಮಾಫಿಯಕ್ಕೆ ಇವತ್ತು ಕೇಂದ್ರವಾಗಿದೆ. ಮಾದಕವಸ್ತು ಉತ್ಪಾದನಾ ಫ್ಯಾಕ್ಟರಿಗಳು ಇರುವುದು ಪತ್ತೆಯಾಗಿದೆ ಎಂದು ವಿವರಿಸಿದರು. ಪೊಲೀಸ್ ಇಲಾಖೆ, ಮುಖ್ಯಮಂತ್ರಿಗಳಿಗೆ ಅವರ ಜಿಲ್ಲೆಯಲ್ಲಿ ಏನು ನಡೆಯುತ್ತಿದೆ ಎಂಬುದರ ಅಂದಾಜಿಲ್ಲ ಎಂದು ಟೀಕಿಸಿದರು.
ಕ್ರಿಮಿನಲ್ ಚಟುವಟಿಕೆಯ ವ್ಯಕ್ತಿಗಳಿಗೆ ಭಯ ಹುಟ್ಟಿಸಬೇಕಾದ ಜೈಲುಗಳಲ್ಲಿ ಕೈದಿಗಳಿಗೆ ಕುಡಿಯುವ ವ್ಯವಸ್ಥೆ ಮಾಡಲಾಗುತ್ತಿದೆ. ರಾಜಾರೋಷವಾಗಿ ಕೈದಿಗಳು ಆರಾಮವಾಗಿ ಇದ್ದಾರೆ. ಅತಿ ಹೆಚ್ಚು ಬಜೆಟ್ ಮಂಡಿಸಿದ ಮುಖ್ಯಮಂತ್ರಿಗಳು, ದೀರ್ಘಕಾಲ ಸಿಎಂ ಎಂಬ ವೈಯಕ್ತಿಕ ಕಾರಣ ಬಿಟ್ಟರೆ, ಅಹಿಂದ ಹೆಸರು ಹೇಳಿಕೊಂಡು ಆ ಸಮುದಾಯಗಳನ್ನು ತನ್ನ ರಾಜಕೀಯ ಸ್ವಾರ್ಥಕ್ಕಾಗಿ, ಅಹಿಂದ ಸಮುದಾಯಗಳನ್ನು ತನ್ನ ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳುವ ಸಲುವಾಗಿ ದುರ್ಬಳಕೆ ಮಾಡಿಕೊಂಡ ಅಪಕೀರ್ತಿ ಇವರಿಗೆ ಸಲ್ಲುತ್ತದೆ ಎಂದು ನುಡಿದರು.
ಪಶ್ಚಿಮ ಬಂಗಾಲ, ಅಸ್ಸಾಂನಲ್ಲಿನ ಸೋಲಿನಿಂದ ಹತಾಶವಾದ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸಲು ಹೊರಟಿದೆ ಎಂದು ಆರೋಪಿಸಿದರು. ಈ ಸರಕಾರದ ಆಡಳಿತ ವೈಖರಿಯಿಂದ ಜನರು ಬೇಸತ್ತಿದ್ದಾರೆ. ರಾಜ್ಯದಲ್ಲಿ ಯಾವತ್ತೇ ಚುನಾವಣೆ ನಡೆದರೂ ಈ ಸರಕಾರಕ್ಕೆ ಜನರು ಪಾಠ ಕಲಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯಸಭಾ ಸದಸ್ಯ ಲೇಹರ್ ಸಿಂಗ್ ಸಿರೋಯಾ, ಮಾಜಿ ಸಚಿವರು ಮತ್ತು ಶಾಸಕರಾದ ಬಿ.ಎ ಬಸವರಾಜ್, ಶ್ರೀಮತಿ ಶಶಿಕಲಾ ಜೊಲ್ಲೆ, ರಾಜ್ಯ ವಕ್ತಾರ ಹೆಚ್. ವೆಂಕಟೇಶ್ ದೊಡ್ಡೇರಿ, ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ರಘು ಕೌಟಿಲ್ಯ, ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಹೂಡಿ ಮಂಜುನಾಥ್ ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


