ಬೆಳ್ತಂಗಡಿ: ಕೋಮುಗಲಭೆ, ಪೊಲೀಸರ ಮೇಲೆ ಹಲ್ಲೆ, ರಾಜ್ಯದ ವಿರುದ್ಧ ಸಂಚು ರೂಪಿಸುವಲ್ಲಿ ತೊಡಗಿದ್ದ ಸುಮಾರು 130ಕ್ಕೂ ಅಧಿಕ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದ 1600 ಪಿಎಫ್ಐ ಕಾರ್ಯಕರ್ತರ ವಿರುದ್ದ ದಾಖಲಾದ ಪ್ರಕರಣಗಳನ್ನು ವಾಪಸ್ ಪಡೆಯಲು ರಾಜ್ಯ ಸರ್ಕಾರ ಸಂಪುಟ ಸಭೆ ನಿರ್ಧರಿಸಿರುವುದನ್ನು ವಿ.ಹಿಂ.ಪ. ಮತ್ತು ಬಜರಂಗ ದಳ ತೀವ್ರವಾಗಿ ಖಂಡಿಸಿದೆ. ಒಂದು ವೇಳೆ ಹಿಂಪಡೆದಲ್ಲಿ ರಾಜ್ಯಾದ್ಯಂತ ಉಗ್ರ ಪ್ರತಿಭಟನೆಯನ್ನು ಕೈಗೊಳ್ಳಲಾಗುವುದು ಎಂದು ಬಜರಂಗ ದಳ ಪ್ರಾಂತ ಸಂಯೋಜಕ ಶರಣ್ ಪಂಪ್ವೆಪ್ ಹೇಳಿದರು.
ಅವರು ಸೋಮವಾರ ಬೆಳ್ತಂಗಡಿ ತಾಲೂಕು ಕಚೇರಿ ಮೈದಾನದಲ್ಲಿ ರಾಜ್ಯ ಸರ್ಕಾರದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.
ಶಿವಮೊಗ್ಗ, ಮೈಸೂರು, ಹಾಸನ ಜಿಲ್ಲೆಗಳಲ್ಲಿ ನಡೆದ ಗಲಭೆಗಳಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಲಾಗಿದೆ. ಸಾರ್ವಜನಿಕರ ಅಪಾರ ಆಸ್ತಿಪಾಸ್ತಿಗಳು ನಾಶವಾಗಿದ್ದವು. ಇದನ್ನು ಗಂಭೀರವಾಗಿ ಪರಿಗಣಿಸದೆ ಗೃಹ ಇಲಾಖೆಯು ಈ ಪ್ರಕರಣವನ್ನು ಹಿಂಪಡೆಯಬಾರದು ಎಂದು ವರದಿ ಸಲ್ಲಿಸಿದರೂ ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ಪ್ರಕರಣಗಳನ್ನು ವಾಪಸ್ ಪಡೆದುಕೊಂಡಿರುವುದು ಪೊಲೀಸರ ನೈತಿಕ ಸ್ಥೈರ್ಯವನ್ನು ಕುಗ್ಗಿಸಿದಂತಾಗಿದೆ. ದೇಶದ್ರೋಹಕ್ಕೆ ಪ್ರಚೋದನೆ ನೀಡುವಂತಹ ಕೆಲಸವನ್ನು ರಾಜ್ಯ ಸರಕಾರ ಮಾಡಲು ಮುಂದಾಗಿದ್ದು, ಇದನ್ನು ರಾಜ್ಯದ ಎಲ್ಲಾ ನಾಗರಿಕರು ವಿರೋಧಿಸಬೇಕು ಎಂದರು.
ಅಲ್ಪಸಂಖ್ಯಾತರ ತುಷ್ಟೀಕರಣ ಮಾಡುವ ಭರದಲ್ಲಿ ಪೊಲೀಸ್ ವ್ಯವಸ್ಥೆಯ ನೈತಿಕ ಸ್ಥೈರ್ಯವನ್ನು ಕುಗ್ಗಿಸಿದಲ್ಲಿ ಮುಂದಕ್ಕೆ ಅಂತಹ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುವ ಸಮಾಜ ದ್ರೋಹಿ ಶಕ್ತಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದಂತೆ ಪೊಲೀಸರ ಕೈ ಕಟ್ಟಿ ಹಾಕಿದಂತಾಗುತ್ತದೆ. ಇಂತಹ ಶಕ್ತಿಗಳಿಗೆ ಕುಮ್ಮಕ್ಕು ನೀಡಿದಂತಾಗಿ ಇದೇ ರೀತಿಯ ಘಟನೆಗಳು ಮುಂದೆ ಮರುಕಳಿಸುವ ಮೂಲಕ ಬಹು ಸಂಖ್ಯಾತರಿಗೆ ರಕ್ಷಣೆ ಇಲ್ಲದಂತಾಗುತ್ತದೆ. ರಾಜಕೀಯ ಲಾಭಕ್ಕೆ ಮಾಡುವ ಇಂತಹ ನಿರ್ಣಯಗಳನ್ನು ಸರ್ಕಾರ ಹಿಂದಕ್ಕೆ ಪಡೆದುಕೊಳ್ಳಬೇಕು ಎಂದು ಅವರು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಬಜರಂಗ ದಳ ಜಿಲ್ಲಾ ಸಂಯೋಜಕ ಭಾಸ್ಕರ ಧರ್ಮಸ್ಥಳ, ತಾಲೂಕು ಸಹ ಸಂಯೋಜಕರಾದ ರಮೇಶ್, ದಿನೇಶ್, ಗಣೇಶ್, ವಿಹಿಂಪದ ತಾಲೂಕಾಧ್ಯಕ್ಷ ತಾರಾನಾಥ, ಕಾರ್ಯದರ್ಶಿ ನವೀನ್, ಜಯರಾಜ್ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.
ಬಳಿಕ ಪ್ರತಿಭಟನಾಕಾರರು ಬೆಳ್ತಂಗಡಿ ತಹಶೀಲ್ದಾರ್ರ ಮೂಲಕ ರಾಜ್ಯಪಾಲರಿಗೆ ಮನವಿಯನ್ನು ಸಲ್ಲಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.