ಬೆಂಗಳೂರು: ಚಿಕ್ಕ ವಯಸ್ಸಿನಲ್ಲೇ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಸಚಿವರಾಗುವ ಅವಕಾಶ ಗಿಟ್ಟಿಸಿಕೊಂಡ ಅನಂತ್ ಕುಮಾರ್ ಅವರು, ಬಿಜೆಪಿಯ ಸಂಘಟನಾ ಚತುರ. ರಾಜಕೀಯ ತಂತ್ರಗಾರಿಕೆಗಳನ್ನು ಅತ್ಯಂತ ಸಮರ್ಥವಾಗಿ ಅನುಷ್ಠಾನಕ್ಕೆ ತರುವಲ್ಲಿ ಅವರು ನಿಸ್ಸೀಮರು. ತಮ್ಮ ಕಾರ್ಯ ಚತುರತೆಯಿಂದಲೇ ಅವರು ಯಶಸ್ಸಿನ ಒಂದೊಂದೇ ಮೆಟ್ಟಿಲನ್ನು ಏರಿದವರು.
ತುರ್ತು ಪರಿಸ್ಥಿತಿ ಹೇರಿದ್ದ ಸಂದರ್ಭದಲ್ಲಿ ಅವರ ವಯಸ್ಸು ಕೇವಲ 16. ಆದರೂ ಹೋರಾಟಕ್ಕೆ ಧುಮುಕಿದ್ದ ಅವರು ಸೆರೆವಾಸವನ್ನೂ ಅನುಭವಿಸಿದ್ದರು. ಎಬಿವಿಪಿಯ ಸಕ್ರಿಯ ಸದಸ್ಯನಾಗಿದ್ದ ಅವರು, 1987ರಲ್ಲಿ ಭಾರತೀಯ ಜನತಾ ಪಕ್ಷವನ್ನು ಸೇರಿಕೊಂಡರು.
1996ರಿಂದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾದ ಅವರು ಬಳಿಕ ಹಿಂದಿರುಗಿ ನೋಡಲೇ ಇಲ್ಲ. 22 ವರ್ಷಗಳ ಕಾಲ ಆ ಕ್ಷೇತ್ರವನ್ನು ಅವರು ಪ್ರತಿನಿಧಿಸಿದ್ದಾರೆ. 1998ರಲ್ಲಿ ವಾಜಪೇಯಿ ಸರ್ಕಾರದಲ್ಲಿ ವಿಮಾನಯಾನ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಅತ್ಯಂತ ಕಿರಿಯ ವಯಸ್ಸಿನ ಸಚಿವ ಎಂಬ ಹೆಗ್ಗಳಿಕೆ ಅವರದ್ದಾಗಿತ್ತು. ಬಳಿಕ ಪ್ರವಾಸೋದ್ಯಮ, ಯುವಜನ ಮತ್ತು ಕ್ರೀಡೆ, ನಗರಾಭಿವೃದ್ಧಿ, ಪಂಚಾಯತ್ ರಾಜ್ ಇತ್ಯಾದಿ ಸಚಿವಾಲಯದ ಜವಾಬ್ದಾರಿಯನ್ನು ಅವರು ನಿರ್ವಹಿಸಿದ್ದಾರೆ.
ಕರ್ನಾಟಕದಲ್ಲಿ ರಾಜ್ಯ ಮತ್ತು ಕೇಂದ್ರದ ಪ್ರತಿನಿಧಿಯಂತಿದ್ದ ಅವರು, ಇಲ್ಲಿನ ಸಮಸ್ಯೆಗಳನ್ನು ದೆಹಲಿಗೆ ತೆಗೆದುಕೊಂಡು ಹೋಗಿ ಚರ್ಚೆ ನಡೆಸುತ್ತಿದ್ದರು. ಮಧ್ಯಪ್ರದೇಶ, ಛತ್ತೀಸ್ಗಢ, ಜಾರ್ಖಾಂಡ್, ಬಿಹಾರಗಳಲ್ಲಿ ಬಿಜೆಪಿ ಉಸ್ತುವಾರಿಯಾಗಿ ಅವರು ಕಾರ್ಯನಿರ್ವಹಿಸಿದ್ದಾರೆ.
ತಮ್ಮ ಅದಮ್ಯ ಚೇತನಾ ಎಂಬ ಸೇವಾ ಸಂಸ್ಥೆಯ ಮೂಲಕ ಕರ್ನಾಟಕ ಮತ್ತು ರಾಜಸ್ಥಾನದ ಜೋಧ್ಪುರದ ಮಕ್ಕಳಿಗೆ ಬಿಸಿಯೂಟ ಪೂರೈಕೆ ಮಾಡುತ್ತಿದ್ದರು. ಬೆಂಗಳುರು ನಗರದಲ್ಲಿ ಕೋಟಿ ಸಸಿ ನಡೆವ ಯೋಜನೆಗೆ ಚಾಲನೆ ನೀಡಿದ್ದರು.
ರಾಜಕೀಯವಾಗಿ ಸಕ್ರಿಯವಾಗಿದ್ದ ಅನಂತ್ ಕುಮಾರ್ ಇನ್ನು ನೆನಪು ಮಾತ್ರ. ತೀವ್ರ ಸ್ವರೂಪದ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ವಿಧಿ ಕೊನೆಗೂ ತನ್ನ ಬಳಿ ಕರೆಸಿಕೊಂಡಿದೆ. ಅವರ ಅಗಲುವಿಕೆಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.