ಬೆಳ್ತಂಗಡಿ: ಸಾಂಕ್ರಾಮಿಕ ರೋಗಗಳು ಹರಡದಂತೆ ತಡೆಯಲು ಸ್ಧಳೀಯಾಡಳಿತ ಸಂಸ್ಧೆಗಳು ಆರೋಗ್ಯ ಇಲಾಖೆಯೊಂದಿಗೆ ಸೇರಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಸರಕಾರದ ಆರೋಗ್ಯ ಸಚಿವ ಯು. ಟಿ. ಖಾದರ್ ಸೂಚನೆ ನೀಡಿದರು.
ಅವರು ಮಂಗಳವಾರ ಬೆಳ್ತಂಗಡಿ ತಾಲೂಕು ಪಂಚಾಯತ್ನ ಸಭಾಭವನದಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಮಾಹಿತಿ ಕಾರ್ಯಕ್ರಮ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಗ್ರಾಮ ಪಂಚಾಯತ್ಗಳಲ್ಲಿರುವ ನೈರ್ಮಲ್ಯ ಸಮಿತಿಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಸಮಿತಿಗೆ ಅನುದಾನವು ಬರುತ್ತಿದೆ. ಆದರೆ ಅದರ ಸಭೆಗಳೇ ನಡೆಯುತ್ತಿಲ್ಲ. ಪಿಡಿಒಗಳು ಈ ಬಗ್ಗೆ ನಿಗಾ ವಹಿಸಬೇಕು. ಕೂಡಲೆ ಗ್ರಾಮಗಳಲ್ಲಿ ಸಭೆಗಳನ್ನು ನಡೆಸಿ ಜಾಗೃತಿ ಮೂಡಿಸುವ ಕಾರ್ಯ ಮಾಡಬೇಕು ಎಂದರು.
ಘನತ್ಯಾಜ್ಯಗಳನ್ನು ಕಂಡ ಕಂಡಲ್ಲಿ ಎಸೆಯುವವರ ವಿರುದ್ಧ ಕೂಡಲೆ ಸೂಕ್ತ ಕ್ರಮ ಕೈಗೊಳ್ಳಿ ಎಂದು ಸೂಚಿಸಿದ ಅವರು, ತಾಲೂಕು ಆರೋಗ್ಯಾಧಿಕಾರಿಯವರು ಎರಡು ದಿನಕ್ಕೊಮ್ಮೆ ಪ್ರತಿ ಪ್ರಾಧಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಸ್ಧಳೀಯವಾಗಿ ಜ್ಯರ ಪೀಡಿತರಾಗಿರುವವರ ಬಗ್ಗೆ ಮಾಹಿತಿಯನ್ನು ಹಿರಿಯ ಅಧಿಕಾರಿಗಳಿಗೆ ತಿಳಿಸಬೇಕು ಎಂದು ಸೂಚಿಸಿದರು.
ಹೋಟೆಲ್ಗಳು ಶುಚಿತ್ವದ ಬಗ್ಗೆ ಹೆಚ್ಚು ಗಮನ ನೀಡಬೇಕು. ಕಡ್ಡಾಯವಾಗಿ ಮೂರು ತಿಂಗಳ ಕಾಲ ಕುಡಿಯಲು ಬಿಸಿನೀರನ್ನೇ ನೀಡಬೇಕು. ಆಹಾರ ಇಲಾಖೆಯವರು ಕಾಲಕಾಲಕ್ಕೆ ಪರಿಶೀಲನೆಗಳನ್ನು ನಡೆಸಬೇಕು. ಯಾವುದೇ ರೀತಿಯ ಶುಚಿತ್ವದ ಕೊರತೆಗಳು ಕಂಡುಬಂದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಿ ಎಂದ ಸಚಿವರು ಸಾಂಕ್ರಮಿಕ ರೋಗಗಳ ಬಗ್ಗೆ ಜಾಗೃತಿ ಕಾರ್ಯಕ್ರಮಗಳಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಖಾಸಗಿ ಆಸ್ಪತ್ರೆಗಳು ಮಲೇರಿಯ ಸೇರಿದಂತೆ ವಿವಿಧ ಜ್ವರಗಳ ಚಿಕಿತ್ಸೆಯ ದರ ಪಟ್ಟಿಯನ್ನು ನೋಟೀಸ್ ಬೋರ್ಡಿನಲ್ಲಿ ಪ್ರಕಟಿಸಬೇಕು. ಮನಬಂದಂತೆ ಬಿಲ್ ಹಾಕಿದರೆ ಕೂಡಲೇ ಆರೋಗ್ಯ ಇಲಾಖೆಗೆ ಮಾಹಿತಿ ನೀಡುವಂತೆ ಅವರು ಸಾರ್ವಜನಿಕರಲ್ಲಿ ವಿನಂತಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವಸಂತ ಬಂಗೇರ, ಗಾಮ ಪಂಚಾಯತ್ಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಾಂಕ್ರಾಮಿಕ ರೋಗಗಳ ಬಗ್ಗೆ ಎಚ್ಚರ ವಹಿಸುವ ಕಾರ್ಯ ಮಾಡಬೇಕು. ಗ್ರಾಮಗಳಲ್ಲಿರುವ ಜ್ವರ ಪೀಡಿತರ ಬಗ್ಗೆ ಸರಿಯಾದ ಮಾಹಿತಿಗಳನ್ನು ಪಡೆದುಕೊಂಡು ಅಧಿಕಾರಿಗಳಿಗೆ ನೀಡಬೇಕು ಹಾಗೂ ಅಗತ್ಯ ಚಿಕಿತ್ಸೆಗೆ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದರು.
ಜಿಲ್ಲಾ ಆರೋಗ್ಯಾಧಿಕಾರಿ ರಾಮಕೃಷ್ಣ ರಾವ್ ಮಾಹಿತಿ ನೀಡಿ ಬೆಳ್ತಂಗಡಿ ಮತ್ತು ಸುಳ್ಯದಲ್ಲಿ ಸಾಂಕ್ರಾಮಿಕ ರೋಗಗಳು ಹೆಚ್ಚಾಗಿ ಕಾಣಿಸಿಕೊಂಡಿದ್ದು, ಅದರ ತಡೆಗೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜ್ವರ ಪ್ರಕರಣಗಳು ದಾಖಲಾದ ಕೂಡಲೇ ಅಗತ್ಯ ನಿಗಾ ವಹಿಸಬೇಕು. ಖಾಸಗಿ ಆಸ್ಪತ್ರೆಗಳು ಹೆಚ್ಚು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು. ರೋಗ ನಿಯಂತ್ರಣಕ್ಕೆ ಬರದಿದ್ದಲ್ಲಿ ಕೂಡಲೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗಳಿಗೆ ಕಳುಹಿಸಿಕೊಡುವಂತೆ ಸೂಚಿಸಿದರು.
ಸಭೆಯಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷೆ ಜಯಂತಿ ಪಾಲೇದು, ಜಿಲ್ಲಾಪಂಚಾಯತು ಸದಸ್ಯೆ ಸಿ. ಕೆ. ಚಂದ್ರಕಲಾ, ಪಟ್ಟಣಪಂಚಾಯತು ಅಧ್ಯಕ್ಷೆ ಮುಸ್ತಾರ್ಜನ್ ಮೆಹಬೂಬ್, ತಾ. ಪಂ. ಉಪಾಧ್ಯಕ್ಷ ವಿಷ್ಣು ಮರಾಠೆ, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಮಹಂತೇಶ್, ತಾಲೂಕು ಆರೋಗ್ಯಾಧಿಕಾರಿ ಡಾ ಕಲಾಮಧು, ಬೆಳ್ತಂಗಡಿ ಸರಕಾರಿ ಆಸ್ಪತೆಯ ಮುಖ್ಯ ವೈಧ್ಯಾಧಿಕಾರಿ ಡಾ ಆದಂ. ಹಾಗು ಮತ್ತಿತರರು ಉಪಸ್ಧಿತರಿದ್ದರು. ಮಲೇರಿಯಾ ವಿರೋಧೀ ಮಾಸಚರಣೆಯ ಭಾಗವಾಗಿ ನಗರದಲ್ಲಿ ನೈರ್ಮಲ್ಯ ಜಾಗೃತಿ ಜಾಧಾ ನಡೆಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.