ನವದೆಹಲಿ : ಫನಿ ಚಂಡಮಾರುತವು ದೇಶದ ಹಲವು ರಾಜ್ಯಗಳಲ್ಲಿ ದೊಡ್ಡ ಅವಾಂತರವನ್ನೇ ಸೃಷ್ಟಿಸಿದೆ. ಈಗಾಗಲೇ ಒಟ್ಟು 10 ಮಂದಿ ಇದರಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಫನಿ ಪೀಡಿತ ರಾಜ್ಯಗಳಿಗೆ ಅಭಯವನ್ನು ನೀಡಿದ್ದು, ನಿಮ್ಮೊಂದಿಗೆ ನಾವಿದ್ದೇವೆ ಎಂದಿದ್ದಾರೆ. ಅಲ್ಲದೇ, ಕೇಂದ್ರದ ವತಿಯಿಂದ 1000 ಕೋಟಿ ರೂಪಾಯಿಗಳನ್ನು ಬಿಡುಗಡೆ ಗೊಳಿಸಿದ್ದಾರೆ.
ರಾಜಸ್ಥಾನದಲ್ಲಿ ಚುನಾವಣಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಫನಿ ಚಂಡಮಾರುತ ಪೀಡಿತ ರಾಜ್ಯಗಳಾದ ಒರಿಸ್ಸಾ, ಪಶ್ಚಿಮ ಬಂಗಾಳ, ಆಂಧ್ರಪ್ರದೇಶ, ತಮಿಳುನಾಡು ಮತ್ತು ಪುದುಚೇರಿಗಳೊಂದಿಗೆ ಕೇಂದ್ರ ಸರಕಾರವು ನಿರಂತರ ಸಂಪರ್ಕದಲ್ಲಿದೆ ಎಂದು ತಿಳಿಸಿದ್ದಾರೆ.
“ಕ್ಷಣ ಕ್ಷಣದ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆಯುತ್ತಿದ್ದೇನೆ. ಗುರುವಾರ ಪರಿಶೀಲನಾ ಸಭೆಯನ್ನು ನಡೆಸಿದ್ದೇನೆ. ಸಂಬಂಧಿತ ಸರಕಾರಗಳಿಗೆ ಮುಂಚಿತವಾಗಿಯೇ ಒಂದು ಸಾವಿರ ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ. ಎನ್ಡಿಆರ್ಎಫ್, ಭಾರತೀಯ ತಟ ರಕ್ಷಣಾ ಪಡೆ, ನೌಕಾಪಡೆ, ವಾಯುಸೇನೆಗಳು ಸರಕಾರದೊಂದಿಗೆ ಕೈಜೋಡಿಸಿ ರಕ್ಷಣಾ ಕಾರ್ಯದಲ್ಲಿ ನಿರತವಾಗಿದೆ. ಇಡೀ ದೇಶ ಮತ್ತು ಸರಕಾರಗಳು ನಿಮ್ಮೊಂದಿಗಿದೆ ಎಂಬ ಭರವಸೆಯನ್ನು ನಾನು ಚಂಡಮಾರುತ ಪೀಡಿತ ಎಲ್ಲಾ ಜನರಿಗೆ ನೀಡಲು ಬಯಸುತ್ತೇನೆ” ಎಂದಿದ್ದಾರೆ.
ಫನಿ ಚಂಡಮಾರುತದ ಪ್ರಭಾವದಿಂದಾಗಿ ಒರಿಸ್ಸಾದಲ್ಲಿ ಅಪಾರ ಪ್ರಮಾಣದಲ್ಲಿ ಹಾನಿ ಉಂಟಾಗಿದೆ. ಗಂಟೆಗೆ 200 ಕಿಲೋಮೀಟರ್ ವೇಗದಲ್ಲಿ ಅಲ್ಲಿ ಗಾಳಿ ಬೀಸುತ್ತಿದೆ ಎಂದು ಹೇಳಲಾಗಿದೆ. ಈಗಾಗಲೇ ಒಟ್ಟು 10 ಮಂದಿ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಹಲವಾರು ಮನೆಗಳು ಹಾನಿಗೊಳಗಾಗಿವೆ, ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. 10 ಲಕ್ಷಕ್ಕೂ ಅಧಿಕ ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ಕಳೆದ 43 ವರ್ಷಗಳಲ್ಲೇ ಅತ್ಯಂತ ಭೀಕರ ಚಂಡಮಾರುತ ಇದಾಗಿದೆ ಎಂದು ಹೇಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.