ನವದೆಹಲಿ: ಸಂವಿಧಾನದ 370ನೇ ವಿಧಯನ್ನು ರದ್ದುಗೊಳಿಸಿರುವ ಹಿನ್ನಲೆಯಲ್ಲಿ ಹಲವು ರಾಜ್ಯಗಳಲ್ಲಿ ಉಗ್ರರ ದಾಳಿಯ ಆತಂಕ ಎದುರಾಗಿದೆ. ಪಾಕಿಸ್ಥಾನ ಆಕ್ರಮಿತ ಜೈಶೇ ಇ ಮೊಹಮ್ಮದ್ ಸೇರಿದಂತೆ ಇತರ ಸಂಘಟನೆಗಳು ಭಾರತದ ಮೇಲೆ ದಾಳಿಗೆ ಹೊಂಚು ಹಾಕಿ ಕುಳಿತಿವೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆಯನ್ನು ನೀಡಿದೆ. ಹೀಗಾಗಿ ದೇಶದ 7 ರಾಜ್ಯಗಳಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದೆ.
ಪಾಕಿಸ್ಥಾನದ ನಟೋರಿಯಸ್ ಗುಪ್ತಚರ ಸಂಸ್ಥೆ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಭಯೋತ್ಪಾದಕ ಸಂಘಟನೆಗಳಿಗೆ ಭಾರತದ ಮೇಲೆ ದಾಳಿ ನಡೆಸಲು ಸಹಾಯ ಮಾಡುತ್ತಿದೆ ಎಂಬ ಮಾಹಿತಿಗಳು ಭಾರತದ ಗುಪ್ತಚರ ಇಲಾಖೆಗೆ ಸಿಕ್ಕಿದೆ. 2019ರ ಫೆಬ್ರವರಿಯಲ್ಲಿ ಪುಲ್ವಾಮಾದಲ್ಲಿ ನಡೆಸಿದ ದಾಳಿಯ ಮಾದರಿಯಲ್ಲೇ ಸೇನೆ, ಪೊಲೀಸ್ರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು ಪ್ರಮುಖ ಭಯೋತ್ಪಾದಕ ಸಂಘಟನೆ ಹವಣಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.
ಗುಪ್ತಚರ ಇಲಾಖೆಯ ಎಚ್ಚರಿಕೆಯ ಹಿನ್ನಲೆಯಲ್ಲಿ, ದೆಹಲಿ, ರಾಜಸ್ಥಾನ, ಪಂಜಾಬ್, ಗುಜರಾತ್, ಮಹಾರಾಷ್ಟ್ರ, ಕರ್ನಾಟಕ ಮತ್ತು ಆಂಧ್ರಪ್ರದೇಶ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಹೈ ಅಲರ್ಟ್ ಹಾಕಲಾಗಿದೆ, ಇಲ್ಲಿ ಜೈಶೇ ಮೊಹಮ್ಮದ್ ಸಂಘಟನೆಗಳು ದುಷ್ಕೃತ್ಯ ನಡೆಸುವ ಯೋಜನೆಗಳನ್ನು ಕೈಗೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.
ವಾಯುಯಾನಕ್ಕೆ ಸಂಬಂಧಿತ ಭಯೋತ್ಪಾದಕ ದಾಳಿಗಳ ಬಗ್ಗೆ ಎಚ್ಚರಿಕೆಯನ್ನು ವಹಿಸಿರುವ ಸರ್ಕಾರ, ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆಯ ಹಿನ್ನಲೆಯಲ್ಲೂ ದೇಶದ ಎಲ್ಲ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸುವಂತೆ ರಾಜ್ಯಗಳಿಗೆ ನಿರ್ದೇಶನವನ್ನು ನೀಡಿದೆ. ಆಗಸ್ಟ್ 10 ರಿಂದ 20 ರವರೆಗೆ ವಿಮಾನನಿಲ್ದಾಣಗಳಿಗೆ ಸಂದರ್ಶಕರ ಪ್ರವೇಶವನ್ನು ನಿರ್ಬಂಧಿಸಲಾಗುತ್ತಿದೆ. ಟಿಕೆಟ್ ಹೊಂದಿರುವ ಪ್ರಯಾಣಿಕರಿಗೆ ಮಾತ್ರ ನಿಖರ ಪರಿಶೀಲನೆಯ ಬಳಿಕ ವಿಮಾನ ನಿಲ್ದಾಣಗಳ ಒಳಗೆ ಪ್ರವೇಶಿಸಲು ಅನುಮತಿಸಲಾಗುತ್ತಿದೆ.
ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ಭಾರತದ ಸರ್ಕಾರ ನಿರ್ಧಾರಕ್ಕೆ ಪಾಕಿಸ್ಥಾನ ಸಿಡಿಮಿಡಿಗೊಂಡಿದೆ. ಈ ಹಿನ್ನಲೆಯಲ್ಲಿ ಅದು ಭಯೋತ್ಪಾದಕರನ್ನು ಛೂ ಬಿಟ್ಟು ಭಾರತದೊಳಗೆ ದಾಳಿ ನಡೆಸಲು ಯತ್ನಿಸಬಹುದಾದ ಸಂಭವ ಇದೆ ಎಂದು ಹೇಳಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.