ನವದೆಹಲಿ: ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಸಮರ್ಪಕವಾದ ರೀತಿಯಲ್ಲಿ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ಪತ್ರವನ್ನು ಬರೆಯುವ ಮೂಲಕ ಸೂಚನೆಯನ್ನು ನೀಡಿದೆ.
ಮಹಿಳೆಯರಿಗೆ ಸುರಕ್ಷತೆಯನ್ನು ಒದಗಿಸುವುದು ಸರ್ಕಾರದ ಆದ್ಯ ಕಾರ್ಯ ಎಂದು ಪತ್ರದಲ್ಲಿ ಉಲ್ಲೇಖ ಮಾಡಲಾಗಿದೆ.
ಇತ್ತೀಚಿಗೆ ದೇಶದ ಕೆಲವು ಭಾಗಗಳಲ್ಲಿ ನಡೆದ ಮಹಿಳೆಯರ ವಿರುದ್ಧದ ಅತ್ಯಂತ ಅಮಾನುಷ ಮತ್ತು ಹೇಯ ಕೃತ್ಯಗಳ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು ಎಲ್ಲ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರವನ್ನು ಬರೆದಿದ್ದಾರೆ.
“ಮಹಿಳೆಯರ ಮತ್ತು ಹೆಣ್ಣು ಮಕ್ಕಳ ಸುರಕ್ಷತೆ ಸರ್ಕಾರದ ಆದ್ಯತೆಯಾಗಿರುತ್ತದೆ. ಮಹಿಳೆಯರ ವಿರುದ್ಧದ ಪ್ರಕರಣಗಳ ವಿರುದ್ಧ ಕ್ರಮ ಜರುಗಿಸಲು ರಾಜ್ಯಗಳು ಕಠಿಣಾತಿ ಕಠಿಣ ಕ್ರಮಗಳನ್ನು ಜಾರಿಗೊಳಿಸಿದೆ, ಆದರೆ ಅವುಗಳ ಸಮರ್ಪಕವಾದ ನಿರ್ವಹಣೆ ಅತ್ಯಗತ್ಯ. ಪೊಲೀಸರು ಮಹಿಳೆಯರಿಗೆ ಸುಲಭವಾಗಿ ಸಂಪರ್ಕಕ್ಕೆ ಸಿಗುವಂತೆ ಇರಬೇಕು, ಮಹಿಳೆಯರಿಗೆ ಸಂಬಂಧಿಸಿದ ಯಾವುದೇ ಪ್ರಕರಣಗಳ ವಿರುದ್ದವೂ ತ್ವರಿತಗತಿಯಲ್ಲಿ ಸ್ಪಂದಿಸುವಂತೆ ರಾಜ್ಯ ಸರಕಾರಗಳು ನಡೆದುಕೊಳ್ಳಬೇಕು” ಎಂದು ಕೇಂದ್ರ ಗೃಹ ಕಾರ್ಯದರ್ಶಿ ಹೇಳಿದ್ದಾರೆ.
ಅಲ್ಲದೆ ವಿವಿಧ ರಾಜ್ಯಗಳಿಗೆ ಮಹಿಳಾ ಸುರಕ್ಷತೆಯನ್ನು ಖಾತ್ರಿಪಡಿಸಿಕೊಳ್ಳುವ ಸಲುವಾಗಿ ಸಲಹೆಗಾರರನ್ನು ಕಳುಹಿಸಿಕೊಡಲಾಗಿದೆ ಎಂದು ಅವರು ಹೇಳಿದ್ದಾರೆ.
2019ರ ಮೇ 16 ರಂದು ಕೂಡ ಕೇಂದ್ರ ಗೃಹ ಸಚಿವಾಲಯವು ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರಗಳನ್ನು ಬರೆದು ಮಹಿಳೆಯರ ಭದ್ರತೆಯನ್ನು ಖಾತ್ರಿಪಡಿಸಿಕೊಳ್ಳುವ ಸೂಚನೆಯನ್ನು ನೀಡಿತ್ತು ಎಂಬುದನ್ನು ಅವರು ಉಲ್ಲೇಖಿಸಿದ್ದಾರೆ.
ಹೈದರಾಬಾದಿನಲ್ಲಿ ನಡೆದ ಪಶುವೈದ್ಯೆ ಮೇಲಿನ ಅತ್ಯಂತ ಘೋರ ಅತ್ಯಾಚಾರ ಮತ್ತು ಕೊಲೆ, ಉತ್ತರ ಪ್ರದೇಶದ ಉನ್ನಾವೊ ಅತ್ಯಾಚಾರ ಸಂತ್ರಸ್ತೆಯ ಕೊಲೆ ಘಟನೆಗಳ ಹಿನ್ನೆಲೆಯಲ್ಲಿ ಕೇಂದ್ರ ಗೃಹಸಚಿವಾಲಯವು ಪತ್ರವನ್ನು ಬರೆದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.