News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಗಣರಾಜ್ಯೋತ್ಸವದ ಅಂಗವಾಗಿ ಹುತಾತ್ಮ ಯೋಧರಿಗೆ ಗೌರವಾರ್ಪಣೆ ಮಾಡಿದ ಮೋದಿ

ನವದೆಹಲಿ: 71 ನೇ ಗಣರಾಜ್ಯೋತ್ಸವದ ಅಂಗವಾಗಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ನವದೆಹಲಿಯಲ್ಲಿ ರಾಷ್ಟ್ರೀಯ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ಗೌರವಾರ್ಪಣೆಗಳನ್ನು ಮಾಡಿದರು.

ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಭೂಸೇನಾ ಮುಖ್ಯಸ್ಥ ಜನರಲ್ ನರವಾಣೆ, ನೌಕಾ ಸೇನೆ ಮುಖ್ಯಸ್ಥ ಅಡ್ಮಿರಲ್ ಕರಂಬಿರ್ ಸಿಂಗ್ ಮತ್ತು ವಾಯುಸೇನೆ ಮುಖ್ಯಸ್ಥ ಆರ್‌ಕೆಎಸ್ ಭದೂರಿಯ ಅವರು ಪ್ರಧಾನಿಯನ್ನು ಯುದ್ಧ ಸ್ಮಾರಕದಲ್ಲಿ ಬರಮಾಡಿಕೊಂಡರು.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ‘ಇಂದು ಬೆಳಿಗ್ಗೆ ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರೀಯ ಯುದ್ಧ ಸ್ಮಾರಕ ದಲ್ಲಿ ಗೌರವಾರ್ಪಣೆ ಮಾಡಿದೆ. ದೇಶಸೇವೆಗಾಗಿ ಪ್ರಾಣಾರ್ಪಣೆ ಮಾಡಿದಂತಹ ಧೀರ ಮಹಿಳೆ ಮತ್ತು ಪುರುಷರಿಗೆ ಭಾರತ ಸದಾ ಚಿರಋಣಿಯಾಗಿರುತ್ತದೆ. ಅವರ ಅಸಾಧಾರಣ ಸೇವೆ ಕೋಟ್ಯಾಂತರ ಭಾರತೀಯರನ್ನು ಪ್ರೇರೇಪಿಸುತ್ತದೆ’ ಎಂದಿದ್ದಾರೆ.

ರಾಷ್ಟ್ರೀಯ ಯುದ್ಧ ಸ್ಮಾರಕವನ್ನು ಕಳೆದ ವರ್ಷ ಫೆಬ್ರವರಿ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದರು. ಸ್ವಾತಂತ್ರ್ಯದ ಬಳಿಕ ದೇಶಕ್ಕಾಗಿ ತಮ್ಮ ಪ್ರಾಣಾರ್ಪಣೆ ಮಾಡಿದ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸುವ ಸಲುವಾಗಿ ಈ ಸ್ಮಾರಕವನ್ನು ನಿರ್ಮಾಣ ಮಾಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಇಲ್ಲಿ ಮಾಲಾರ್ಪಣೆ ಮಾಡಿದ ಬಳಿಕ, ಗಾರ್ಡ್ ಕಮಾಂಡರ್ ಸಲಾಮಿ ಶಸ್ತ್ರವನ್ನು ನೀಡಿದರು.

ಯುದ್ಧ ಸ್ಮಾರಕದ ವಿಸಿಟರ್ ಪುಸ್ತಕದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಭೇಟಿಯ ಸಂದರ್ಭದಲ್ಲಿ ಸಂದೇಶವನ್ನು ಬರೆದರು.

ಗೌರವಾರ್ಪಣೆ ಮಾಡಿದ ಬಳಿಕ ಮೋದಿ ಮತ್ತು ಗಣ್ಯರು ರಾಜಪಥಕ್ಕೆ ತೆರಳಿದರು ಮತ್ತು ಅಲ್ಲಿ ಪರೇಡ್ ವೀಕ್ಷಣೆ ಮಾಡಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top