ಮಂಗಳೂರು: ಕಾಶ್ಮೀರಿ ಪಂಡಿತರಿಗೆ ಸ್ನಾತಕೋತ್ತರ ಕೋರ್ಸ್ಗಳಲ್ಲಿ ಒಂದು ಸ್ಥಾನವನ್ನು ಮೀಸಲಿಡಲು ಮಂಗಳೂರು ವಿಶ್ವವಿದ್ಯಾಲಯ ನಿರ್ಧರಿಸಿದೆ. 2020-21ರ ಶೈಕ್ಷಣಿಕ ವರ್ಷದ ದಾಖಲಾತಿಯೊಂದಿಗೆ ಈ ಪ್ರಕ್ರಿಯೆಯು ಪ್ರಾರಂಭವಾಗಲಿದೆ ಎಂದು ಮೂಲಗಳು ವರದಿ ಮಾಡಿದೆ.
ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ (ಎಂಎಚ್ಆರ್ಡಿ)ದ ಉನ್ನತ ಶಿಕ್ಷಣ ಇಲಾಖೆಯು ಸ್ನಾತಕೋತ್ತರ ಕೋರ್ಸ್ಗಳಲ್ಲಿ ಸೀಟುಗಳನ್ನು ಕಾಶ್ಮೀರಿ ಪಂಡಿತರಿಗೆ ಮೀಸಲಿರಿಸುವಂತೆ ವಿಶ್ವವಿದ್ಯಾಲಯಗಳಿಗೆ ನಿರ್ದೇಶನ ನೀಡಿದ ನಂತರ ಈ ಬೆಳವಣಿಗೆ ನಡೆದಿದೆ.
ಅರ್ಹತಾ ಕೋಟಾದಡಿಯಲ್ಲಿ ಮೀಸಲಾತಿ ನೀಡಲಾಗುವುದು ಮತ್ತು ಇದು ಎನ್ಸಿಸಿ, ಎನ್ಎಸ್ಎಸ್ ಮತ್ತು ಕ್ರೀಡಾ ಕೋಟಾಗಳ ಅಡಿಯಲ್ಲಿ ಪ್ರವೇಶ ಪಡೆಯಲು ಬಯಸುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮೀಸಲಾಗಿರುವ ಸ್ಥಾನಕ್ಕೆ ಸಮನಾಗಿರುತ್ತದೆ ಎಂದು ವಿಶ್ವವಿದ್ಯಾಲಯದ ಉಪಕುಲಪತಿ ಪಿ.ಎಸ್. ಯಡಪಡಿತ್ತಾಯ ಅವರು ವಿಶ್ವವಿದ್ಯಾಲಯದ ಶೈಕ್ಷಣಿಕ ಮಂಡಳಿಯ ಮೊದಲ ವಿಶೇಷ ಸಭೆಯಲ್ಲಿ ತಿಳಿಸಿದ್ದಾರೆ.
ಅರ್ಜಿಗಳು ಬಾರದ ಕಾರಣ ಸೀಟು ಖಾಲಿಯಾಗಿದ್ದರೆ, ಅದನ್ನು ಇತರ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಲಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ವಿಶ್ವವಿದ್ಯಾನಿಲಯದ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಹಾಜರಾತಿಯನ್ನು ನೋಂದಾಯಿಸಲು ಬಯೋ ಮೆಟ್ರಿಕ್ ವ್ಯವಸ್ಥೆಯನ್ನು ಆರಂಭಿಸಲು ವಿಶ್ವವಿದ್ಯಾಲಯ ಯೋಜಿಸಿದೆ.
“ನಾವು ತರಗತಿ ಕೊಠಡಿಗಳ ಒಳಗೆ ಮತ್ತು ಕ್ಯಾಂಪಸ್ನ ಹೆಚ್ಚಿನ ಸ್ಥಳಗಳಲ್ಲಿ ಸಿಸಿಟಿವಿಗಳನ್ನು ಸ್ಥಾಪಿಸಲು ಯೋಜಿಸುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ.
ಅಲ್ಲದೆ, ಶಿಕ್ಷಕರು ಸಂಶೋಧನೆ ಮತ್ತು ಬೋಧನೆಯತ್ತ ಗಮನಹರಿಸಲು ಅನುವು ಮಾಡಿಕೊಡುವ ನಿಟ್ಟಿನಲ್ಲಿ ನಿವೃತ್ತ ವೃತ್ತಿಪರರು ಮತ್ತು ತಜ್ಞರನ್ನು ವಿಶ್ವವಿದ್ಯಾಲಯದ ವಿವಿಧ ಅಧ್ಯಯನ ಪೀಠಗಳು ಮತ್ತು ಕೇಂದ್ರಗಳಿಗೆ ಸಂಯೋಜಕರಾಗಿ ನೇಮಿಸಲು ವಿಶ್ವವಿದ್ಯಾಲಯ ಯೋಜಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.