ನವದೆಹಲಿ: ಆರೋಗ್ಯ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ಶಾಲೆಯಲ್ಲಿ ಇಬ್ಬರು ಶಿಕ್ಷಕರನ್ನು ಆರೋಗ್ಯ ಮತ್ತು ಸ್ವಾಸ್ಥ್ಯ ರಾಯಭಾರಿಯನ್ನಾಗಿ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ರಾಯಭಾರಿಗಳಿಗೆ ತರಗತಿಯ ಮಾನಿಟರ್ಗಳು ಆರೋಗ್ಯ ಮತ್ತು ಸ್ವಾಸ್ಥ್ಯ ಮೆಸೇಜಂರ್ಗಳಾಗಿ ಬೆಂಬಲಿಸಲಿದ್ದಾರೆ.
ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್, ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಲ್ ನಿಶಾಂಕ್ ಮತ್ತು ಆರೋಗ್ಯ ಖಾತೆ ರಾಜ್ಯ ಸಚಿವ ಸಚಿವ ಅಶ್ವಿನಿ ಕುಮಾರ್ ಚೌಬೆ ಅವರು ನಿನ್ನೆ ನವದೆಹಲಿಯಲ್ಲಿ ಆಯುಷ್ಮಾನ್ ಭಾರತ್ ಅಡಿಯಲ್ಲಿ ಶಾಲಾ ಆರೋಗ್ಯ ಮತ್ತು ಸ್ವಾಸ್ಥ್ಯ ರಾಯಭಾರಿ ಉಪಕ್ರಮವನ್ನು ಪ್ರಾರಂಭಿಸಿದರು. ಆರಂಭಿಕವಾಗಿ 200 ಜಿಲ್ಲೆಗಳಲ್ಲಿ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುತ್ತಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಪೋಖ್ರಿಯಾಲ್, ”ಶಿಕ್ಷಣದ ಗುರಿಯು ಕೇವಲ ಜ್ಞಾನವನ್ನು ಹೆಚ್ಚಿಸುವುದು ಮಾತ್ರವಲ್ಲದೆ ಉತ್ತಮ ಆರೋಗ್ಯದ ಬಗ್ಗೆ ಪ್ರಜ್ಞೆಯನ್ನು ಬೆಳೆಸುವುದು ಕೂಡ ಆಗಿದೆ. ಶಿಕ್ಷಕರು ಮಕ್ಕಳಿಗೆ ಉತ್ತಮ ಮಾರ್ಗದರ್ಶಕರಾಗಿದ್ದಾರೆ ಮತ್ತು ಇನ್ನು ಮುಂದೆ ಅವರು ಆರೋಗ್ಯ ಮತ್ತು ಸ್ವಾಸ್ಥ್ಯ ರಾಯಭಾರಿಗಳಾಗಿಯೂ ಕಾರ್ಯನಿರ್ವಹಿಸಲಿದ್ದಾರೆ. ಮೊದಲ ಹಂತದ ಅನುಷ್ಠಾನವು ಮಹತ್ವಾಕಾಂಕ್ಷೆಯ ಜಿಲ್ಲೆಗಳ ಎಲ್ಲಾ ಸಾರ್ವಜನಿಕ, ಪ್ರಾಥಮಿಕ, ಮಾಧ್ಯಮಿಕ ಮತ್ತು ಹಿರಿಯ ಮಾಧ್ಯಮಿಕ ಶಾಲೆಗಳಲ್ಲಿ ನಡೆಯಲಿದೆ” ಎಂದು ಹೇಳಿದ್ದಾರೆ.
ಡಾ. ಹರ್ಷವರ್ಧನ್ ಮಾತನಾಡಿ, ”ಆಯುಷ್ಮಾನ್ ಭಾರತ್ – ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳ ಅಡಿಯಲ್ಲಿ ರೂಪಿಸಲಾಗಿರುವ ಈ ಶಾಲಾ ಆರೋಗ್ಯ ಉಪಕ್ರಮವು ಶಾಲೆಗೆ ಹೋಗುವ ಮಕ್ಕಳ ಆರೋಗ್ಯ ಮತ್ತು ಯೋಗಕ್ಷೇಮವನ್ನು ಉತ್ತೇಜಿಸುವ ಮೂಲಕ ಅವರ ಬೆಳವಣಿಗೆ, ಅಭಿವೃದ್ಧಿ ಮತ್ತು ಶೈಕ್ಷಣಿಕ ಸಾಧನೆಯನ್ನು ಉತ್ತೇಜಿಸಲಿದೆ. ಈ ಉಪಕ್ರಮವು ಸರ್ಕಾರದ ಇತರ ಉಪಕ್ರಮಗಳಾದ ಫಿಟ್ ಇಂಡಿಯಾ, ಈಟ್ ರೈಟ್ ಅಭಿಯಾನ, ಶಾಲಾ ಮಕ್ಕಳ ಆರೋಗ್ಯದ ಸರ್ವತೋಮುಖ ಮತ್ತು ಸಮಗ್ರ ಅಭಿವೃದ್ಧಿ ಮಾದರಿಗಾಗಿ ರೂಪಿಸಲಾದ ಪೋಶನ್ ಅಭಿಯಾನದ ಜೊತೆ ಪರಿಣಾಮಕಾರಿಯಾಗಿ ಸಂಬಂಧ ಹೊಂದಿದೆ. ಈ ಉಪಕ್ರಮದ ಮೂಲಕ ಎಲ್ಲರ ಆರೋಗ್ಯದ ಕನಸು ಈಡೇರಲಿದೆ” ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.