ಬೆಂಗಳೂರು : ಕೊರೋನಾವೈರಸ್ನ ಭೀತಿಯಿಂದ ಇಡೀ ದೇಶವೇ ಕಂಗೆಟ್ಟಿದೆ. ಕರ್ನಾಟಕದಲ್ಲಿಯೂ ಸೋಂಕಿತರಿರುವುದು ದೃಢಪಟ್ಟಿದೆ. ಹೀಗಾಗಿ, ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆದೇಶ ಹೊರಡಿಸಿದ್ದರು. ಕೆಲವು ಶಾಲೆಗಳು ಈ ಆದೇಶವನ್ನು ಪಾಲನೆ ಮಾಡಿದ್ದರೆ, ಇನ್ನು ಕೆಲವು ಶಾಲೆಗಳು ಈ ಆದೇಶವನ್ನು ಗಾಳಿಗೆ ತೂರಿ ತರಗತಿಗಳನ್ನು ನಡೆಸಿದ ಬಗ್ಗೆ ತಿಳಿದು ಬಂದಿದೆ.
ಬೆಂಗಳೂರು ಉತ್ತರ, ದಕ್ಷಿಣ ಹಾಗೂ ಗ್ರಾಮಾಂತರ ವ್ಯಾಪ್ತಿಯಲ್ಲಿನ ಎಲ್ಲಾ ಸರ್ಕಾರಿ, ಸರ್ಕಾರೇತರ ಶಾಲೆಗಳನ್ನು ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕಾ ಕ್ರಮವಾಗಿ ಶಿಕ್ಷಣ ಸಚಿವರು ಈ ಆದೇಶವನ್ನು ಹೊರಡಿಸಿದ್ದರು. ಆದರೆ ಸಚಿವರ ಆದೇಶಕ್ಕೆ ಕ್ಯಾರೇ ಎನ್ನದ ಕೆಲವು ಖಾಸಗಿ ಶಾಲೆಗಳ ಆಡಳಿತ ಮಂಡಳಿ ತರಗತಿಗಳನ್ನು ನಡೆಸುವ ಮೂಲಕ ಬೇಜವಾಬ್ದಾರಿಯನ್ನು ಪ್ರದರ್ಶಿಸಿದ್ದವು.
ತಮ್ಮ ಆದೇಶವನ್ನು ಗಾಳಿಗೆ ತೂರಿದ ಕೆಲವು ಖಾಸಗಿ ಸಂಸ್ಥೆಗಳ ವಿರುದ್ಧ ಕಿಡಿ ಕಾರಿರುವ ಸಚಿವರು, ”ಶಾಲೆಗಳು ವಿದ್ಯಾರ್ಥಿಗಳ ಹಿತ ಕಾಪಾಡುವಲ್ಲಿಯೂ ಕಾಳಜಿ ವಹಿಸಬೇಕಿದೆ. ಕೇವಲ ತಮ್ಮ ಹಿತಾಸಕ್ತಿಗೆ ಅನುಗುಣವಾಗಿ ಕಾರ್ಯ ನಿರ್ವಹಿಸುವುದಲ್ಲ. ಮಕ್ಕಳ ಹಿತ ಕಾಯುವುದು ಮುಖ್ಯವೇ ಹೊರತು ತಮ್ಮ ಪ್ರತಿಷ್ಟೆಯನ್ನು ಕಾಪಾಡಿಕೊಳ್ಳುವುದಲ್ಲ” ಎಂದು ಬುದ್ಧಿವಾದವನ್ನೂ ಹೇಳಿದ್ದಾರೆ.
ಆದೇಶ ಪಾಲಿಸದೆ ಇದ್ದರೆ, ಅದೆಷ್ಟೇ ಪ್ರತಿಷ್ಟಿತ ಸಂಸ್ಥೆಗಳಾದರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಅವರು ಈ ವೇಳೆ ಎಚ್ಚರಿಕೆಯನ್ನೂ ನೀಡಿದ್ದಾರೆ. ರಾಜ್ಯ ಸರ್ಕಾರದ ಆದೇಶವನ್ನು ಪಾಲಿಸದಿದ್ದರೆ ಪರಿಣಾಮವನ್ನು ಎದುರಿಸಬೇಕಾಗುವುದು ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.