ಬೆಂಗಳೂರು: ವಿಶ್ವದಾದ್ಯಂತ ಕೊರೋನ ಸೋಂಕಿನ ಅಟ್ಟಹಾಸಕ್ಕೆ ಸುಮಾರು 5000 ಮಂದಿ ಬಲಿಯಾಗಿದ್ದಾರೆ. ಭಾರತದಲ್ಲಿಯೂ ಈ ಸೋಂಕು ಹಬ್ಬಿದ್ದು, ಕರ್ನಾಟಕದ ಕಲಬುರ್ಗಿಯಲ್ಲಿ ಈಗಾಗಲೇ ಕೊರೋನದಿಂದ ಓರ್ವ ಬಲಿಯಾದ ಘಟನೆಯೂ ನಡೆದಿದೆ. ರಾಜ್ಯದಲ್ಲಿಯೇ ಮೊದಲ ಸಾವು ಸಂಭವಿಸಿರುವುದು ನಿಜಕ್ಕೂ ಬೇಸರದ ಸಂಗತಿ. ಕಲಬುರ್ಗಿ ಸೇರಿದಂತೆ ರಾಜ್ಯದೆಲ್ಲೆಡೆ ಸೋಂಕು ವ್ಯಾಪಿಸದಂತೆ ತಡೆಯುವ ಎಲ್ಲಾ ಮಾರ್ಗಗಳನ್ನು, ಮುಂಜಾಗ್ರತಾ ಕ್ರಮಗಳನ್ನು ಈಗಾಗಲೇ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸ್ಪಷ್ಟ ಪಡಿಸಿದ್ದಾರೆ.
ಅಲ್ಲದೇ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಕೊರೋನವೈರಸ್ ತಪಾಸಣಾ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಅವರು ತಿಳಿಸಿದ್ದಾರೆ.
ಕೊರೋನ ವ್ಯಾಪಿಸುವುದನ್ನು ತಡೆಯುವ ವಿಚಾರದಲ್ಲಿ ರಾಜ್ಯ ಸರ್ಕಾರ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ಮಾರಕ ಖಾಯಿಲೆಯ ವಿರುದ್ಧ ಯಾವ ಕ್ರಮ ಕೈಗೊಳ್ಳುವುದಕ್ಕೂ ಸರ್ಕಾರ ಸದಾ ಸಿದ್ಧ ಎಂದು ಅವರು ಭರವಸೆ ನೀಡಿದ್ದಾರೆ. ಜೊತೆಗೆ ಈ ಸಂದರ್ಭವನ್ನು ಬಳಸಿಕೊಂಡು ದುಬಾರಿ ಬೆಲೆಗೆ ಮಾಸ್ಕ್, ಸ್ಯಾನಿಟೈಸರ್, ಔಷಧಗಳನ್ನು ಮಾರಾಟ ಮಾಡಿ, ಜನರನ್ನು ಮೋಸಗೊಳಿಸುವ ಮಾರಾಟಗಾರರ ಲೈಸೆಸ್ಸ್ ರದ್ದು ಮಾಡುವುದಾಗಿಯೂ ಅವರು ಎಚ್ಚರಿಸಿದ್ದಾರೆ.
ಅಲ್ಲದೆ ಆರೋಗ್ಯ ಸಚಿವ ಶ್ರೀರಾಮುಲು ಅವರು ತಜ್ಞ ವೈದ್ಯರ ಜೊತೆಗೆ ಕಲಬುರ್ಗಿಗೆ ಹೋಗಿ ಪರಿಸ್ಥಿತಿಯ ಬಗ್ಗೆ ಅವಲೋಕನ ನಡೆಸುವ ಬಗ್ಗೆಯೂ ಬಿಎಸ್ವೈ ಮಾಹಿತಿ ನೀಡಿದ್ದಾರೆ.
ಇದೇ ವೇಳೆ ಮಾತನಾಡಿದ ಆರೋಗ್ಯ ಸಚಿವ ಶ್ರೀರಾಮುಲು, ಕಲಬುರ್ಗಿಯಲ್ಲಿ ಕೊರೋನದಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಸ್ಥರ ಮೇಲೆಯೂ ವಿಶೇಷ ನಿಗಾ ವಹಿಸಲಾಗಿದೆ. ಆ ವ್ಯಕ್ತಿ ಜೊತೆಗೆ ಸಂಪರ್ಕ ಹೊಂದಿದ್ದ ವ್ಯಕ್ತಿಗಳನ್ನು ವಿಶೇಷ ಕೊಠಡಿಯಲ್ಲಿರಿಸಿ, ಅವರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಮೃತ ವ್ಯಕ್ತಿ ಅಂತಿಮ ಸಂಸ್ಕಾರವನ್ನು ಸರ್ಕಾರದ ಆದೇಶದಂತೆಯೇ ನಡೆಸಲಾಗುತ್ತದೆ. ಆ ಮೂಲಕ ಕಲಬುರ್ಗಿಯಲ್ಲಿ ಬೇರೆ ವ್ಯಕ್ತಿಗಳಿಗೆ ಸೋಂಕು ಹರಡದಂತೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.