ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಕೊರೋನವೈರಸ್ ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ತಡೆಗಟ್ಟುವ ಸಲುವಾಗಿ ದೇಶವ್ಯಾಪಿ ಲಾಕ್ ಡೌನ್ ಅನ್ನು ಏಪ್ರಿಲ್ 14ರ ನಂತರವೂ ವಿಸ್ತರಿಸುವ ಬಗ್ಗೆ ಸಲಹೆಯನ್ನು ನೀಡಿದ್ದಾರೆ.
ಎಲ್ಲಾ ಪಕ್ಷಗಳ ಮುಖಂಡರೊಂದಿಗೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಮೋದಿ, ದೇಶದಲ್ಲಿ ಸಾಂಕ್ರಾಮಿಕ ರೋಗದ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್ 14ರಂದು ಲಾಕ್ ಡೌನ್ ಅನ್ನು ಹಿಂಪಡೆಯುವುದು ಸಮಂಜಸವಲ್ಲ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳನ್ನು ಸಂಪರ್ಕಿಸಿ ಮಾತನಾಡುವುದಾಗಿ ಹೇಳಿದ ಮೋದಿ, ಲಾಕ್ ಡೌನ್ ಅನ್ನು ಸಂಪೂರ್ಣವಾಗಿ ಹಿಂಪಡೆಯುವುದು ಸಾಧ್ಯವಿಲ್ಲ ಎಂಬುದನ್ನು ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದು ಹೇಳಲಾಗಿದೆ.
“ಪ್ರತಿಯೊಬ್ಬರ ಜೀವವನ್ನು ರಕ್ಷಣೆ ಮಾಡುವುದು ಸರಕಾರದ ಆದ್ಯತೆಯಾಗಿದೆ. ದೇಶದ ಪರಿಸ್ಥಿತಿಯು ಸಾಮಾಜಿಕ ತುರ್ತುಪರಿಸ್ಥಿತಿಯಾಗಿದೆ. ಕಠಿಣ ನಿರ್ಧಾರ ತೆಗೆದುಕೊಳ್ಳುವುದು ಅನಿವಾರ್ಯವಾಗಿದೆ ಮತ್ತು ನಾವು ಸದಾ ಜಾಗೃತರಾಗಿರುವುದು ಅವಶ್ಯಕವಾಗಿದೆ” ಎಂದು ಮೋದಿ ಹೇಳಿದ್ದಾರೆ.
ಕೋವಿಡ್-19 ಬಳಿಕ ಜೀವನವು ಹಿಂದಿನಂತೆ ಇರಲಾರದು, ಕೊರೋಣೋತ್ತರ ಮತ್ತು ಕೊರೋನಾ ಪೂರ್ವ ಎಂಬ ಸನ್ನಿವೇಶ ಉದ್ಭವಿಸಬಹುದು ಎಂದು ಮೋದಿ ಹೇಳಿದ್ದಾರೆ ಎನ್ನಲಾಗಿದೆ.
“ದೊಡ್ಡ ಪ್ರಮಾಣದ ಭಾವನಾತ್ಮಕ, ಸಾಮಾಜಿಕ ಮತ್ತು ವೈಯಕ್ತಿಕ ಬದಲಾವಣೆಗಳು ಸಂಭವಿಸಲಿದೆ” ಎಂದು ಅವರು ಹೇಳಿದ್ದಾರೆ.
ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಸಲುವಾಗಿ ವಿಧಿಸಲಾಗಿರುವ ಲಾಕ್ ಡೌನ್ ಏಪ್ರಿಲ್ 14 ರಂದು ಕೊನೆಗೊಳ್ಳಲಿದೆ. ಆದರೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಲಾಕ್ ಡೌನ್ ಅನ್ನು ವಿಸ್ತರಿಸಲು ಬೇಡಿಕೆಯನ್ನು ಇಡುತ್ತಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ ಮತ್ತು ಅಷ್ಟು ದಿನಗಳ ಕಾಲ ಜನರ ಜೀವ ರಕ್ಷಣೆಗಾಗಿ ಲಾಕ್ ಡೌನ್ ವಿಸ್ತರಿಸುವ ನಿರೀಕ್ಷೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.