ನವದೆಹಲಿ: ದೇಶವನ್ನು ಲಾಕ್ಡೌನ್ ಮಾಡಲಾಗಿರುವುದರಿಂದ ಜನ ಸಾಮಾನ್ಯರಿಗೆ ದಿನ ಬಳಕೆಗೆ ಬೇಕಾದ ವಸ್ತುಗಳನ್ನು ತಲುಪುವಂತೆ ಮಾಡುವಲ್ಲಿ ತೊಡಕಾಗುತ್ತಿದೆ. ಸರಕುಗಳನ್ನು ಹೊತ್ತೊಯ್ಯುವ ಟ್ರಕ್ಗಳು ಲಾಕ್ಡೌನ್ ನಿಯಮಗಳಿಂದಾಗಿ ನಿಗದಿತ ಪ್ರದೇಶಗಳಿಗೆ ತೆರಳುವುದು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಸರಕು ಸಾಗಿಟದ ಟ್ರಕ್ಗಳಿಗೆ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ, ಹಾಗೆಯೇ ಸರಕುಗಳನ್ನು ಇಟ್ಟುಕೊಳ್ಳಲು ಸರಿಯಾದ ಗೋದಾಮು ವ್ಯವಸ್ಥೆ ಮತ್ತು ಕೋಲ್ಡ್ ಸ್ಟೋರೇಜ್ ಸಿಸ್ಟಂಗಳನ್ನು ಸಿದ್ಧ ಪಡಿಸುವಂತೆ ಆದೇಶಿಸಿ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೆ ಆದೇಶಿಸಿದೆ. ಅಗತ್ಯ ಮತ್ತು ಅಗತ್ಯವಲ್ಲದ ವಸ್ತುಗಳನ್ನು ಸಾಗಿಸುವ ವಾಹನಗಳಿಗೆ ಮುಕ್ತ ಅವಕಾಶ ಕಲ್ಪಿಸುವಂತೆ ತಿಳಿಸಲಾಗಿದೆ.
ಈ ಬಗ್ಗೆ ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಕೇಂದ್ರ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಸರಕು ಸಾಗಾಟದ ಟ್ರಕ್, ವಾಹನಗಳು ವಸ್ತುಗಳನ್ನು ಸರಬರಾಜು ಮಾಡುವುದಕ್ಕೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅವುಗಳಿಗೆ ಸರಿಯಾಗಿ ಪಾಸ್ ನೀಡದೇ ಇರುವುದು, ಇನ್ನು ಪಾಸ್ಗಳಿದ್ದರೂ ಅಧಿಕಾರಿಗಳು ಅವುಗಳಿಗೆ ಮನ್ನಣೆ ನೀಡದೇ ಇರುವುದು, ಚಾಲಕರನ್ನು ಹಿಡಿದಿಡುವುದು ಮೊದಲಾದ ಕಾರಣಗಳಿಂದ ಅಗತ್ಯ ವಸ್ತುಗಳನ್ನು ಸಾಗಿಸುವ ವಾಹನಗಳಿಗೆ ಓಡಾಟ ನಡೆಸಲು ಸಾಧ್ಯವಾಗುತ್ತಿಲ್ಲ. ಪರಿಸ್ಥಿತಿ ಹೀಗೆಯೇ ಮುಂದುವರೆದರೆ ಮುಂದಿನ ದಿನಗಳಲ್ಲಿ ದೈನಂದಿನ ಅಗತ್ಯಗಳನ್ನು ಪೂರೈಸಿಕೊಳ್ಳುವ ನಿಟ್ಟಿನಲ್ಲಿ ಪರದಾಡುವ ಸ್ಥಿತಿ ನಿರ್ಮಾಣವಾಗುವ ಸಾಧ್ಯತೆಯಿದೆ. ಇಂತಹ ವ್ಯವಸ್ಥೆಯ ಕಾರಣದಿಂದ ರಾಜ್ಯಗಳ ಒಳಗೆ ಮತ್ತು ಅಂತರ್ರಾಜ್ಯಗಳ ನಡುವೆ ಸರಕು ಸಾಗಾಟಕ್ಕೂ ತೊಂದರೆಯಾಗುತ್ತಿದೆ. ಆದ್ದರಿಂದ ಪರಿಸ್ಥಿತಿಯ ಗಂಭೀರತೆ ಅರಿತು ಎಲ್ಲಾ ಸರಕು ಸಾಗಾಟ ವಾಹನಗಳಿಗೆ ದೇಶಾದ್ಯಂತ ಮುಕ್ತ ಸಂಚಾರಕ್ಕೆ ಅವಕಾಶ ನೀಡುವಂತೆ ತಿಳಿಸಿದ್ದಾರೆ.
ಅಲ್ಲದೆ ದೇಶದೊಳಗಿನ ಎಲ್ಲಾ ಗೋದಾಮುಗಳು, ಕೋಲ್ಡ್ ಸ್ಟೋರೇಜ್ ವ್ಯವಸ್ಥೆಗಳನ್ನು ಸಮರ್ಪಕವಾಗಿ ಬಳಸುವ ಮೂಲಕ ವಸ್ತುಗಳನ್ನು ಸಂರಕ್ಷಿಸಿಕೊಳ್ಳುವಂತೆಯೂ ಪತ್ರದಲ್ಲಿ ತಿಳಿಸಿದ್ದಾರೆ. ಇವೆಲ್ಲವುಗಳ ಬಗ್ಗೆ ಗಮನ ಹರಿಸುವಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೂ ಆದೇಶಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.