ಬೆಂಗಳೂರು: ಕೊರೋನಾ ಮಹಾಮಾರಿಯ ವಿರುದ್ಧ ಹೋರಾಟದಲ್ಲಿ ರಾಜ್ಯ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದು, ಜನಸಾಮಾನ್ಯರಿಗೆ ಸಹಾಯವಾಗುವ ನಿಟ್ಟಿನಲ್ಲಿ “ಆಪ್ತಮಿತ್ರ” ಸಹಾಯವಾಣಿ 14410 ಮತ್ತು ಮೊಬೈಲ್ ಆ್ಯಪ್ ಅನ್ನು ಬಳಕೆಗೆ ತಂದಿದೆ. ಇನ್ಫೋಸಿಸ್ ಫೌಂಡೇಶನ್ ವತಿಯಿಂದ ಅಭಿವೃದ್ಧಿ ಮಾಡಲಾದ ಈ ಆ್ಯಪ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಗೃಹ ಕಛೇರಿ ಕೃಷ್ಣಾದಲ್ಲಿ ಇಂದು ಚಾಲನೆ ನೀಡಿದ್ದಾರೆ.
ಬಳಿಕ ಮಾತನಾಡಿದ ಅವರು, ಇನ್ಫೋಸಿಸ್ ಫೌಂಡೇಶನ್ ವತಿಯಿಂದ ಅಭಿವೃದ್ಧಿ ಮಾಡಲಾದ ಈ ಆ್ಯಪ್ ಮತ್ತು ಸಹಾಯವಾಣಿಯ ಮೂಲಕ ಜನರಿಗೆ ಆರೋಗ್ಯ ಮಾಹಿತಿ ಪಡೆದುಕೊಳ್ಳಲು ಅವಕಾಶ ನೀಡಲಾಗುತ್ತಿದೆ. ಜ್ವರ, ಶೀತ, ಕೆಮ್ಮು, ತಲೆನೋವು ಮೊದಲಾಗಿ ಯಾವುದೇ ರೀತಿಯ ಆರೋಗ್ಯ ಸಂಬಂಧಿ ಸಮಸ್ಯೆಗಳಿದ್ದರೂ 14410 ಗೆ ಕರೆ ಮಾಡುವ ಮೂಲಕ ಪರಿಹಾರ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.
ಕೊರೋನಾ ಲಕ್ಷಣಗಳಿರುವ ಜನರಿಗೆ ಮಾರ್ಗದರ್ಶನ ನೀಡುವುದು ಮತ್ತು ಈ ಸಹಾಯವಾಣಿಯ ಮೂಲಕವೇ ಇತರ ರೋಗಗಳಿಗೂ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಇದನ್ನು ಆರಂಭಿಸಲಾಗಿದೆ. ಜೊತೆಗೆ ಆಸ್ಪತ್ರೆಗೆ ಹೋಗುವುದು, ಮನೆಯಿಂದ ಹೊರಹೋಗುವುದು ಮೊದಲಾದವುಗಳಿಂದ ಹರಡಬಹುದಾದ ಕೊರೋನಾ ಸೋಂಕನ್ನು ನಿಯಂತ್ರಿಸುವ ಸಲುವಾಗಿ ಇಂತಹ ಕ್ರಮ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಮಾಹಿತಿ ನೀಡಿದ್ದಾರೆ.
ಇನ್ನು ಈ ಆ್ಯಪ್ ಮೂಲಕ ರಾಜ್ಯದೊಳಗಿನ ಎಲ್ಲಾ ಜನರು, ವಿಶೇಷವಾಗಿ ಹಾಟ್ಸ್ಪಾಟ್ ಏರಿಯಾಗಳಲ್ಲಿ ಕೊರೋನಾ ಸೋಂಕಿನ ಲಕ್ಷಣಗಳಿಂದ ಬಳಲುತ್ತಿರುವವರನ್ನು ಪತ್ತೆಹಚ್ಚಲಾಗುತ್ತದೆ. ಅವರಿಗೆ ಸ್ವಯಂ ನಿರ್ಬಂಧ ಕ್ರಮಗಳ ಕುರಿತು ಅರಿವು ಮೂಡಿಸುವಂತೆ ಈ ಆ್ಯಪ್ ಅನ್ನು ಅಭಿವೃದ್ಧಿ ಮಾಡಲಾಗಿದೆ. ತೆಗೆದುಕೊಳ್ಳಬೇಕಾದ ಔಷಧ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಅವರು ಸಂಪೂರ್ಣ ಗುಣಮುಖರಾಗುವವರೆಗೆ ಅವರ ಜೊತೆ ಸಂಪರ್ಕದಲ್ಲಿರಲು ಇದು ಸಹಾಯ ಮಾಡಲಿದೆ. ಹಾಟ್ಸ್ಪಾಟ್ಗಳಲ್ಲಿ ಲಾಕ್ಡೌನ್ ಕ್ರಮ ಹೆಚ್ಚಿಸಲು, ನಿಯಂತ್ರಣದಲ್ಲಿರುವ ಪ್ರದೇಶದಲ್ಲಿ ಆರ್ಥಿಕ ಚಟುವಟಿಕೆಗಳನ್ನು ಪುನರಾರಂಭಿಸಲು ಮತ್ತು ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವುದಕ್ಕೂ ಈ ಆ್ಯಪ್ ಸಹಾಯ ಮಾಡಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.