ಬೆಂಗಳೂರು: ಕೋವಿಡ್-19 ಹೋಗಲಾಡಿಸಲು ರಾಜ್ಯ ತೆಗೆದುಕೊಂಡಿರುವ ನಿಯಂತ್ರಣ ಕ್ರಮಗಳ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಅಶರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರು, ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿದ ಹರ್ಷವರ್ಧನ್, ಕೊರೋನಾ ನಿಯಂತ್ರಿಸಲು ತೆಗೆದುಕೊಳ್ಳುತ್ತಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದರು. ಈ ವೇಳೆ ಕರ್ನಾಟಕದ ನಿರ್ಣಾಯಕ ಕ್ರಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ಸಚಿವರು, ಉಳಿದ ರಾಜ್ಯಗಳಲ್ಲೂ ಕರ್ನಾಟಕ ಅನುಸರಿಸುತ್ತಿರುವ ಕ್ರಮಗಳನ್ನು ಅಳವಡಿಸಿಕೊಳ್ಳುವ ಮೂಲಕ ಪರಿಸ್ಥಿತಿ ನಿಯಂತ್ರಿಸಿಕೊಳ್ಳುವಂತೆ ತಿಳಿಸಿದ್ದಾರೆ.
ಚರ್ಚೆಯ ಬಳಿಕ ಮಾಹಿತಿ ನೀಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್, ಕೊರೋನಾ ಸೋಂಕಿಗೆ ಆರಂಭದಿಂದ ಈ ವರೆಗೆ ತೆಗೆದುಕೊಂಡ ಎಲ್ಲಾ ಮುಂಜಾಗ್ರತೆ, ನಿಯಂತ್ರಣ ಕ್ರಮಗಳ ಬಗ್ಗೆ ಕೇಂದ್ರ ಮಾಹಿತಿ ಪಡೆದುಕೊಂಡಿದೆ. ಡೇಂಜರ್ ಝೋನ್ ಗಳಲ್ಲಿ ತೆಗೆದುಕೊಂಡಿರುವ ಕ್ರಮಗಳ ಬಗ್ಗೆಯೂ ತಿಳಿಸಲಾಗಿದೆ. ಅಲ್ಲದೆ ಇಲ್ಲಿ ಅನುಸರಿಸಲಾಗುತ್ತಿರುವ ಕ್ರಮಗಳ ಬಗ್ಗೆ ಇತರ ರಾಜ್ಯಗಳಿಗೂ ಸಲಹೆ ನೀಡುವಂತೆ ಕೇಂದ್ರ ಸರ್ಕಾರ ತಿಳಿಸಿರುವುದಾಗಿ ಹೇಳಿಕೆ ನೀಡಿದ್ದಾರೆ.
ಇನ್ನು ಕೊರೋನಾ ರೋಗಿಗೆ ಪ್ಲಾಸ್ಮಾ ಚಿಕಿತ್ಸೆ ನೀಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಬೆಂಗಳೂರಿನ ಮೆಡಿಕಲ್ ಕಾಲೇಜಿನಲ್ಲಿ ಶನಿವಾರ ರೋಗಿಗೆ ಪ್ಲಾಸ್ಮಾ ಥೆರಪಿ ನಡೆಸಲಾಗುತ್ತಿದ್ದು, ಪ್ಲಾಸ್ಮಾ ನೀಡಲು ದಾನಿಯೂ ಸಿಕ್ಕಿದ್ದಾರೆ ಎಂದು ತಿಳಿಸಿದ್ದಾರೆ.
ಈ ಕಾನ್ಫರೆನ್ಸ್ ಬಗ್ಗೆ ಮಾಹಿತಿ ನೀಡಿದ ರಾಜ್ಯ ಆರೋಗ್ಯ ಸಚಿವ ಶ್ರೀರಾಮುಲು, ರಾಜ್ಯ ಕೋವಿಡ್ ಪಟ್ಟಿಯಲ್ಲಿ ದೇಶದಲ್ಲಿ11 ನೇ ಸ್ಥಾನದಲ್ಲಿದೆ. ಇಲ್ಲಿ ಅನುಸರಿಸಲಾಗುತ್ತಿರುವ ಎಲ್ಲಾ ಕ್ರಮಗಳ ಬಗ್ಗೆಯೂ ಕೇಂದ್ರ ಮಾಹಿತಿ ಪಡೆದುಕೊಂಡಿದೆ. ರೆಡ್ ಝೋನ್ ಗಳಲ್ಲಿ ಯಾವುದೇ ವ್ಯವಹಾರ ನಡೆಯದಂತೆ ಸಂಪೂರ್ಣ ಲಾಕ್ಡೌನ್ ಮಾಡಲಾಗಿದೆ. 11 ಇಲಾಖೆಗಳಿಗೆ ಸಂಪೂರ್ಣ ನಿಯಂತ್ರಣ ಕ್ರಮಗಳನ್ನು ಅನುಸರಿಸುವ ಮೂಲಕ ಕಾರ್ಯ ನಿರ್ವಹಿಸಲು ಸೂಚಿಸಲಾಗಿರುವುದಾಗಿಯೂ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.