ಬೆಂಗಳೂರು: ಕೊರೋನಾದಿಂದ ದೇಶದ ಆರ್ಥಿಕ ಸ್ಥಿತಿ ಏರುಪೇರಾಗಿದೆ. ರಾಜ್ಯದಲ್ಲಿಯೂ ಲಾಕ್ಡೌನ್ ನಿಯಮಗಳಿಂದಾಗಿ ಆರ್ಥಿಕತೆಯ ಮೇಲೆ ಹೊಡೆತ ಬಿದ್ದಿದೆ. ಇಂತಹ ಪರಿಸ್ಥಿತಿಯಲ್ಲಿ ಆರ್ಥಿಕತೆಯನ್ನು ಕೊಂಚ ಮೇಲೆತ್ತುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮಕ್ಕೆ ಮುಂದಾಗಿದೆ.
ಈ ಕುರಿತಾದಂತೆ ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸಿಕೊಂಡೇ, ರಾಜ್ಯದ 9 ಕೊರೋನಾ ಮುಕ್ತ ಹಸಿರು ಜಿಲ್ಲೆಗಳಲ್ಲಿ ಕೈಗಾರಿಕೆಗಳನ್ನು ಆರಂಭಿಸುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಅವರು ಆದೇಶ ಹೊರಡಿಸಿದ್ದಾರೆ.
ರೆಡ್ ಝೋನ್, ಕಂಟೇನ್ಮೆಂಟ್ ವಲಯಗಳನ್ನು ಹೊರತುಪಡಿಸಿದಂತೆ ಕೊರೋನಾ ಮುಕ್ತವಾಗಿರುವ ರಾಜ್ಯದ 9 ಜಿಲ್ಲೆಗಳಲ್ಲಿ ಕೈಗಾರಿಕೋದ್ಯಮಗಳಿಗೆ ಕಾರ್ಯ ನಿರ್ವಹಿಸಲು ಹಸಿರು ನಿಶಾನೆ ಸಿಕ್ಕಿದೆ. ರಾಜ್ಯದ ಚಾಮರಾಜನಗರ, ಹಾಸನ, ಕೋಲಾರ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಕೈಗಾರಿಕೆಗಳನ್ನು ಸುರಕ್ಷಾ ಕ್ರಮಗಳನ್ನು ಅನುಸರಿಸುವ ಮೂಲಕ ಆರಂಭಿಸುವಂತೆ ರಾಜ್ಯ ಸರ್ಕಾರ ಆದೇಶದಲ್ಲಿ ತಿಳಿಸಿದೆ.
ಇನ್ನು ಈ ಆದೇಶದನ್ವಯ ಕಾರ್ಯ ನಿರ್ವಹಿಸಲು ಬಯಸುವ ಘಟಕಗಳು ನಿಗದಿಪಡಿಸಿದ ನಮೂನೆಯ ಅರ್ಜಿ ತುಂಬಿ ಕೈಗಾರಿಕಾ ಇಲಾಖೆಯ ಆಯುಕ್ತರು, ನಿರ್ದೇಶಕರು, ಜಿಲ್ಲಾ ಕೇಂದ್ರದ ಜಂಟಿ ಆಯುಕ್ತರಿಗೆ ಸಲ್ಲಿಸುವ ಮೂಲಕ ಅನುಮತಿ ಪಡೆಯಲು ಸೂಚಿಸಲಾಗಿದೆ. ಅನುಮತಿ ದೊರೆತ ನಂತರವಷ್ಟೇ ಕೊರೋನಾ ನಿಯಂತ್ರಣ ಕ್ರಮಗಳನ್ನು ಅನುಸರಿಸಿ ಕಾರ್ಯ ನಿರ್ವಹಿಸುವಂತೆಯೂ ಈ ಆದೇಶದಲ್ಲಿ ತಿಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.