ಕೋಲ್ಕತ್ತಾ: ಅಂಫಾನ್ ಚಂಡಮಾರುತ ಪಶ್ಚಿಮ ಬಂಗಾಳವನ್ನು ಅಕ್ಷರಶಃ ನಲುಗಿ ಹೋಗುವಂತೆ ಮಾಡಿದೆ. ಅಪಾರ ಪ್ರಮಾಣದ ಆಸ್ತಿ ಪಾಸ್ತಿ ನಷ್ಟ ಅಲ್ಲಿ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಇಂದು ಅಲ್ಲಿಗೆ ತೆರಳಿ ಚಂಡಮಾರುತ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆಯನ್ನು ನಡೆಸಿದರು.
ಮೋದಿ ಅವರು ಇಂದು ನವದೆಹಲಿಯಿಂದ ಪಶ್ಚಿಮ ಬಂಗಾಳಕ್ಕೆ ತೆರಳಿದರು. ಈ ಸಂದರ್ಭದಲ್ಲಿ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿಯನ್ನು ಸ್ವಾಗತಿಸಿದರು.
ನಂತರ ಹೆಲಿಕಾಪ್ಟರ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅಂಫಾನ್ ಚಂಡಮಾರುತ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಅವರಿಗೆ ಮಮತಾ ಬ್ಯಾನರ್ಜಿ ಅವರು ಸಾಥ್ ನೀಡಿದ್ದಾರೆ.
ಮಮತಾ ಬ್ಯಾನರ್ಜಿ ಅವರೊಂದಿಗೆ ಮಾತುಕತೆ ನಡೆಸಿ ಪರಿಸ್ಥಿತಿಯ ಮಾಹಿತಿಯನ್ನು ಪಡೆದು ಕೊಂಡಿದ್ದಾರೆ. ಅಧಿಕಾರಿಗಳಿಂದಲೂ ಮಾಹಿತಿಯನ್ನು ಮೋದಿ ಪಡೆದುಕೊಂಡಿದ್ದಾರೆ.
ಅಂಫಾನ್ ಪೀಡಿತ ಪಶ್ಚಿಮ ಬಂಗಾಳಕ್ಕೆ ಮೋದಿಯವರು ರೂ. 1 ಸಾವಿರ ಕೋಟಿಗಳ ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ಸಾವಿಗೀಡಾದವರ ಕುಟುಂಬದವರಿಗೆ ರೂ. 2 ಲಕ್ಷ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಘೋಷಣೆ ಮಾಡಲಾಗಿದೆ.
ರಾಜ್ಯ ಮತ್ತು ಕೇಂದ್ರ ಸರಕಾರಗಳು ಸಂತ್ರಸ್ತರ ನೆರವಿಗೆ ಬೇಕಾದ ಎಲ್ಲಾ ಕಾರ್ಯಗಳನ್ನು ಜಂಟಿಯಾಗಿ ಮಾಡುತ್ತಿವೆ ಎಂದು ಮೋದಿ ಹೇಳಿದ್ದಾರೆ.
ಅಂಫಾನ್ ಚಂಡಮಾರುತದ ಪ್ರಭಾವದಿಂದ ಪಶ್ಚಿಮ ಬಂಗಾಳ ಮತ್ತು ಒಡಿಸ್ಸಾದಲ್ಲಿ ಭಾರಿ ಮಳೆ ಮತ್ತು ಗಾಳಿ ಸಂಭವಿಸಿದೆ. ಹಲವು ಮಂದಿ ಜೀವ ಕಳೆದುಕೊಂಡಿದ್ದಾರೆ. ಅಪಾರ ಪ್ರಮಾಣದ ಆಸ್ತಿಗಳು ನಷ್ಟವಾಗಿವೆ. ಎರಡೂ ರಾಜ್ಯಗಳಿಗೂ ಬೇಕಾದ ಎಲ್ಲಾ ಅಗತ್ಯ ನೆರವುಗಳನ್ನು ನೀಡುವುದಾಗಿ ಮೋದಿ ನಿನ್ನೆಯೇ ಘೋಷಣೆ ಮಾಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.