ಬೆಂಗಳೂರು: ಕೊರೋನಾ ಲಾಕ್ಡೌನ್ ನಿಂದಾಗಿ ಕಳೆದೆರಡು ತಿಂಗಳಿನಿಂದ ಮುಚ್ಚಲ್ಪಟ್ಟಿರುವ ದೇವಾಲಯಗಳನ್ನು ಮತ್ತೆ ಆರಂಭ ಮಾಡುವುದಾಗಿ ರಾಜ್ಯ ಸರ್ಕಾರ ತಿಳಿಸಿದ್ದು, ಇದೇ ಜೂನ್ 1 ರಿಂದ ತೊಡಗಿದಂತೆ ಮತ್ತೆ ದೇವಾಲಯಗಳಲ್ಲಿ ಸಾರ್ವಜನಿಕರಿಗೆ ಪೂಜೆ ಪುನಸ್ಕಾರ ನಡೆಸಲು ಅನುಮತಿ ನೀಡಲಾಗುವುದಾಗಿಯೂ ಮಾಹಿತಿ ನೀಡಿದೆ. ಭಕ್ತರ ವಿನಂತಿಯ ಮೇರೆಗೆ ಈ ಕ್ರಮಕ್ಕೆ ಮುಂದಾಗಿರುವುದಾಗಿಯೂ ರಾಜ್ಯ ಸರ್ಕಾರ ತಿಳಿಸಿದೆ.
ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ್ದು, ಕೇಂದ್ರ ಸರ್ಕಾರದ ಮಾರ್ಗಸೂಚಿ ಬಿಡುಗಡೆಯಾದ ಕೂಡಲೇ ಮುಂದಿನ ಕ್ರಮ ಕೈಗೊಳ್ಳುವುದಾಗಿ ಈ ಸಭೆಯಲ್ಲಿ ನಿರ್ಧರಿಸಲಾಗಿದೆ. ರಾಜ್ಯದಲ್ಲಿ ಈಗಾಗಲೇ ಬಸ್ಸು ಮತ್ತು ವಿಮಾನ ಸೇವೆಗಳನ್ನು ಆರಂಭಿಸಲಾಗಿದ್ದು, ದೇವಾಲಯಗಳ ಆರಂಭಕ್ಕೂ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ತಿಳಿಸಿದೆ. ಇದೇ ವೇಳೆ ಮುಖ್ಯಮಂತ್ರಿಗಳು ರಾಜ್ಯದ ಪ್ರಮುಖ ದೇವಾಲಯಗಳ ಆನ್ಲೈನ್ ಸೇವಾ ಕಾರ್ಯಗಳು , ಇ-ಕಾಣಿಕೆ ಸೌಲಭ್ಯಗಳಿಗೂ ಚಾಲನೆ ನೀಡಿದರು.
ಸಾಮಾಜಿಕ ಅಂತರ ಸೇರಿದಂತೆ ಇನ್ನಿತರ ಕೊರೋನಾ ನಿಯಂತ್ರಣ ಕ್ರಮಗಳನ್ನು ಅನುಸರಿಸುವ ಮೂಲಕ ಪೂಜೆ ನಡೆಸಬಹುದಾಗಿದೆ ಎಂದು ಸರ್ಕಾರ ಮಾಹಿತಿ ನೀಡಿದೆ. ಇದಕ್ಕೆ ಬೇಕಾದಂತಹ ಎಲ್ಲಾ ರೀತಿಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆಯೂ ಸರ್ಕಾರ ದೇಗುಲಗಳ ಆಡಳಿತ ಮಂಡಳಿಗೆ ಆದೇಶವನ್ನು ನೀಡಿದೆ. ಆದರೆ ಹೆಚ್ಚು ಜನರು ಭಾಗಿಯಾಗುವಂತಹ ಯಾವುದೇ ಧಾರ್ಮಿಕ ಕಾರ್ಯಕ್ರಮ, ಜಾತ್ರೆ ಮೊದಲಾದವುಗಳಿಗೆ ಅವಕಾಶ ಇಲ್ಲ ಎಂಬುದಾಗಿಯೂ ರಾಜ್ಯ ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ. ಭಕ್ತರ ಹರಕೆ, ಸೇವೆಗಳನ್ನು ನೀಡುವುದಕ್ಕೆ ಅವಕಾಶ ನೀಡಿದೆ.
ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ದೇವಾಲಯಗಳನ್ನು ಮತ್ತೆ ತೆರೆಯುವ ವಿಚಾರವಾಗಿ ಮಾತ್ರವೇ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆಗೆ ಮಾತುಕತೆ ನಡೆಸಲಾಗಿದ್ದು, ಮಸೀದಿ, ಚರ್ಚ್ಗಳನ್ನು ತೆರೆಯುವ ಕುರಿತಂತೆ ಇನ್ನೂ ತೀರ್ಮಾನಗಳನ್ನು ಕೈಗೊಳ್ಳಲಾಗಿಲ್ಲ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.