ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಲ್ಲಿ ಸೋಂಕಿನ ಲಕ್ಷಣಗಳು ಕಂಡುಬಂದರೆ, ಪರೀಕ್ಷೆ ಮುಗಿದ ತಕ್ಷಣ ಅವರಿಗೆ ಚಿಕಿತ್ಸೆಗೆ ಬೇಕಾದ ಎಲ್ಲಾ ಪೂರಕ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.
ಪರೀಕ್ಷೆ ಬರೆಯುವ ವೇಳೆ ಮಕ್ಕಳಲ್ಲಿ ಕೆಮ್ಮು, ಶೀತ, ಜ್ವರ, ನೆಗಡಿ ಮೊದಲಾದ ಕೊರೋನಾ ಸೋಂಕಿನ ಗುಣಲಕ್ಷಣಗಳು ಕಂಡುಬಂದಲ್ಲಿ ಅವರ ಚಿಕಿತ್ಸೆಗೆ ತಕ್ಷಣ ಕ್ರಮ ತೆಗೆದುಕೊಳ್ಳಲಾಗುವುದು. ಕಂಟೈನ್ಮೆಂಟ್ ವಲಯಗಳಿಂದ ಬರುವ ವಿದ್ಯಾರ್ಥಿಗಳ ಆರೋಗ್ಯದ ಬಗೆಗೂ ಹೆಚ್ಚು ನಿಗಾ ವಹಿಸಲಾಗುವುದು. ಇದಕ್ಕಾಗಿ ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಎರಡು ವಿಶೇಷ ಕೊಠಡಿಗಳು ಅಗತ್ಯ ಸೌಲಭ್ಯಗಳೊಂದಿಗೆ ಕಾರ್ಯನಿರ್ವಹಿಸಲಿದೆ ಎಂಬುದಾಗಿಯೂ ಇಲಾಖೆ ಮಾಹಿತಿ ನೀಡಿದೆ.
200 ಮಕ್ಕಳ ಆರೋಗ್ಯ ತಪಾಸಣೆಗೆ ಒಂದರಂತೆ ತಪಾಸಣಾ ಕೇಂದ್ರಗಳನ್ನು ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿಯೂ ತೆರೆಯಬೇಕು. ಅಲ್ಲಿ ವೈದ್ಯಕೀಯ ಸಿಬ್ಬಂದಿ, ಅರೆ ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಇನ್ನಿತರ ಆರೋಗ್ಯ ಕಾರ್ಯಕರ್ತರು ಕರ್ತವ್ಯ ನಿರ್ವಹಿಸಬೇಕು ಎಂಬುದಾಗಿಯೂ ಸರ್ಕಾರ ಈಗಾಗಲೇ ಆದೇಶವನ್ನು ನೀಡಿದೆ. ಅಲ್ಲದೆ ವಿದ್ಯಾರ್ಥಿಗಳಿಗೆ ಆರೋಗ್ಯ ಇಲಾಖೆಯ ವತಿಯಿಂದ ಎನ್95 ಮಾಸ್ಕ್ ನೀಡುವಂತೆಯೂ ಸೂಚಿಸಲಾಗಿದೆ. ಜೊತೆಗೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯಕ್ಕೆ ಬೇಕಾದ ಪೂರಕ ವ್ಯವಸ್ಥೆ ಮಾಡಿಕೊಳ್ಳುವಂತೆಯೂ ಸರ್ಕಾರ ತನ್ನ ಎಸ್ಎಸ್ಎಲ್ಸಿ ಪರೀಕ್ಷಾ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ತುರ್ತು ಚಿಕಿತ್ಸೆಗೆ ಪೂರಕವಾಗುವಂತೆ ಪ್ರತಿ ತಾಲೂಕಿಗೆ ಒಂದರಂತೆ ಆಂಬ್ಯುಲೆನ್ಸ್ ವ್ಯವಸ್ಥೆ, ಪ್ರತಿ ಆರೋಗ್ಯ ತಪಾಸಣೆಯ ಕೌಂಟರ್ ಗೆ ಇಬ್ಬರು ಸ್ವಯಂ ಸೇವಕರ ನೇಮಕ ಕಡ್ಡಾಯ ಎಂದು ಸರ್ಕಾರ ತಿಳಿಸಿದೆ. ಜೊತೆಗೆ ಈ ಆರೋಗ್ಯ ಸಂರಕ್ಷಣಾ ಕೊಠಡಿ ಪ್ರತಿ ಕೇಂದ್ರಗಳಲ್ಲಿಯೂ ಬೆಳಗ್ಗೆ 8. 30ಕ್ಕೆ ಆರಂಭಗೊಳ್ಳಬೇಕು ಎಂದೂ ಸರ್ಕಾರ ಆದೇಶಿಸಿದೆ. ಈ ಪರೀಕ್ಷೆ ವಿದ್ಯಾರ್ಥಿಗಳು ಮತ್ತು ಮೇಲ್ವಿಚಾರಣೆ ಮಾಡುವವರೆಲ್ಲರಿಗೂ ಸವಾಲಿನ ವಿಚಾರವಾಗಿದ್ದು, ಅದನ್ನು ಸಮರ್ಥವಾಗಿ ನಿಭಾಯಿಸಲು ಸರ್ಕಾರ ಆದೇಶಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.