ಮಂಗಳೂರು: ಕೊರೋನಾ ಲಾಕ್ಡೌನ್ ಸಂಕಷ್ಟದಿಂದ ದೇಶದ ಜನರ ಆರ್ಥಿಕ ಸ್ಥಿತಿ ಹದೆಗೆಟ್ಟಿದೆ. ಈ ಹಿನ್ನೆಲೆಯಲ್ಲಿ ಶೈಕ್ಷಣಿಕ ವಿಚಾರಕ್ಕೆ ಸಂಬಂಧಿಸಿದಂತೆ ಶಾಲಾ ಶುಲ್ಕ ಪಾವತಿ ವಿಷಯದಲ್ಲಿ ಪೋಷಕರಿಗೆ ವಿದ್ಯಾಸಂಸ್ಥೆಗಳು ಒತ್ತಡ ಹೇರಬಾರದು ಎಂದು ರಾಜ್ಯ ಸರ್ಕಾರ ಸೂಚಿಸಿತ್ತು. ಇದೀಗ, ಸರ್ಕಾರದ ಮುಂದಿನ ಆದೇಶ ನೀಡುವವರೆಗೂ ಶುಲ್ಕ ವಸೂಲಿ ಅಥವಾ ಪೋಷಕರಿಗೆ ಒತ್ತಡ ಹೇರುವ ಶಾಲೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಎಚ್ಚರಿಕೆ ನೀಡಿದ್ದಾರೆ.
ಶಾಲಾ ವಿದ್ಯಾರ್ಥಿಗಳ ಶುಲ್ಕ ಪಾವತಿಗೆ ಒತ್ತಾಯ, ಪಾವತಿ ಮಾಡಲು ಸಾಧ್ಯವಾಗದ ವಿದ್ಯಾರ್ಥಿಗಳನ್ನು ಶಾಲೆಯಿಂದ ಹೊರ ಕಳಿಸುವಂತಹ ಘಟನೆಗಳು ಕಂಡು ಬಂದರೆ ಅಂತಹ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಯಾರಾದರೂ ಇಂತಹ ದೂರುಗಳನ್ನು ಶಿಕ್ಷಣ ಇಲಾಖೆಯ ಗಮನಕ್ಕೆ ತಂದರೆ, ಅಂತಹ ಶಾಲೆಗಳ ಮೇಲೆ ಶಿಕ್ಷಣ ಕಾಯ್ದೆಯ ಅನ್ವಯ ಕ್ರಮ ಕೈಗೊಳ್ಳುವುದಾಗಿಯೂ ಅವರು ಮಾಹಿತಿ ನೀಡಿದ್ದಾರೆ.
ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಶಾಲೆಗಳು ಶುಲ್ಕ ಸಂಗ್ರಹ ಮಾಡುತ್ತಿರುವ ಬಗ್ಗೆ ದೂರುಗಳು ಇಲಾಖೆಗೆ ಬರುತ್ತಿದ್ದು, ಇದು ಹೀಗೆಯೇ ಮುಂದುವರಿದಲ್ಲಿ ಅಂತಹ ಶಾಲೆಗಳು ಶಿಸ್ತು ಕ್ರಮವನ್ನು ಎದುರಿಸಬೇಕಾಗಬಹುದು ಎಂಬುದಾಗಿಯೂ ಅವರು ಮಾಹಿತಿ ನೀಡಿದ್ದಾರೆ. ಜೊತೆಗೆ ದೂರು ಬಂದ ಶಾಲೆಯ ವಿರುದ್ಧ ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರಕ್ಕೂ ವರದಿ ನೀಡುವುದಾಗಿ ತಿಳಿಸಿದ್ದಾರೆ.
ಒಟ್ಟಿನಲ್ಲಿ, ಕೊರೋನಾ ಸಂಕಷ್ಟದ ಜೊತೆಗೆ ವಿದ್ಯಾರ್ಥಿಗಳ ಪೋಷಕರಿಗೆ ಶಾಲೆಗಳೂ ಸಂಕಷ್ಟದ ಪರಿಸ್ಥಿತಿ ನಿರ್ಮಾಣ ಮಾಡಿದಲ್ಲಿ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ಉಪನಿರ್ದೇಶಕರು ತಮ್ಮ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.