ನವದೆಹಲಿ: ಕೇಂದ್ರದ ಈಶಾನ್ಯ ಪ್ರದೇಶಾಭಿವೃದ್ಧಿ ಸಚಿವ ಡಾ.ಜಿತೇಂದ್ರ ಸಿಂಗ್ ಅವರು ಈಶಾನ್ಯದ ಬಗ್ಗೆ ವಿಶೇಷ ಗಮನಹರಿಸಿ ಅಲ್ಲಿನ ಮಹತ್ವಾಕಾಂಕ್ಷೆಯ ಜಿಲ್ಲೆಗಳಲ್ಲಿನ ಕೋವಿಡ್ ಸ್ಥಿತಿ ಮತ್ತು ಆರೋಗ್ಯ ಸೌಲಭ್ಯಗಳನ್ನು ಪರಿಶೀಲಿಸಿದ್ದಾರೆ. ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ, ಎಂಟು ಈಶಾನ್ಯ ರಾಜ್ಯಗಳಲ್ಲಿ ಆರೋಗ್ಯ ಸೌಲಭ್ಯವನ್ನು ಹೆಚ್ಚಿಸಲು 190 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಲು ಸಚಿವಾಲಯ ನಿರ್ಧರಿಸಿದೆ ಎಂಬುದನ್ನು ಅವರು ಬಹಿರಂಗಪಡಿಸಿದರು. ವಿಶೇಷವಾಗಿ ಸಾಂಕ್ರಾಮಿಕ ರೋಗಗಳ ನಿರ್ವಹಣೆಗೆ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ ಎಂದರು.
ಆರೋಗ್ಯ ಕಾರ್ಯದರ್ಶಿಗಳು ಮತ್ತು ಈಶಾನ್ಯದ 14 ಮಹತ್ವಾಕಾಂಕ್ಷೆಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಆರೋಗ್ಯ ಅಧಿಕಾರಿಗಳು ಭಾಗವಹಿಸಿದ ವರ್ಚುವಲ್ ಸಭೆಯನ್ನುದ್ದೇಶಿಸಿ ಮಾತನಾಡಿದ ಡಾ.ಸಿಂಗ್ ಅವರು, “ಮಹತ್ವಾಕಾಂಕ್ಷೆಯ ಜಿಲ್ಲೆಯ ಪರಿಕಲ್ಪನೆಯು 49 ಪ್ರಮುಖ ಸೂಚಕಗಳನ್ನು ಆಧರಿಸಿದೆ, ಅದರಲ್ಲಿ ಆರೋಗ್ಯದ ಸ್ಥಿತಿ ಒಂದು ಪ್ರಮುಖ ಘಟಕ. ಕೋವಿಡ್ ಸಾಂಕ್ರಾಮಿಕದಿಂದ ಸಿಕ್ಕ ಒಂದು ಪ್ರಮುಖ ಅನುಭವವೆಂದರೆ, ಭವಿಷ್ಯದಲ್ಲಿ ಸಾಂಕ್ರಾಮಿಕ ಮತ್ತು ಸೋಂಕಿಗೆ ಪೂರ್ವಭಾವಿ ಸಿದ್ಧತೆ ಅತ್ಯುತ್ತಮ ಆರೋಗ್ಯ ಸೇವೆಗೆ ಕಡ್ಡಾಯವಾಗಬೇಕು ಎಂಬುದು. ಇದನ್ನು ಗಮನದಲ್ಲಿಟ್ಟುಕೊಂಡು, ಈಶಾನ್ಯ ವಿಶೇಷ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಿಂದ 500 ಕೋಟಿ ರೂಪಾಯಿಗಳವರೆಗೆ ಧನಸಹಾಯ ನೀಡುವ ಆರೋಗ್ಯ ಸಂಬಂಧಿತ ಯೋಜನೆಗಳಿಗೆ ಪ್ರಸ್ತಾವನೆಗಳನ್ನು ಕಳುಹಿಸಲು ಸಚಿವಾಲಯವು ಈಶಾನ್ಯ ರಾಜ್ಯಗಳಿಗೆ ಅವಕಾಶ ನೀಡಿದೆ” ಎಂದಿದ್ದಾರೆ.
ಅದರಂತೆ, ಅಸ್ಸಾಂ, ಅರುಣಾಚಲ ಪ್ರದೇಶ, ಮೇಘಾಲಯ, ಮಣಿಪುರ, ಸಿಕ್ಕಿಂ, ಮಿಜೋರಾಂ ಮತ್ತು ನಾಗಾಲ್ಯಾಂಡ್ ರಾಜ್ಯಗಳಿಂದ ಪ್ರಸ್ತಾವನೆಗಳನ್ನು ಸ್ವೀಕರಿಸಲಾಗಿದ್ದು, ಎಂಟನೇ ರಾಜ್ಯ ತ್ರಿಪುರದಿಂದ ಪ್ರಸ್ತಾವನೆಗೆ ಕಾಯಲಾಗುತ್ತದೆ ಎಂದು ಅವರು ಹೇಳಿದರು. ಸುಮಾರು 100 ಮತ್ತು 85 ಪ್ರತಿಶತದಷ್ಟು ಆಯುಷ್ಮಾನ್ ಭಾರತ್ ವ್ಯಾಪ್ತಿಯನ್ನು ಸಾಧಿಸಿದ್ದಕ್ಕಾಗಿ ಡಾ. ಸಿಂಗ್ ಅವರು ಅಸ್ಸಾಂನ ಗೋಲ್ಪಾರ ಮತ್ತು ಧುಬ್ರಿಯ ಮಹತ್ವಾಕಾಂಕ್ಷೆಯ ಜಿಲ್ಲೆಗಳನ್ನು ಅವರು ಅಭಿನಂದಿಸಿದರು ಎಂದು ವರದಿಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.