ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು ಜನ ಸಾಮಾನ್ಯರ, ಸರ್ಕಾರದ ನಿದ್ದೆ ಕೆಡಿಸಿದೆ. ಮತ್ತೆ ಲಾಕ್ಡೌನ್ ಮಾಡಬೇಕು ಎನ್ನುವ ಅಭಿಪ್ರಾಯವೂ ಸಾಮಾಜಿಕ ವಲಯದಲ್ಲಿ ಕೇಳಿ ಬರುತ್ತಿದೆ. ಆದರೆ ರಾಜ್ಯದ ಆರ್ಥಿಕತೆಯ ಮೇಲೆ ಪೆಟ್ಟಾಗುತ್ತದೆ ಎಂಬ ಕಾರಣದಿಂದ ಲಾಕ್ಡೌನ್ ನಿಯಮವನ್ನು ಮತ್ತೆ ಜಾರಿಗೊಳಿಸುವುದಿಲ್ಲ, ಬದಲಾಗಿ ಮತ್ತಷ್ಟು ಕಠಿಣ ನಿಯಂತ್ರಣ ನಿಯಮಗಳನ್ನು ಅನುಸರಿಸುವ ಮೂಲಕ ಕೊರೋನಾ ವ್ಯಾಪಕವಾಗಿ ಹರಡುವುದನ್ನು ನಿಯಂತ್ರಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಈ ಹಿಂದೆ ಅನುಸರಿಸಲಾದ ಲಾಕ್ಡೌನ್ ಕ್ರಮಗಳ ಕಾರಣದಿಂದ ರಾಜ್ಯ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳ ಸಲಹೆ ಸೂಚನೆಗಳನ್ನು ಪರಿಗಣಿಸಿಕೊಂಡು, ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ಹೆಚ್ಚುವರಿ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ. ಆದರೆ ಯಾವುದೇ ಕಾರಣಕ್ಕೂ ಲಾಕ್ಡೌನ್ ಮಾಡುವ ನಿರ್ಧಾರ ತೆಗೆದುಕೊಳ್ಳುವ ಮೂಲಕ ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ತಳ್ಳುವುದಿಲ್ಲ ಎಂದು ಬಿಎಸ್ವೈ ಸರ್ಕಾರ ಮಾಹಿತಿ ನೀಡಿದೆ.
ಈ ಬಗ್ಗೆ ಸರ್ವಪಕ್ಷಗಳ ಸಭೆಯನ್ನು ನಡೆಸಿ ಚರ್ಚೆ ನಡೆಸಲಾಗಿದೆ. ರಾಜ್ಯದಲ್ಲಿ ಇನ್ನು ಯಾವ ರೀತಿಯಲ್ಲಿ ಮುನ್ನೆಚರಿಕಾ ಕ್ರಮಗಳನ್ನು ಅನುಸರಿಸಬೇಕು ಎಂಬುದಾಗಿಯೂ ತೀರ್ಮಾನ ತೆಗೆದುಕೊಳ್ಳಲಾಗಿದೆ. ಹೊರ ರಾಜ್ಯಗಳಿಂದ ರಾಜ್ಯದೊಳಕ್ಕೆ ಆಗಮಿಸುವವರಿಗೆ ಕಡ್ಡಾಯ ಕ್ವಾರಂಟೈನ್ ಮಾಡಲಾಗುತ್ತದೆ. ಬೆಂಗಳೂರಿಗೆ ಸಂಬಂಧಿಸಿದಂತೆ ಬಿಬಿಎಂಪಿಯ ಪ್ರತಿ ವಾರ್ಡ್ಗಳಿಗೆ ಕೊರೋನಾ ನಿಯಂತ್ರಣ ಮಾಡಲು 25 ಲಕ್ಷ ರೂ. ಗಳನ್ನು ನೀಡುವುದಾಗಿಯೂ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಜೊತೆಗೆ ಕೊರೋನಾ ಚಿಕಿತ್ಸೆಗೆ ಹೆಚ್ಚುವರಿ 7300 ಹಾಸಿಗೆಗನ್ನು ಇನ್ನೊಂದು ವಾರದಲ್ಲಿ ಸಿದ್ಧ ಮಾಡಲಾಗುತ್ತದೆ ಎಂದೂ ಸರ್ಕಾರ ಮಾಹಿತಿ ನೀಡಿದೆ.
ಇದುವರೆಗೆ ಬೆಂಗಳೂರಿನಲ್ಲಿ ಪ್ರತಿದಿನ 4000ರಷ್ಟು ಕೋವಿಡ್ ಪರೀಕ್ಷೆ ನಡೆಸಲಾಗುತ್ತಿತ್ತು. ಆದರೆ ಇಂದಿನಿಂದ 7500ರಷ್ಟು ಕೊರೋನಾ ಟೆಸ್ಟ್ಗಳನ್ನು ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲದೆ ಚಿಕಿತ್ಸೆಗಾಗಿ ಕಂಠೀರವ ಸ್ಟುಡಿಯೋದಲ್ಲಿ, ಇಂಟರ್ನ್ಯಾಷನಲ್ ಎಕ್ಸಿಬಿಷನ್ ಸೆಂಟರ್, ಲೆಗಸಿ ಸೆಂಟರ್ಗಳಲ್ಲಿಯೂ ಪೂರಕ ವ್ಯವಸ್ಥೆ ಮಾಡಲಾಗುತ್ತದೆ. ಹೆಚ್ಚುವರಿ ಬೆಡ್ಗಳ ಹಂಚಿಕೆ ಉಸ್ತುವಾರಿಯನ್ನು ತುಷಾರ್ ಗಿರಿನಾಥ್ ವಹಿಸಿಕೊಂಡಿದ್ದಾರೆ ಎಂದೂ ಸರ್ಕಾರ ಮಾಹಿತಿ ನೀಡಿದೆ.
ಒಟ್ಟಿನಲ್ಲಿ ಕೊರೋನಾ ಭೀತಿ ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ ಲಾಕ್ಡೌನ್ ರಹಿತ, ಪೂರಕ ನಿಯಂತ್ರಣ ಕ್ರಮಗಳ ಮೂಲಕವೇ ಪರಿಹಾರ ಕಂಡುಕೊಳ್ಳಲು ರಾಜ್ಯ ಸರ್ಕಾರ ಮಹತ್ವದ ಚಿಂತನೆ ನಡೆಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.