ಬೆಂಗಳೂರು: ಕರ್ನಾಟಕ ಮಾನಸಿಕ ಆರೋಗ್ಯ ನಿರ್ವಹಣಾ ವ್ಯವಸ್ಥೆ ಇ- ಮನಸ್ ಶಾಸನದ ನಿರ್ದಿಷ್ಟ ಉದ್ದೇಶಗಳನ್ನು ಈಡೇರಿಸುವ ಮಾರ್ಗವಾಗಿದ್ದು, ಇದು ಖಾಸಗಿ ವಲಯಕ್ಕೂ ಲಭ್ಯವಾಗುತ್ತಿರುವುದು ಸಂತಸದ ವಿಷಯವಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಸದಾನಂದ ಗೌಡ ಅಭಿಪ್ರಾಯಪಟ್ಟಿದ್ದಾರೆ.
ದೆಹಲಿಯಿಂದ ಶುಕ್ರವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನ ರಾಷ್ಟ್ರೀಯ ಮಹತ್ವದ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನಗಳ ಸಂಸ್ಥೆಯ ಓಪಿಡಿ ಸಮುಚ್ಛಯ ಶಿಲಾನ್ಯಾಸ ಮತ್ತು ಇ- ಮನಸ್ ತಂತ್ರಾಂಶ ಲೋಕಾರ್ಪಣೆ ಸಮಾರಂಭದಲ್ಲಿ ಪಾಲ್ಗೊಂಡ ಅವರು, ದೇಶದ ಜನತೆಗೆ ಸೂಕ್ತ ಆರೋಗ್ಯ ಸೇವೆ ಒದಗಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ದೊಡ್ಡ ಸಂಖ್ಯೆಯಲ್ಲಿ ದೇಶದಾದ್ಯಂತ ವೈದ್ಯಕೀಯ ಕಾಲೇಜುಗಳನ್ನು ತೆರೆಯಲಾಗುತ್ತಿದೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರ ಕೈಗೆಟಕುವ ದರದಲ್ಲಿ ದೇಶದ ಎಲ್ಲರಿಗೂ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸಲು ಆಯುಷ್ಮಾನ್ ಭಾರತ್, ಇಂಧ್ರದನುಷ್, ಜನೌಷಧದಂಥ ಮಹತ್ವಪೂರ್ಣ ಯೋಜನೆ ಕಾರ್ಯಗತಗೊಳಿಸಿದೆ ಎಂದು ತಿಳಿಸಿದರು.
ಬೆಂಗಳೂರಿನ ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಮತ್ತು ನಿಮ್ಹಾನ್ಸ್ ಸಹಯೋಗದಲ್ಲಿ ಇ-ಮನಸ್ ಅಭಿವೃದ್ಧಿಪಡಿಸಲು ಶ್ರಮಿಸಿದ ಪದ್ಮಶ್ರೀ ಪ್ರೊ. ಗಂಗಾಧರ್ ಮತ್ತು ತಂಡಕ್ಕೆ ಮತ್ತು ಐಐಐಟಿಗೆ ಸಚಿವರು ಅಭಿನಂದನೆ ಸಲ್ಲಿಸಿದರು. ಈ ನೂತನ ಉಪಕ್ರಮದ ಪ್ರಯೋಜನ ಪಡೆದುಕೊಳ್ಳುವಂತೆ ಜನತೆಗೆ ತಿಳಿಸಿದರು.
ಬೆಂಗಳೂರು ಉತ್ತರ ಭಾಗದ ಜನರಿಗೆ ಅನುಕೂಲವಾಗಲಿರುವ ಒಪಿಡಿಗಾಗಿ ಜಮೀನು ನೀಡಿದ ಮತ್ತು ನಿಮ್ಹಾನ್ಸ್ ಗೆ ಎಲ್ಲ ರೀತಿಯ ಬೆಂಬಲ ನೀಡುತ್ತಿರುವ ಕರ್ನಾಟಕ ಸರ್ಕಾರ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಆರೋಗ್ಯ ಸಚಿವರು, ಕಾರ್ಯದರ್ಶಿಗಳನ್ನೂ ಅವರು ಅಭಿನಂದಿಸಿದರು.
ರೋಗಿಗಳ ಆರೋಗ್ಯ ಸೇವೆಯಲ್ಲಿ ಮುಂಚೂಣಿಯಲ್ಲಿರುವ ನಿಮ್ಹಾನ್ಸ್ನಲ್ಲಿ ವಾರ್ಷಿಕ ಆರು ಲಕ್ಷ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ನನಗೆ ತಿಳಿಸಲಾಗಿದೆ. ರಾಜ್ಯದ ಮತ್ತು ದೇಶದ ಹಲವು ರೋಗಿಗಳಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ಕಾರ್ಯವನ್ನು ಈ ಮಾನಸಿಕ ಸಂಸ್ಥೆ ಮಾಡುತ್ತಿದೆ ಎಂದರು.
ತಂತ್ರಾಂಶಕ್ಕೆ ಚಾಲನೆ ನೀಡಿ, ಹೊರರೋಗಿಗಳ ವಿಭಾಗಕ್ಕೆ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೆರವೇರಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.