ಶ್ರೀನಗರ: ಕಳೆದ ಹಲವು ದಿನಗಳಿಂದ ಜಮ್ಮು ಮತ್ತು ಕಾಶ್ಮೀರದ ಅನೇಕ ಕಡೆ ನಿರಂತರವಾಗಿ ಉಗ್ರರ ವಿರುದ್ಧ ಕಾರ್ಯಾಚರಣೆಗಳನ್ನು ನಡೆಸುತ್ತಲೇ ಬರಲಾಗುತ್ತಿದೆ. ಉಗ್ರರ ಅಕ್ರಮ ಒಳನುಸುಳುವಿಕೆಯನ್ನು ತಡೆಯಲು ಯೋಧರು ಇನ್ನಿಲ್ಲದಂತೆ ಶ್ರಮಿಸುತ್ತಿದ್ದಾರೆ. ಇಂದು ಬೆಳಗ್ಗೆಯೂ ರಾಜ್ಯದ ಅನಂತನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದು, ಮೂವರು ಉಗ್ರರನ್ನು ಸಂಹರಿಸಿವೆ ಎಂದು ವರದಿಗಳು ತಿಳಿಸಿವೆ.
ಅನಂತನಾಗ್ನ ಖುಲ್ಚೊಹರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಗೆ ಉಗ್ರರ ಸಂಹಾರವಾಗಿದೆ. ಜಿಲ್ಲೆಯ ಚೆವಾ ಉಲ್ಲಾರ್ ಪ್ರದೇಶದಲ್ಲಿ ಉಗ್ರರು ರಹಸ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಬಗ್ಗೆ ಜಮ್ಮು ಕಾಶ್ಮೀರದ ಪೊಲೀಸರಿಂದ ಖಚಿತ ಮಾಹಿತಿ ಪಡೆದು, ಈ ಕಾರ್ಯಾಚರಣೆಯನ್ನು ನಡೆಸಲಾಗಿದೆ ಎಂದು ಭದ್ರತಾ ಪಡೆಗಳು ಮಾಹಿತಿ ನೀಡಿವೆ. ವಧಿಸಲ್ಪಟ್ಟ ಉಗ್ರರ ಗುರುತು ಪತ್ತೆ ಮಾಡಲಾಗಿದೆ. ಜೊತೆಗೆ ಕಾರ್ಯಾಚರಣೆಯನ್ನು ಮುಂದುವರಿಸಲಾಗಿರುವುದಾಗಿಯೂ ಭದ್ರತಾ ಪಡೆಗಳು ತಿಳಿಸಿವೆ.
ಭಾರತೀಯ ಭದ್ರತಾ ಪಡೆ ಮತ್ತು ಜಮ್ಮು ಕಾಶ್ಮೀರದ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಈ ಮೂವರು ಉಗ್ರರನ್ನು ಯಮಪುರಿಗೆ ಅಟ್ಟಲಾಗಿದೆ. ಕಾರ್ಯಾಚರಣೆ ವೇಳೆ ಉಗ್ರರು ಭದ್ರತಾ ಸಿಬ್ಬಂದಿಗಳ ಮೇಲೆ ಗುಂಡಿನ ದಾಳಿ ಆರಂಭಿಸಿದ್ದು ಅದಕ್ಕೆ ಪ್ರತಿಯಾಗಿ ಭದ್ರತಾ ಪಡೆಯೂ ಮರುದಾಳಿ ನಡೆಸಿವೆ. ಈ ವೇಳೆ ಮೂವರು ಉಗ್ರರ ಸಂಹಾರವಾಗಿದೆ ಎಂದೂ ಮೂಲಗಳು ಈ ಕಾರ್ಯಾಚರಣೆ ಬಗ್ಗೆ ಮಾಹಿತಿ ನೀಡಿವೆ. ಮೃತ ಉಗ್ರರಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಕಾರ್ಯಾಚರಣೆಯೂ ಸೇರಿ ಈ ತಿಂಗಳೊಂದರಲ್ಲಿಯೇ ಭದ್ರತಾ ಪಡೆಗಳು ಉಗ್ರರ ವಿರುದ್ಧ 13 ಕಾರ್ಯಾಚರಣೆಗಳನ್ನು ನಡೆಸಿದ್ದು, ಸುಮಾರು 40 ಉಗ್ರರನ್ನು ವಧಿಸಿದ್ದಾರೆ. ಪಾಕಿಸ್ಥಾನ ಪ್ರೇರಿತ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯನ್ನು ಗುರಿಯಾಗಿಸಿಕೊಂಡು ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.