ಬೆಂಗಳೂರು: ಅದೆಷ್ಟೋ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ತಾವೂ ವೈದ್ಯರಾಗಬೇಕು, ವೈದ್ಯಕೀಯ ಶಿಕ್ಷಣ ಪಡೆಯಬೇಕು ಎಂಬ ಕನಸಿರುತ್ತದೆ. ಆದರೆ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರದ ಕಾರಣ ಅವರ ಕನಸುಗಳು ಈಡೇರುವುದಕ್ಕೆ ಅಸಾಧ್ಯವಾಗುತ್ತದೆ. ಇಂತಹ ವಿದ್ಯಾರ್ಥಿಗಳಿಗೆ ಪರಿಶ್ರಮ ನೀಟ್ ಅಕಾಡೆಮಿ ವತಿಯಿಂದ ಉಚಿತ ಶಿಕ್ಷಣವನ್ನು ನೀಡಲಾಗುತ್ತಿದೆ.
ಬಡ ಪ್ರತಿಭಾವಂತ ಮಕ್ಕಳಿಗೆ ನಮ್ಮ ಸಂಸ್ಥೆಯು ಉಚಿತ ನೀಟ್ ತರಬೇತಿಯನ್ನು ನೀಡುತ್ತಿದೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಈಶ್ವರ್ ಅವರು ಮಾಹಿತಿ ನೀಡಿದ್ದಾರೆ.
“ಈಗಾಗಲೇ ಅಕಾಡೆಮಿ ವತಿಯಿಂದ 60 ವಿದ್ಯಾರ್ಥಿಗಳಿಗೆ ಉಚಿತ ನೀಟ್ ತರಬೇತಿಯನ್ನು ನೀಡಲಾಗುತ್ತಿದೆ. ನಮ್ಮ ಸ್ವಂತ ಖರ್ಚಿನಲ್ಲಿಯೇ ನೀಟ್ ತರಬೇತಿ ನೀಡಲಾಗುತ್ತಿದೆ. ನೀಟ್ ತರಬೇತಿ ಪಡೆಯದ ಬಡ ಮಕ್ಕಳು ಕೆಲವೇ ಅಂಕಗಳ ಕಾರಣಕ್ಕೆ ಮೆಡಿಕಲ್ ಸೀಟ್ ಪಡೆಯುವುದರಿಂದ ವಂಚಿತರಾಗುತ್ತಿದ್ದು, ಅಂತಹ ವಿದ್ಯಾರ್ಥಿಗಳ ಕನಸನ್ನು ಸಾಕಾರಗೊಳಿಸಲು ಪ್ರಯತ್ನ ನಡೆಸುತ್ತಿದ್ದೇವೆ. ನಮ್ಮ ಈ ಪರಿಶ್ರಮದಲ್ಲಿ ಗೆಲುವು ಸಿಗುವ ಭರವಸೆ ಇದೆ” ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.
“ಬಡತನ ಕಲಿಸುವ ಬದುಕಿನ ಪಾಠವನ್ನು ಯಾವ ವಿಶ್ವವಿದ್ಯಾಲಯವೂ ಕಲಿಸುವುದು ಸಾಧ್ಯವಿಲ್ಲ. ಸಿದ್ಧಗಂಗಾ ಮಠದಲ್ಲಿ ಉಚಿತ ಶಿಕ್ಷಣ ಪಡೆದು ಈ ಮಟ್ಟಕ್ಕೆ ಬಂದಿರುವ ತಮಗೆ ಬಡ ಮಕ್ಕಳಿಗೆ ಉಚಿತ ಶಿಕ್ಷಣ ನೀಡಬೇಕೆನ್ನುವ ತುಡಿತ ಬಾಲ್ಯದಲ್ಲಿಯೇ ಇದ್ದು, ಅದನ್ನು ಇಂದು ಸಾಕಾರಗೊಳಿಸುತ್ತಿದ್ದೇವೆ” ಅವರು ತಿಳಿಸಿದ್ದಾರೆ.
ಇನ್ನು ದ್ವಿತೀಯ ಪಿಯುಸಿ ಯಲ್ಲಿ ಉತ್ತಮ ಅಂಕ ಪಡೆದ ಬಡ ವಿದ್ಯಾರ್ಥಿಗಳನ್ನು ಆರಿಸಿ, ಅವರಿಗೆ ಸಂಸ್ಥೆಯ ಮೂಲಕ ಪರೀಕ್ಷೆ ನಡೆಸಿ ಅದರಲ್ಲಿ ಆಯ್ಕೆಯಾದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಉಚಿತ ನೀಟ್ ಕೋರ್ಸ್ ಗಳಿಗೆ ಆಯ್ಕೆ ಮಾಡುವ ಪ್ರಕ್ರಿಯೆಯನ್ನು ಸಂಸ್ಥೆ ನಡೆಸಿಕೊಂಡು ಬರುತ್ತಿದ್ದು, ಕಳೆದೆರಡು ವರ್ಷದಿಂದಲೂ ಈ ಕಾರ್ಯವನ್ನು ಯಶಸ್ವಿಯಾಗಿ ನಡೆಸಿಕೊಂಡು ಬರಲಾಗಿರುವುದಾಗಿಯೂ ಅವರು ಮಾಹಿತಿ ನೀಡಿದ್ದಾರೆ.
ಈ ಸಂಸ್ಥೆಯಿಂದ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಬೆಂಗಳೂರಿನ ಮೆಡಿಕಲ್ ಕಾಲೇಜು, ದೆಹಲಿಯ ಏಮ್ಸ್ ಸೇರಿದಂತೆ ಇನ್ನೂ ಅನೇಕ ವೈದ್ಯಕೀಯ ಕಾಲೇಜುಗಳಲ್ಲಿ ಅಧ್ಯಯನ ನಡೆಸುತ್ತಿದ್ದಾರೆ. ಇಲ್ಲಿನ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಯಶಸ್ವಿ ವೈದ್ಯರಾಗಿ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವಂತಾಗಬೇಕು ಎಂಬುದಾಗಿಯೂ ಪ್ರದೀಪ್ ಅವರು ತಿಳಿಸಿದ್ದು, ಆ ಮೂಲಕ ಜನ ಸೇವೆ ಮಾಡಬೇಕೆಂದು ಹೇಳಿದ್ದಾರೆ.
ಒಟ್ಟಿನಲ್ಲಿ ಪರಿಶ್ರಮ ನೀಟ್ ಸಂಸ್ಥೆಯ ಮೂಲಕ ಬಡ ವಿದ್ಯಾರ್ಥಿಗಳಿಗೆ ವೈದ್ಯಕೀಯ ಕನಸನ್ನು ಸರಾಗಗೊಳಿಸುವ ನಿಟ್ಟಿನಲ್ಲಿ ಪ್ರದೀಪ್ ಈಶ್ವರ್ ಅವರಿಟ್ಟ ಹೆಜ್ಜೆ ಅನುಕರಣೀಯ ಎನ್ನಬಹುದು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.