ಬೆಂಗಳೂರು: ಕೊರೋನಾ ಸೋಂಕು ರಾಜ್ಯದಲ್ಲಿ ಏರಿಕೆಯಾಗುತ್ತಲೇ ಇದೆ. ವೈದ್ಯಕೀಯ ಕ್ಷೇತ್ರ ಎದುರಿಸುತ್ತಿರುವ ಹಲವಾರು ಸವಾಲುಗಳ ನಡುವೆಯೂ ವೈದ್ಯರು, ಆರೋಗ್ಯ ರಕ್ಷಕರು ಕೊರೋನಾ ರೋಗಿಗಳಿಗೆ ಪರಿಣಾಮಕಾರಿ ಚಿಕಿತ್ಸೆ ನೀಡುವ ಮೂಲಕ ಅವರನ್ನು ಕಾಪಾಡುವಲ್ಲಿ ಶ್ರಮ ವಹಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿಗೆ ಪರಿಣಾಮಕಾರಿ ಚಿಕಿತ್ಸೆ ಪಡೆದು, ಗುಣಮುಖರಾಗಿರುವ ವ್ಯಕ್ತಿ ಗೋಪಾಲಯ್ಯ ಎಂಬವರು ಆಸ್ಪತ್ರೆ ತಮಗೆ ನೀಡಿದ ಸೇವೆಯಿಂದ ಸಂತಸಗೊಂಡು ವೈದ್ಯಕೀಯ ಸಿಬ್ಬಂದಿಗಳ ಸೇವೆಯನ್ನು ಶ್ಲಾಘಿಸಿ, ಅವರಿಗೆ ಧನ್ಯವಾದ ಸಮರ್ಪಿಸಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರಿಗೆ ಪತ್ರ ಬರೆದಿದ್ದಾರೆ.
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯರು ರೋಗಿಗಳ ಆರೋಗ್ಯ ವಿಚಾರಣೆ, ಆಹಾರ, ಔಷಧ, ಸ್ವಚ್ಛತೆ ಮೊದಲಾದ ಅನೇಕ ವಿಚಾರಗಳ ಬಗ್ಗೆ ಹೆಚ್ಚು ಗಮನ ವಹಿಸುತ್ತಿದ್ದಾರೆ. ಸರಿಯಾದ ಸಮಯಕ್ಕೆ ರೋಗಿಗಳಿಗೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ನೋಡಿಕೊಳ್ಳುವ ಮೂಲಕ ಚಿಕಿತ್ಸೆ ನೀಡುತ್ತಿದ್ದಾರೆ. ಎಲ್ಲಾ ರೋಗಿಗಳನ್ನು ಸಮನಾಗಿ ನೋಡಿಕೊಳ್ಳುವ ಮೂಲಕ ಯಾವುದೇ ತಾರತಮ್ಯ ಭಾವವಿಲ್ಲದೆಯೇ ಇಲ್ಲಿ ಚಿಕಿತ್ಸೆ ನೀಡುತ್ತಿದ್ದು, ಇಲ್ಲಿನ ವೈದ್ಯಕೀಯ ಸಿಬ್ಬಂದಿಗಳಿಗೆ ಧನ್ಯವಾದ ಸಮರ್ಪಿಸುವುದಾಗಿಯೂ ತಿಳಿಸಿದ್ದಾರೆ. ಜೊತೆಗೆ ರಾಜ್ಯ ಸರ್ಕಾರ ಮತ್ತು ಸಚಿವರಿಗೂ ಧನ್ಯವಾದ ಸಮರ್ಪಿಸಿದ್ದಾರೆ.
ರೋಗಿಗಳಿಗೆ ಮನೆಯ ಆಹಾರಕ್ಕೆ ಕಡಿಮೆ ಇಲ್ಲದಂತೆ ಗುಣಮಟ್ಟದ ಆಹಾರ ಒದಗಿಸುವುದು, ಉತ್ತಮ ಸೇವೆ ನೀಡುವ ಮೂಲಕ ರೋಗಿಗಳಲ್ಲಿ ಭರವಸೆಯನ್ನು ಹುಟ್ಟಿಸುವ ಕೆಲಸವನ್ನು ಆಸ್ಪತ್ರೆಯ ಸಿಬ್ಬಂದಿಗಳು ಮಾಡುತ್ತಿದ್ದಾರೆ ಎಂದೂ ಈ ಪತ್ರದಲ್ಲಿ ತಿಳಿಸಿದ್ದಾರೆ. ಈ ಪತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಸಚಿವ ಡಾ. ಸುಧಾಕರ್ ಹೀಗೆ ಬೆನ್ನುತಟ್ಟುವವರಿದ್ದರೆ ಸೇವೆ ನೀಡುವವರ ಉತ್ಸಾಹವೂ ಇಮ್ಮಡಿಯಾಗುತ್ತದೆ. ಜೊತೆಗೆ ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಲು ಹುರುಪು ಮೂಡುತ್ತದೆ ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.