ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ನಡುವೆಯೂ ಕೇಂದ್ರ ಆರೋಗ್ಯ ಸಚಿವಾಲಯ ಜನರಿಗೆ ಭರವಸೆ ಮೂಡಿಸುವ ವಿಚಾರವೊಂದನ್ನು ಬಹಿರಂಗ ಮಾಡಿದೆ. ದೇಶದಲ್ಲಿ ಕೊರೋನಾ ಸೋಂಕು ತಗುಲಿ ಚಿಕಿತ್ಸೆ ಪಡೆದವರ ಪೈಕಿ ಹೆಚ್ಚಿನ ಸೋಂಕಿತರು ಗುಣಮುಖರಾಗಿದ್ದು, ದೇಶದಲ್ಲಿ ಕೊರೋನಾ ಗೆದ್ದವರ ಸಂಖ್ಯೆ ಹೆಚ್ಚಾಗಿದೆ ಎಂದು ಸಚಿವಾಲಯ ತನ್ನ ವರದಿಯಲ್ಲಿ ತಿಳಿಸಿದೆ.
ಭಾರತದಲ್ಲಿ ಸುಮಾರು 5.5 ಲಕ್ಷಕ್ಕೂ ಅಧಿಕ ಸೋಂಕಿತರು ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ. ಆ ಮೂಲಕ ದೇಶ 63.02% ರಷ್ಟು ಚೇತರಿಕೆಯ ಪ್ರಮಾಣವನ್ನು ಕಾಯ್ದುಕೊಂಡಿದೆ ಎಂದು ಸಚಿವಾಲಯ ವರದಿಯಲ್ಲಿ ಮಾಹಿತಿ ನೀಡಿದೆ. ಜೊತೆಗೆ 2.5 ಲಕ್ಷಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳು ಚಿಕಿತ್ಸೆ ಪಡೆಯುತ್ತಿರುವುದಾಗಿಯೂ ಸಚಿವಾಲಯ ತನ್ನ ವರದಿಯಲ್ಲಿ ಮಾಹಿತಿ ನೀಡಿದೆ. ಜೊತೆಗೆ ಇತರ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದಲ್ಲಿ ಕೊರೋನಾ ಸಾವಿನ ಪ್ರಕರಣಗಳು ಕಡಿಮೆ ಎಂದು ಈ ವರದಿಯಲ್ಲಿ ತಿಳಿದು ಬಂದಿದೆ.
ಕಳೆದ 24 ಗಂಟೆಗಳಿಗೆ ಸಂಬಂಧಿಸಿದಂತೆ 18,850 ಮಂದಿ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಆ ಮೂಲಕ 5,53,470 ಕ್ಕೂ ಅಧಿಕ ಮಂದಿ ಪರಿಣಾಮಕಾರಿ ಚಿಕಿತ್ಸೆ ಪಡೆದು ಸೋಂಕಿನಿಂದ ಗುಣಮುಖರಾಗಿದ್ದಾರೆ. ಜೊತೆಗೆ ದೆಹಲಿಯ ಏಮ್ಸ್ ಕೋವಿಡ್-19 ದೂರ ಸಂಪರ್ಕ ಕೇಂದ್ರದ ಮೂಲಕ ಡೆಡಿಕೇಟೆಡ್ ಕೋವಿಡ್ ಆಸ್ಪತ್ರೆಗಳ ಹಸ್ತಾಂತರವನ್ನು ಮುಂದುವರೆಸಿರುವುದಾಗಿಯೂ ಈ ವರದಿಯಲ್ಲಿ ಸಚಿವಾಲಯ ತಿಳಿಸಿದೆ. ದೇಶದಲ್ಲಿ ಕೊರೋನಾ ಸೋಂಕಿಗೆ ನೀಡಲಾಗುತ್ತಿರುವ ಪರಿಣಾಮಕಾರಿ ಚಿಕಿತ್ಸೆಯ ಕಾರಣದಿಂದಾಗಿ ಮರಣ ಪ್ರಮಾಣ 2.64% ಕ್ಕೆ ಇಳಿಕೆಯಾಗಿದೆ ಎಂದೂ ತಿಳಿಸಿದೆ.
ಇನ್ನು ಕಳೆದ 24 ಗಂಟೆಗೆ ಸಂಬಂಧಿಸಿದಂತೆ 2,19,103 ಕೊರೋನಾ ಮಾದರಿಗಳನ್ನು ಪರೀಕ್ಷೆ ನಡೆಸಲಾಗಿದೆ. ದೇಶದಲ್ಲಿ 1200 ಸರ್ಕಾರಿ ಮತ್ತು ಖಾಸಗಿ ಲ್ಯಾಬ್ ಗಳಲ್ಲಿ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದೂ ಸಚಿವಾಲಯ ಮಾಹಿತಿ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.