ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಗಳಿಗೆ ಜುಲೈ 31 ರ ವರೆಗೆ ಮನೆಯಿಂದಲೇ ಕಾರ್ಯ ನಿರ್ವಹಿಸಲು ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸೂಚಿಸಿದೆ.
ಹತ್ತನೇ ತರಗತಿ ವಿದ್ಯಾರ್ಥಿಗಳ ಮೌಲ್ಯಮಾಪನಕ್ಕೆ ನಿಯೋಜಿತವಾದ ಶಿಕ್ಷಕರು ಮತ್ತು ಕೊರೋನಾ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟ ಶಿಕಕ ವರ್ಗದವರನ್ನು ಹೊರತು ಪಡಿಸಿದಂತೆ, ಉಳಿದೆಲ್ಲಾ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಗಳಿಗೆ ಸಂಬಂಧಿಸಿದಂತೆ ಇಲಾಖೆ ಈ ಆದೇಶವನ್ನು ಹೊರಡಿಸಿದೆ. ಜೊತೆಗೆ ಈ ಅವಧಿಯನ್ನು ಕರ್ತವ್ಯದ ಅವಧಿ ಎಂದೇ ಪರಿಗಣಿಸಿ ಕಾರ್ಯ ನಿರ್ವಹಿಸಬೇಕು ಎಂದೂ ಇಲಾಖೆ ತನ್ನ ಮಾರ್ಗಸೂಚಿಯಲ್ಲಿ ಸ್ಪಷ್ಟಪಡಿಸಿದೆ.
ಜೊತೆಗೆ ಅನಿವಾರ್ಯ ಸಂದರ್ಭಗಳಲ್ಲಿ, ತುರ್ತು ಅಗತ್ಯತೆಯುಳ್ಳ ಸಂದರ್ಭಗಳಲ್ಲಿ ಮನೆಯಿಂದಲೇ ಕಾರ್ಯ ನಿರ್ವಹಿಸುವ ಶಿಕ್ಷಕರನ್ನು ಕಛೇರಿಗೆ ಕರೆಸಿಕೊಳ್ಳುವ ಸಾಧ್ಯತೆಗಳೂ ಇದ್ದು, ಆಡಳಿತ ಮಂಡಳಿಗೆ ತಮ್ಮ ದೂರವಾಣಿ ಸಂಖ್ಯೆ, ಇ-ಮೇಲ್ ವಿಳಾಸಗಳನ್ನು ನೀಡುವಂತೆಯೂ ತಿಳಿಸಲಾಗಿದೆ. ಜೊತೆಗೆ ವರ್ಕ್ ಫ್ರಂ ಹೋಂ ಅವಧಿಯಲ್ಲಿ ಅವರು ಬೇರೆಲ್ಲಿಗೂ ತೆರಳದಂತೆಯೂ ಸೂಚನೆ ನೀಡಲಾಗಿದೆ.
ಆನ್ಲೈನ್ ತರಗತಿಯನ್ನು ನಡೆಸುವ ಅನಿವಾರ್ಯತೆ ಇಲಾಖೆಗೆ ಬಂದೊದಗಿದ ಸಂದರ್ಭದಲ್ಲಿ ಶಿಕ್ಷಕರು ಮನೆಯಿಂದಲೇ ತರಗತಿಗಳನ್ನು ನಡೆಸಲು ಸಿದ್ಧರಾಗಿರುವಂತೆಯೂ ಈ ಮಾರ್ಗಸೂಚಿಯಲ್ಲಿ ಇಲಾಖೆ ಮಾಹಿತಿ ನೀಡಿದೆ. ಹಾಗೆಯೇ ಎಲ್ಲಾ ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಆರೋಗ್ಯ ಸೇತು ಆ್ಯಪ್ ಅನ್ನು ಕಡ್ಡಾಯವಾಗಿ ಬಳಕೆ ಮಾಡುವಂತೆಯೂ ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.